ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಈಗಿನಿಂದಲೇ ತಯಾರಿ ಆರಂಭಿಸಲು ಮುಂದಾಗಿರುವ ಜೆಡಿಎಸ್, ಬಜೆಟ್ ಅಧಿವೇಶನದ ನಂತರ ರಾಜ್ಯ ಪ್ರವಾಸಕ್ಕೆ ತೀರ್ಮಾನಿಸಿದೆ.
ಇದೇ ತಿಂಗಳ 19ರಂದು ಶಾಸಕರು, ಮಾಜಿ ಶಾಸಕರು, ಜಿಲ್ಲಾ ಅಧ್ಯಕ್ಷರು, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದವರು ಹಾಗೂ ಸೋತವರ ಸಭೆ ಕರೆಯಲಾಗಿದ್ದು,ಅಂದಿನ ಸಭೆಯಲ್ಲಿ ಪಕ್ಷ ಸಂಘಟನೆ ಬಗ್ಗೆ ವಿಸ್ತೃತ ಚರ್ಚೆ ನಡೆಸಿ ಅಧಿವೇಶನ ಮುಗಿಯುತ್ತಲೇ ರಾಜ್ಯ ಪ್ರವಾಸ ಆರಂಭಿಸಲು ನಿರ್ಧರಿಸಲಾಗಿದೆ. ಬಜೆಟ್ ಅಧಿವೇಶನ ಮುಗಿಯುತ್ತಿದ್ದಂತೆ ಶಾಸಕರು ಹಾಗೂ ಮುಖಂಡರ ತಂಡ ರಚಿಸಿಕೊಂಡು ಡಿಸೆಂಬರ್ವರೆಗೂ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ರಾಜ್ಯದ 224 ವಿಧಾನಸಭೆ ಕ್ಷೇತ್ರಗಳಲ್ಲಿ ಒಂದು ಸುತ್ತಿನ ಪ್ರವಾಸ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.
ಆ ಸಂದರ್ಭದಲ್ಲಿ ಆಯಾ ವಿಧಾನಸಭೆ ಕ್ಷೇತ್ರದ ಸ್ಥಿತಿಗತಿ, ಪಕ್ಷದ ಸಾಮರ್ಥ್ಯ, ಚುನಾವಣೆಗೆ ಸ್ಪರ್ಧೆ ಮಾಡಬಯಸುವ ನಾಯಕರು ಹಾಗೂ ಅವರ ಶಕ್ತಿ ಮತ್ತಿತರ ವಿಚಾರಗಳ ಬಗ್ಗೆ ಮಾಹಿತಿ ಕಲೆ ಹಾಕಲಿದ್ದಾರೆ. ಮುಂದಿನ ವರ್ಷದ ಪ್ರಾರಂಭದಲ್ಲಿ ಬೃಹತ್ ಸಮಾವೇಶ ಆಯೋಜಿಸಿ ಆ ನಂತರ ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ನಿರಂತರ ಹೋರಾಟ ನಡೆಸಿ ಜನರ ವಿಶ್ವಾಸ ಗಳಿಸುವ ರೂಪು-ರೇಷೆ ನಿಗದಿಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
-ಉದಯವಾಣಿ