ಬೆಂಗಳೂರು, ಜೂ.7- ವಿಧಾನಸಭೆಯಿಂದ ರಾಜ್ಯಸಭೆ ಹಾಗೂ ವಿಧಾನ ಪರಿಷತ್ಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡುವುದಾಗಿ ಬಹಿರಂಗ ಹೇಳಿಕೆ ನೀಡಿದ್ದ ಶಾಸಕ ಜಮೀರ್ ಅಹಮ್ಮದ್ ಖಾನ್ಗೆ ಜೆಡಿಎಸ್ ಶೋಕಾಸ್ ನೋಟಿಸ್ ನೀಡಿದೆ.
ಮೂರು ದಿನದೊಳಗೆ ಉತ್ತರ ನೀಡುವಂತೆ ಶೋಕಾಸ್ ನೋಟಿಸ್ನಲ್ಲಿ ಸೂಚಿಸಲಾಗಿದೆ. ಒಂದು ವೇಳೆ ಸೂಕ್ತ ಸಮಜಾಯಿಷಿ ನೀಡದಿದ್ದರೆ ಪಕ್ಷಾಂತರ ನಿಷೇಧ ಕಾನೂನಿನಡಿ ಕ್ರಮ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆ ಆಧಾರದ ಮೇಲೆ ಸದಸ್ಯತ್ವ ರದ್ದತಿಗೆ ವಿಧಾನಸಭಾ ಸಭಾಧ್ಯಕ್ಷರಿಗೂ ಪತ್ರ ಬರೆಯುವ ಸಾಧ್ಯತೆ ಇದೆ. ಜನತಾದಳದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಜಮೀರ್, ಪಕ್ಷದ ಸಿದ್ಧಾಂತಗಳಿಗೆ ವಿರುದ್ಧವಾಗಿ ಪತ್ರಿಕಾ ಹೇಳಿಕೆ ನೀಡಿದ್ದಾರೆ. ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯಾಧ್ಯಕ್ಷರ ವಿರುದ್ಧ ಹೇಳಿಕೆ ನೀಡಿರುವುದು ಪಕ್ಷದ ಶಿಸ್ತಿನ ಉಲ್ಲಂಘನೆಯಾಗಿದೆ.
ಹೇಳಿಕೆಗಳು ಪಕ್ಷಕ್ಕೆ ಹಾಗೂ ಪಕ್ಷದ ನಾಯಕರಿಗೆ ತೀರಾ ಮುಜುಗರ ಉಂಟುಮಾಡಿದ್ದು ಪಕ್ಷ ವಿರೋಧಿ ಚಟುವಟಿಕೆಯಾಗಿದೆ ಎಂದು ಪರಿಗಣಿಸಲಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೋಟಿಸ್ನಲ್ಲಿ ಸೂಚಿಸಿದ್ದಾರೆ.
Comments are closed.