ಬೆಂಗಳೂರು: ‘ಬಿಜೆಪಿ ಪಕ್ಷಕ್ಕೆ ಸೇರಲು ಯಾರೇ ಬಂದರೂ ಸ್ವಾಗತ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಯಡಿಯೂರಪ್ಪ ಅವರು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ‘ಆಪರೇಷನ್ ಕಮಲ’ ನಡೆಯುತ್ತದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಬಿಎಸ್ವೈ, ‘ಪಕ್ಷಕ್ಕೆ ಸೇರಲು ಯಾರೇ ಬಂದರೂ ಸ್ವಾಗತ. ಆದರೆ, ಯಾರನ್ನು ಸೇರಿಸಿಕೊಳ್ಳಬೇಕೆಂಬ ಬಗ್ಗೆ ಪಕ್ಷದ ನಾಯಕರ ಜತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು’ ಎಂದಿದ್ದಾರೆ.
‘ರಾಜ್ಯದಲ್ಲಿ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಈ ಹೊತ್ತಿನಲ್ಲಿ ಹಲವಾರು ಸವಾಲುಗಳಿವೆ. ಅವನ್ನೆಲ್ಲಾ ಮೆಟ್ಟಿನಿಂತು ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಗುರಿ ನನ್ನದು’ ಎಂದು ಅವರು ಹೇಳಿದ್ದಾರೆ.