ಬೆಂಗಳೂರು: ರಾಜ್ಯದ 16 ಸಾವಿರ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ಗಳಿಗೆ ಇನ್ನು 6 ತಿಂಗಳ ಒಳಗಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಇಂದಿಲ್ಲಿ ಹೇಳಿದ್ದಾರೆ.
ಇದರ ಜತೆಗೆ ಎಲ್ಲಾ ಬಸ್ ನಿಲ್ದಾಣಗಳಲ್ಲಿ ಸಿಸಿಟಿವಿ ಅಳವಡಿಸುವ ಯೋಜನೆಯನ್ನು ಶೀಘ್ರವೇ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ಹೇಳಿದರು.
ಕೆಪಿಸಿಸಿ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಬಜೆಟ್ನಲ್ಲಿ ಮೂಲ ಸೌಕರ್ಯಕ್ಕೆ ಹೆಚ್ಚಿನ ಹಣಕಾಸಿನ ನೆರವು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ ಮಾಡಲಾಗಿದೆ ಎಂದರು.
ರಾಜ್ಯದ ಇನ್ನು 25 ರಿಂದ 30 ತಾಲ್ಲೂಕು ಕೇಂದ್ರಗಳಲ್ಲಿ ಬಸ್ ನಿಲ್ದಾಣ ಮಾಡಿಲ್ಲ ಹಾಗೂ ಹೋಬಳಿ ಕೇಂದ್ರಗಳಲ್ಲಿ 30 ರಿಂದ 40 ಲಕ್ಷ ವೆಚ್ಚದಲ್ಲಿ ಸಣ್ಣ ಸಣ್ಣ ಬಸ್ ನಿಲ್ದಾಣಗಳನ್ನು ನಿರ್ಮಿಸುವ ಉದ್ದೇಶವಿದೆ ಎಂದರು.
ಪ್ರಯಾಣ ದರ ಕಡಿಮೆ ಚಕಾರವಿಲ್ಲ
ಡೀಸೆಲ್ ಬೆಲೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರವನ್ನು ಕಡಿಮೆ ಮಾಡುತ್ತೀರಾ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವ ರಾಮಲಿಂಗಾರೆಡ್ಡಿ, ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದೇ ತಮಿಳುನಾಡಿನಲ್ಲಿ ಅಲ್ಲಿನ ಸಾರಿಗೆ ಸಂಸ್ಥೆ ನೌಕರರಿಗೆ ಸರ್ಕಾರವೇ ಸಂಬಳ ನೀಡುತ್ತಿದೆ. ಇಲ್ಲಿಯೂ ಅದೇ ರೀತಿಯಾದರೆ ಸೌಲಭ್ಯ ಕಲ್ಪಿಸಬಹುದು ಎಂದು ಹೇಳಿದರು.
ಮಾರ್ಕೋಪೋಲೊ ವರದಿ
ಮಾರ್ಕೊಪೋಲೊ ಬಸ್ಗಳ ಖರೀದಿಯಲ್ಲಾಗಿರುವ ಅವ್ಯವಹಾರ ಕುರಿತಂತೆ ಉಮಾಶಂಕರ್ ಅವರು ವಾರದಲ್ಲಿ ವರದಿ ನೀಡಲಿದ್ದು, ಆ ಬಳಿಕ ತಪ್ಪಿತಸ್ಥರು ಯಾರಿದ್ದಾರೆ ಅವರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ ಅವರು, ಬಸ್ ನೀಡಿದವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದರು. ಸುಪ್ರೀಂಕೋರ್ಟ್ನ ಸೂಚನೆಯ ಮೇರೆಗೆ ಹೆಲ್ಮೆಟ್ ಖಡ್ಡಾಯಗೊಳಿಸಲಾಗಿದೆ ಎಂದು ಹೇಳಿದರು.