ಬೆಂಗಳೂರು: ನಾವು ಪ್ರಾಮಾಣಿಕರಾಗಿದ್ದೇವೆ. ಯಾವುದೇ ಭ್ರಷ್ಟಾಚಾರದ ಆರೋಪ ನಮ್ಮ ಮೇಲಿಲ್ಲ. ರಾಜ್ಯದ ಜನತೆ ಯಾವತ್ತೂ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲ್ಲ. ಮುಂದೆಯೂ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಶನಿವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮದು ಅಂಜದ, ಹೆದರದ ಸರ್ಕಾರ. ನಾವು ಯಾವುದೇ ಭ್ರಷ್ಟಾಚಾರ ಎಸಗಿಲ್ಲ. ನಮ್ಮ ಮೇಲೆ ರಾಜಕೀಯ ಪ್ರೇರಿತವಾಗಿ ಬಿಜೆಪಿಯವರು ಭ್ರಷ್ಟಾಚಾರದ ಆರೋಪ ಹೊರಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಶಾಸಕರು, ಸಚಿವರು ಜೈಲಿಗೆ ಹೋಗಿಲ್ಲ, ಬೇಲ್ ಪಡೆದಿಲ್ಲ ಎಂದು ತಿರುಗೇಟು ನೀಡಿದರು.
ಜಗದೀಶ್ ಶೆಟ್ಟರ್ ಅವರು ನಮ್ಮ ಸರ್ಕಾರಕ್ಕೆ 3 ಅಂಕ ಕೊಟ್ಟಿದ್ದಾರೆ. ಯಾವ ಆಧಾರದ ಮೇಲೆ ಕೊಟ್ಟರೋ ಗೊತ್ತಿಲ್ಲ ಎಂದರು. ಈ ಸಂದರ್ಭದಲ್ಲಿ 3 ವರ್ಷದ ರಾಜ್ಯ ಸರ್ಕಾರದ ಸಾಧನೆ ಬಗ್ಗೆ ಕಿರುಹೊತ್ತಗೆ ಬಿಡುಗಡೆ ಮಾಡಿದರು. ಕಾಂಗ್ರೆಸ್ ಪಕ್ಷದ ಕೊನೆಯ ಮುಖ್ಯಮಂತ್ರಿ ನಾನು ಎಂದು ಹೇಳುತ್ತಿದ್ದಾರೆ..ಇದು ಬಿಎಸ್ ಯಡಿಯೂರಪ್ಪನವರ ಹತಾಶೆಯ ಹೇಳಿಕೆ ಎಂದು ವ್ಯಂಗ್ಯವಾಡಿದರು.
-ಉದಯವಾಣಿ