ಬೆಂಗಳೂರು, ಏ.25- ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು ನಗರದ ಉಪನ್ಯಾಸಕರೊಬ್ಬರನ್ನು ಬಂಧಿಸಲಾಗಿದೆ ಎಂದು ಸಿಐಡಿಯ ಡಿಐಜಿ ಸೋನಿಯಾ ನಾರಂಗ್ ತಿಳಿಸಿದ್ದಾರೆ. ಯಲಹಂಕದ ಖಾಸಗಿ ಪಿಯು ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕ ಸಂತೋಷ್ ಎಂಬುವರನ್ನು ಬಂಧಿಸಲಾಗಿದೆ ಎಂದು ಅವರು ಈ ಸಂಜೆಗೆ ತಿಳಿಸಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಈವರೆಗೂ ಬಂಧಿಸಿರುವವರ ಸಂಖ್ಯೆ 11ಕ್ಕೆ ಏರಿದೆ. ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ಪೊಲೀಸರು ಪ್ರಮುಖ ಆರೋಪಿ ಹಾಗೂ ಇತರೆ ಆರೋಪಿಗಳಿಗಾಗಿಯೂ ತನಿಖೆ ಮುಂದುವರೆಸಿದ್ದಾರೆ. ಇದೀಗ ಬಂಧಿತರಾಗಿರುವ ಉಪನ್ಯಾಸಕ ಸಂತೋಷ್ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಪಾತ್ರ ವಹಿಸಿರುವುದು ತನಿಖೆಯಿಂದ ತಿಳಿದುಬಂದಿದೆ.
ಒಟ್ಟಾರೆ ಸಿಐಡಿ ಪೊಲೀಸರು ಉತ್ತಮ ಕಾರ್ಯ ಮಾಡುತ್ತಿದ್ದು, ಯಾವ ಮೂಲೆಯಲ್ಲಿ ಅಡಗಿ ಕುಳಿತಿದ್ದರೂ ಆರೋಪಿಗಳನ್ನು ಪತ್ತೆ ಹಚ್ಚಲು ತನಿಖೆ ಚುರುಕುಗೊಳಿಸಿದ್ದಾರೆ.