ಬೇಲೂರು, ಮಾ.21- ಸಕಲೇಶಪುರದಿಂದ ಬೇಲೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ಸೊಂದು ಇಂದು ಬೆಳಗ್ಗೆ ಬಿಕ್ಕೋಡು ಹೋಬಳಿಯ ಬೊಮ್ಮಡಿಹಳ್ಳಿ ಬಳಿ ಹಳ್ಳಕ್ಕೆ ಉರುಳಿ ಬಿದ್ದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಇಲ್ಲದೆ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಬೆಳಗ್ಗೆ 8.45ರ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಸುಮಾರು 10 ಅಡಿ ಆಳದ ಹಳ್ಳಕ್ಕೆ ನುಗ್ಗಿದ ಬಸ್ ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ. ಸುಮಾರು 45ಕ್ಕೂ ಹೆಚ್ಚು ಪ್ರಯಾಣಿಕರು ಇದರಲ್ಲಿದ್ದರು. ಅದರಲ್ಲಿ 10 ಮಂದಿಗೆ ಹೆಚ್ಚಿನ ಗಾಯಗಳಾಗಿದ್ದು , ಚಿಕಿತ್ಸೆಗಾಗಿ ಅವರನ್ನು ಹಾಸನ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.
ಸಣ್ಣ ಪುಟ್ಟ ಗಾಯಗಳಾದವರನ್ನು ಬೇಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಬಸ್ನಲ್ಲಿ ಕಾಲೇಜಿನ ವಿದ್ಯಾರ್ಥಿಗಳೇ ಇದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಸ್ಥಳೀಯರ ಜತೆಗೂಡಿ ಗಾಯಾಳುಗಳಿಗೆ ನೆರವಾದರು.