ಬೆಂಗಳೂರು, ಏ.9-ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸಿರುವ ಸಿಐಡಿ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಲು ಸಿದ್ಧತೆ ನಡೆಸಿದೆ. ವರದಿಯಲ್ಲಿ ಪಿಯು ಮಂಡಳಿ ಹಾಗೂ ಅಧಿಕಾರಿಗಳ ನ್ಯೂನ್ಯತೆ ಉಲ್ಲೇಖಿತವಾಗಿದೆ ಎನ್ನಲಾಗಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮಂಡಳಿಯ ಹಿರಿಯ ಅಧಿಕಾರಿಗಳು ಮಹತ್ವದ ಪಾತ್ರ ವಹಿಸಿದ್ದಾರೆ ಎಂಬ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಪಿಯು ಮಂಡಳಿಯಲ್ಲಿ ನಡೆದಿರುವ ಇಂತಹ ಪ್ರಕರಣಗಳ ಬಗ್ಗೆ ಆಮೂಲಾಗ್ರ ತನಿಖೆ ನಡೆಸುತ್ತಿರುವ ಸಿಐಡಿ ವರದಿಯೊಂದನ್ನು ಸಿದ್ಧಪಡಿಸಿದ್ದು, ಅದನ್ನು ಸರ್ಕಾರಕ್ಕೆ ಸಲ್ಲಿಸಲು ಸಿದ್ಧತೆ ನಡೆಸಿದೆ. ಈ ಮೂಲಕ ಪಿಯು ಮಂಡಳಿಯ ಕರ್ಮಕಾಂಡ ಬಯಲಾಗುವ ಸಾಧ್ಯತೆ ಇದೆ.
ರಸಾಯನಶಾಸ್ತ್ರ ವಿಷಯದ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು. ಬುಧವಾರ ಸಿಐಡಿ ಡಿಐಜಿ ಸೋನಿಯಾ ನಾರಂಗ್ ನೇತೃತ್ವದ ತಂಡ ಮಲ್ಲೇಶ್ವರಂ ನಿವಾಸಿ ಅನಿಲ್ ಮತ್ತು ಮತ್ತಿಕೆರೆ ನಿವಾಸಿ ಸತೀಶ್ ಅವರನ್ನು ಬಂಧಿಸಲಾಗಿತ್ತು. ಇದಕ್ಕೂ ಮುನ್ನ ಬಂಧಿತನಾಗಿದ್ದ ಮಂಜುನಾಥ್ ನೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ಈ ಇಬ್ಬರ ವಿಚಾರಣೆಯೂ ನಡೆದಿದೆ.