ಕಲಬುರಗಿ: ಭೀಮಾ ನದಿ ಪಾತ್ರದ ಅನೇಕ ಹಳ್ಳಿಗಳಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗಿದ್ದು, ನದಿಗೆ ನೀರು ಬಿಡುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಮನವಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ ಬರ ಅಧ್ಯಯನಕ್ಕೆ ತೆರಳುವ ಸಂದರ್ಭ ಮಾರ್ಗದಲ್ಲಿ ಕಟ್ಟಿ ಸಂಘಾವಿ ಸೇತುವೆ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ನಂತರ ಮುಖ್ಯಮಂತ್ರಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಉಜ್ಜೈನಿ ಅಣೆಕಟ್ಟಿನಿಂದ ಭೀಮಾ ನದಿಗೆ ನೀರು ಬಿಡುವ ಕುರಿತಂತೆ ಈಗಾಗಲೇ ಜಲಸಂಪನ್ಮೂಲ ಸಚಿವರು ಮಹಾರಾಷ್ಟ್ರ ಮುಖ್ಯಮಂತ್ರಿಯೊಂದಿಗೆ ಮಾತುಕತೆ ನಡೆಸಿದ್ದಾರೆ. ಈಗ ನಾನೂ ಕೂಡ ಈ ಬಗ್ಗೆ ಅವರಿಗೆ ಮನವಿ ಮಾಡುತ್ತಿದ್ದೇನೆ. ಸದ್ಯದಲ್ಲೇ ಖುದ್ಧಾಗಿ ಫಡ್ನವೀಸ್ ಅವರನ್ನು ಭೇಟಿ ಮಾಡಿ ಕುಡಿಯುವ ನೀರಿಗೆ ಮನವಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.