ಕೋಲಾರ,ಏ.25-ರಾಜ್ಯದಲ್ಲಿನ ಬರ ಪರಿಸ್ಥಿತಿ ಎದುರಿಸಲು ಯಾವುದೇ ರೀತಿಯಲ್ಲೂ ಹಣದ ಕೊರತೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಬರಪರಿಸ್ಥಿತಿ ಪರಿಶೀಲನೆಗೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಎದುರಾಗಿರುವ ತೀವ್ರತರದ ಬರಗಾಲದ ಪರಿಸ್ಥಿತಿಗೆ ಯಾವುದೇ ಹಣದ ಕೊರತೆ ಇಲ್ಲ. ಪರಿಸ್ಥಿತಿ ಇನ್ನು ವಿಕೋಪಕ್ಕೆ ಹೋದರೆ ಮತ್ತಷ್ಟು ಹಣವನ್ನು ಬಿಡುಗಡೆ ಮಾಡಲು ಸರ್ಕಾರ ಸಿದ್ದವಿದೆ ಎಂದು ಹೇಳಿದರು.
ಇಂದು ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಬಲ್ಲ , ಕಳ್ಳಿಪುರ, ಹೊನ್ನೇನಹಳ್ಳಿ ಮುಂತಾದ ಗ್ರಾಮಗಳಲ್ಲಿ ಬರಪರಿಸ್ಥಿತಿಯ ಪರಿಶೀಲನೆ ನಡೆಸಲಿದ್ದೇವೆ. ನಂತರ ಯಾವ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ನಿರ್ಧರಿಸಲಿದ್ದೇವೆ ಎಂದು ವಿವರಿಸಿದರು. ಇಬ್ಬರೂ ಸಮರ್ಥರು: ಕೆಪಿಸಿಸಿ ಅಧ್ಯಕ್ಷ ಗಾದಿಯನ್ನು ವಹಿಸಿಕೊಂಡು ನಿಭಾಯಿಸಲು ಕೆ.ಎಚ್.ಮುನಿಯಪ್ಪ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರೂ ಸಮರ್ಥರಾಗಿದ್ದಾರೆ. ಆದರೆ ಯಾರನ್ನು ಹೈಕಮಾಂಡ್ ಸೂಚಿಸುತ್ತದೋ ಅವರು ಅಧ್ಯಕ್ಷರಾಗಲಿದ್ದಾರೆ ಎಂದರು.
ಕೆ.ಎಚ್.ಮುನಿಯಪ್ಪ ಅವರು ಈ ಹುದ್ದೆಯನ್ನು ನಿರ್ವಹಿಸಲು ಶಕ್ತರಾಗಿದ್ದಾರೆ. ಡಿ.ಕೆ.ಶಿವಕುಮಾರ್ ಸಹ ಅರ್ಹರೇ. ಹಾಗಾಗಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು. ಮುಂದಿನ ಎರಡು ವರ್ಷಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದುವರೆಯಲಿದ್ದಾರೆ. ಮುಂದಿನ ಚುನಾವಣೆಯಲ್ಲೂ ಕಾಂಗ್ರೆಸ್ ಅಧಿಕಾರ ಹಿಡಿಯುವ ವಿಶ್ವಾಸ ವ್ಯಕ್ತಪಡಿಸಿದ ಅವರು, ದಲಿತ ಸಿಎಂಗೂ ಅವಕಾಶವಿದೆ ಎಂದು ಹೇಳಿದರು. ಬಿಬಿಎಂಪಿ ಕಸವನ್ನು ಕೆಜಿಎಫ್ನಲ್ಲಿ ಹಾಕುವ ಬಗ್ಗೆ ಕೇಳಿದ ಪ್ರಶ್ನೆಯೊಂದಕ್ಕೆ ಯಾವುದೇ ಕಾರಣಕ್ಕೂ ಕೆಜಿಎಫ್ನಲ್ಲಿ ಕಸ ಹಾಕಲು ಅವಕಾಶ ನೀಡುವುದಿಲ್ಲ ಎಂದು ಪ್ರತಿಕ್ರಿಯಿಸಿದರು.
ಶಾಸಕರಾದ ವರ್ತೂರು ಪ್ರಕಾಶ್, ನಾರಾಯಣಸ್ವಾಮಿ, ಕೊತ್ತೂರು ಮಂಜುನಾಥ್, ಜಿಲ್ಲಾಧಿಕಾರಿ ತ್ರಿಲೋಕ್ಚಂದ್ರ, ಜಿಲ್ಲಾ ರಕ್ಷಣಾಧಿಕಾರಿ ದಿವ್ಯಾ ಗೋಪಿನಾಥ್ ಮತ್ತಿತರರು ಉಪಸ್ಥಿತರಿದ್ದರು.