ಮೈಸೂರು: ಸಂಪುಟ ವಿಸ್ತರಣೆ ಮಾಡುವುದು ಅಥವಾ ಬಿಡುವುದು ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟಿದ್ದು ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದರು.
ಇಂದು ಬೆಳಗ್ಗೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿದ್ದ ಗೃಹ ಸಚಿವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಸಂಪುಟ ವಿಸ್ತರಣೆಯ ಸಂಬಂಧ ನಮ್ಮ ಪಾತ್ರವೇನು ಇಲ್ಲ. ಮುಖ್ಯಮಂತ್ರಿಗಳು ಹೈಕಮಾಂಡ್ ಜೊತೆ ಚರ್ಚಿಸಿ ಸ್ವಯಂ ನಿರ್ಧಾರ ತೆಗೆದುಕೊಳ್ಳುವರು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಯಾರನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಿಸಬೇಕು ಎಂಬ ಬಗ್ಗೆ ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತಾರೆ. ದಲಿತರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆನ್ನುವ ವಿಚಾರಕ್ಕೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
ರಾಜ್ಯದಲ್ಲಿ 136 ತಾಲ್ಲೂಕುಗಳಲ್ಲಿ ಭೀಕರ ಬರಗಾಲವಿದ್ದು, ರಾಜ್ಯಸರ್ಕಾರ ಯಶಸ್ವಿಯಾಗಿ ಸಮಸ್ಯೆಯನ್ನು ನಿಬಾಯಿಸಿದೆ. ಮುಂಗಾರು ಇನ್ನೊಂದು ವಾರದಲ್ಲಿ ಆರಂಭವಾಗಲಿದ್ದು ಅಷ್ಟರೊಳಗೆ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಜಾನುವಾರುಗಳಿಗೆ ಮೇವು ನೀರು ಸಮಸ್ಯೆಯಾಗದಂತೆ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.