ಬೆಂಗಳೂರು, ಜೂ ೬- ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಪಾಲಿಕೆ ಶಾಲಾ, ಕಾಲೇಜಿನ ವಿದ್ಯಾರ್ಥಿಗಳು ಶೇ ೮೫ಕ್ಕಿಂತ ಹೆಚ್ಚು ಅಂಕ ಗಳಿಸಿ ಪಾಲಿಕೆಗೆ ಹಿರಿಮೆ ತಂದಿರುವುದು ಸಂತೋಷ ವಿಷಯ ಎಂದು ಬಿಬಿಎಂಪಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ನಾಗಭೂಷಣ್ ಅವರು ಹೇಳಿದರು.
ಕೋದಂಡರಾಮಪುರದ ಪಾಲಿಕೆ ಶಾಲಾ ಆವರಣದಲ್ಲಿಂದು ನಡೆದ ಪಠ್ಯ ಪುಸ್ತಕ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪಾಲಿಕೆ ಶಾಲೆಯ ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕಾಗಿ ಹಾಗೂ ಉತ್ತಮ ಭವಿಷ್ಯಕ್ಕಾಗಿ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ನೀಡಲಾಗುವ ಸಮವಸ್ತ್ರ, ಶೂ, ಪಠ್ಯ ಪುಸ್ತಕ ಮತ್ತಿತರ ವಸ್ತುಗಳನ್ನು ನಿಗದಿತ ಅವಧಿಯಲ್ಲಿ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಮೂಲಸೌಕರ್ಯಗಳ ಕೊರತೆಯಿಂದಾಗಿ ಬಿಬಿಎಂಪಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ. ಹೀಗಾಗಿ ಬಿಬಿಎಂಪಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವ ಸಲುವಾಗಿ ೫ ಅಂಶಗಳ ಕ್ರಿಯಾಯೋಜನೆ ರೂಪಿಸಲಾಗಿದೆ. ರಾಜ್ಯದೆಲ್ಲೆಡೆ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೊರತೆಯಿದೆ. ಇದೇ ಪರಿಸ್ಥಿತಿ ಬಿಬಿಎಂಪಿ ಶಾಲೆಗಳಲ್ಲೂ ಇದೆ. ಈ ಸಮಸ್ಯೆ ನಿವಾರಣೆಗೆ ಬಿಬಿಎಂಪಿ ಅಧಿಕಾರಿಗಳು ಮುಂದಾಗಿದ್ದಾರೆ. ಹಾಗೂ ೮ರಿಂದ ೧೦ನೇ ತರಗತಿಗಳ ವರೆಗೂ ಸಂಪೂರ್ಣ ಉಚಿತ ಶಿಕ್ಷಣ ನೀಡುವುದರೊಂದಿಗೆ ೧೦ನೇ ತರಗತಿ ಪರೀಕ್ಷೆಯಲ್ಲಿ ಶೇ ೮೫ ಅಂಕ ಪಡೆದ ವಿದ್ಯಾರ್ಥಿಗಳಿಗೆ ೧೦ ಸಾವಿರ ಹಾಗೂ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ೧೫ ಸಾವಿರ ಪ್ರೋತ್ಸಾಹ ಧನ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.
Comments are closed.