
ಬೆಂಗಳೂರು: ಕಾವೇರಿ ನೀರು ಹಂಚಿಕೆ ಮತ್ತು ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆ ನಡೆದು ಬರುತ್ತಿದೆ. ಬೆಂಗಳೂರು ನಗರದಲ್ಲಿ ಪ್ರತಿಭಟನೆಗಳು ಕಾವೇರಿದ್ದು ನಗರದಾದ್ಯಂತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಬೆಂಗಳೂರಿನ ಕೆಲವು ಸೂಕ್ಷ್ಮ ಪ್ರದೇಶಗಳಲ್ಲಿ 144 ಸೆಕ್ಷನ್ ಜಾರಿ ಮಾಡಿ ಬೆಂಗಳೂರು ನಗರ ಪೊಲೀಸ್ ಆಯಕ್ತ ಎನ್. ಎಸ್. ಮೆಘರಿಕ್ ಆದೇಶ ಹೊರಡಿಸಿದ್ದಾರೆ.

ಅದೇ ವೇಳೆ ನಗರದ ಕೆಲವು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಗರದಲ್ಲಿ ಪ್ರತಿಭಟನೆ ತೀವ್ರವಾಗುತ್ತಿದ್ದಂತೆ ಮುಂಜಾಗ್ರತಾ ದೃಷ್ಟಿಯಿಂದ ನಮ್ಮ ಮೆಟ್ರೋ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ, ವ್ಯಾಪಾರಿಗಳು ಸ್ವಯಂ ಪ್ರೇರಿತರಾಗಿ ಅಂಗಡಿಗಳನ್ನು ಮುಚ್ಚಿದ್ದಾರೆ.
ಒಂದೆಡೆ ಸುಪ್ರೀಂಕೋರ್ಟ್ ತೀರ್ಪಿನಿಂದ ಕಾವೇರಿ ಜಲ ವಿವಾದದಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯವಾಗಿರುವುದರಿಂದ ಜನ ಬೇಸತ್ತಿದ್ದರೆ, ಮತ್ತೊಂದೆಡೆ ವಿನಾಕಾರಣ ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ಮಾಡಿ ತಮಿಳಿಗರು ಅಟ್ಟಹಾಸ ಮೆರೆದಿದ್ದರಿಂದ ಕನ್ನಡಿಗರು ಕೆರಳಿದ್ದಾರೆ.
ರಾಜಧಾನಿ ಬೆಂಗಳೂರು, ಮೈಸೂರು ಹೊತ್ತಿ ಉರಿದಿದೆ. ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆದ ಘಟನೆ ಖಂಡಿಸಿ ಭಾರೀ ಪ್ರತಿಭಟನೆ, ಕಲ್ಲುತೂರಾಟ, ಬಸ್, ಲಾರಿಗಳಿಗೆ ಬೆಂಕಿ ಇಟ್ಟ ಘಟನೆಗಳು ನಡೆದಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಮಿಳುನಾಡಿಗೆ ಹೋಗುವ ಮತ್ತು ಅಲ್ಲಿಂದ ಬರುವ ಬಸ್ಗಳ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿ ಹಲವು ಬಸ್ಗಳನ್ನು ಜಖಂಗೊಳಿಸಿದ್ದಾರೆ.

ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಯೋಗಿಸಿದ್ದಾರೆ. ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಶಾಲೆಯಿಂದ ಮಕ್ಕಳನ್ನು ಸುರಕ್ಷಿತವಾಗಿ ಮನೆಗೆ ಕರೆದೊಯ್ಯಲು ಪೋಷಕರು ಹರಸಾಹಸ ಪಡುತ್ತಿದ್ದಾರೆ. ಕೆ.ಆರ್.ಮಾರುಕಟ್ಟೆ, ಮೆಜೆಸ್ಟಿಕ್, ಯಶವಂತಪುರ, ಎಪಿಎಂಸಿ ಸೇರಿದಂತೆ ಹಲವೆಡೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಮೈಸೂರಿನಲ್ಲೂ ತಮಿಳುನಾಡಿನಿಂದ ಬರುತ್ತಿದ್ದ ವಾಹನಗಳ ಮೇಲೆ ಕಲ್ಲು ತೂರಲು ಯತ್ನಿಸಿ ಪ್ರತಿಭಟನೆ ತೀವ್ರಗೊಂಡ ಕಾರಣ ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿಪ್ರಹಾರ ನಡೆಸಿದ್ದಾರೆ.
ಶಾಂತಿ ಕಾಪಾಡುವಂತೆ ಬೆಂಗಳೂರು ಹಾಗೂ ಮೈಸೂರಿನ ಹಿರಿಯ ಪೊ ಲೀಸ್ ಅಧಿಕಾರಿಗಳು ಮನವಿ ಮಾಡಿದ್ದಾರೆ. ಮಂಡ್ಯದಲ್ಲಿ ನಿವೃತ್ತ ನ್ಯಾಯಾಧೀಶರ ನಿವಾಸದ ಮೇಲೆ ಕಲ್ಲು ತೂರಾಟ ಮಾಡಲಾಗಿದೆ.

ಚಾಮರಾಜನಗರ, ಮಂಡ್ಯ, ಚಿತ್ರದುರ್ಗ, ಬೆಳಗಾವಿ, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಬಹುತೇಕ ಕಡೆ ಪರಿಸ್ಥಿತಿ ಬಿಗಡಾಯಿಸಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಕೇಂದ್ರದಿಂದ ಹೆಚ್ಚಿನ ಪೊ ಲೀಸ್ ಪಡೆ ಕರೆಸಿಕೊಳ್ಳಲು ನಿಯಂತ್ರಿಸಲಾಗಿದೆ. ಪೊಲೀಸ್ ಹಿರಿಯ ಅಧಿಕಾರಿಗಳು, ಗೃಹ ಸಚಿವರು ತುರ್ತು ಸಭೆ ನಡೆಸಿ ಶಾಂತಿ ಸುವ್ಯವಸ್ಥೆ ಬಗ್ಗೆ ಚರ್ಚಿಸಿದ್ದಾರೆ. ಎರಡೂ ರಾಜ್ಯಗಳವರು ಸೌಹಾರ್ದ ಕಾಪಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಶಾಲೆಗಳಿಗೆ ರಜೆ :
ಕಾವೇರಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯ ತಿದ್ದುಪಡಿ ಆಜ್ಞೆಯನ್ನು ಹೊರಡಿಸಿರುವುದು, ಬೆಂಕಿಗೆ ತುಪ್ಪ ಸುರಿದಂತಾಗಿದೆ. ಅಲ್ಲದೆ, ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ, ವಾಹನಗಳ ಮೇಲೆ ಹಲ್ಲೆ ನಡೆಸುತ್ತಿರುವುದು, ಇದಕ್ಕೆ ಪ್ರತಿಯಾಗಿ ಬೆಂಗಳೂರು, ಮೈಸೂರು ಸೇರಿದಂತೆ ತಮಿಳಿಗರ ಮೇಲೆ ಪ್ರತಿಹಲ್ಲೆ ನಡೆಯುತ್ತಿರುವುದು ಪರಿಸ್ಥಿತಿ ವಿಕೋಪಕ್ಕೆ ಹೋಗುವಂತೆ ಮಾಡಿದೆ. ಪರಿಸ್ಥಿತಿ ಕೈಮೀರುತ್ತಿರುವ ಸೂಚನೆ ಸಿಗುತ್ತಿದ್ದಂತೆ, ಬೆಂಗಳೂರಿನಲ್ಲಿರುವ ಕೆಲ ಶಾಲೆಗಳು ಹಠಾತ್ತಾಗಿ ತರಗತಿಗಳನ್ನು ಸ್ಥಗಿತಗೊಳಿಸಿ ಮಕ್ಕಳನ್ನು ಕೂಡಲೆ ಮನೆಗೆ ಕರೆದುಕೊಂಡು ಹೋಗಬೇಕಾಗಿ ಪಾಲಕರಿಗೆ ಸಂದೇಶಗಳನ್ನು ರವಾನಿಸುತ್ತಿವೆ.

ನಮ್ಮ ಮೆಟ್ರೋ ಸಂಚಾರ ಬಂದ್ : ಮದ್ಯಂತರ ಅರ್ಜಿ ವಿಚಾರಣೆಯಲ್ಲೂ ಕರ್ನಾಟಕಕ್ಕೆ ಹಿನ್ನಡೆಯಾದ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಪ್ರತಿಭಟನಾಕಾರರ ಆಕ್ರೋಶ ಭುಗಿಲೆದ್ದ ಪರಿಣಾಮ, ಮುಂಜಾಕ್ರತಾ ಕ್ರಮವಾಗಿ ನಮ್ಮ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಸುಪ್ರೀಂ ಕೋರ್ಟ್ ನಲ್ಲಿ ಮಧ್ಯಂತರ ಅರ್ಜಿ ವಿಚಾರಣೆ ತೀರ್ಪು ಹೊರ ಬೀಳುತ್ತಿದ್ದಂತೆಯೇ ಬೆಂಗಳೂರಿನಲ್ಲಿ ಕನ್ನಡಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಬೆಂಗಳೂರಿನ ಹಲವೆಡೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ನಮ್ಮ ಮೆಟ್ರೋ ರೈಲು ಸಂಚಾರವನ್ನು ಸ್ಥಗಿತಗೊಳಿಸುವಂತೆ ಬಿಎಂಆರ್ ಸಿಎಲ್ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಬೆಳಗ್ಗೆ 10 ಗಂಟೆಯಿಂದಲೇ ನಮ್ಮ ಮೆಟ್ರೋ ರೈಲು ಸಂಚಾರ ಸ್ಥಗಿತಗೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇದೇ ವೇಳೆ ಬೆಂಗಳೂರಿನ ಎಲ್ಲ ಮೆಟ್ರೋ ನಿಲ್ದಾಣಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಅರೆ ಸೇನಾಪಡೆಗಳನ್ನು ನಿಯೋಜಿಸುವಂತೆ ಅಧಿಕಾರಿಗಳು ಸರ್ಕಾರವನ್ನು ಕೋರಿದ್ದಾರೆ ಎಂದು ತಿಳಿದುಬಂದಿದೆ.

ಪಾಂಡವಪುರದಲ್ಲಿ ತಮಿಳರಿಗೆ ಸೇರಿದ ಅಂಗಡಿ ಮೇಲೆ ದಾಳಿ
ಮಂಡ್ಯ, ಸೆಪ್ಟೆಂಬರ್ 12 : ಕಾವೇರಿ ನೀರಿನ ವಿಚಾರವಾಗಿ ಬೂದಿ ಮುಚ್ಚಿದ ಕೆಂಡಂತಿದ್ದ ಮಂಡ್ಯ ಜಿಲ್ಲಾದ್ಯಂತ ಸೋಮವಾರ ಪ್ರತಿಭಟನೆಗಳ ಕಾವು ಹೆಚ್ಚಾಗಿದೆ. ಸುಪ್ರೀಂ ಕೋರ್ಟಿನಿಂದ ತಿದ್ದುಪಡಿ ಆಜ್ಞೆ ಹೊರಬೀಳುತ್ತಿದ್ದಂತೆ ಪ್ರತಿಭಟನೆ ತೀವ್ರಗೊಳ್ಳುತ್ತಿದೆ. ತಮಿಳುನಾಡಿನಲ್ಲಿ ಕರ್ನಾಟಕ ವಾಹನಗಳು ಹಾಗೂ ಕನ್ನಡಿಗರ ಹೋಟೆಲ್ಗಳ ಮೇಲೆ ದಾಳಿ ಮಾಡಿ ಹಾನಿ ಮಾಡಿರುವ ಹಿನ್ನೆಲೆಯಲ್ಲಿ ಪಾಂಡವಪುರ ಪಟ್ಟಣದಲ್ಲಿ ತಮಿಳಿಗರಿಗೆ ಸೇರಿದ ಅಂಗಡಿಗಳ ಮೇಲೆ ದಾಳಿ ಮಾಡಲಾಗಿದೆ. ಕೈಗೆ ಸಿಕ್ಕ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದು, ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ತಹಬದಿಗೆ ತಂದಿದ್ದಾರೆ. ಪಟ್ಟಣದಾದ್ಯಂತ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ.
ಬೈಕ್ ರ್ಯಾಲಿ : ಕೆ.ಆರ್.ಎಸ್.ನ 500 ಮೀ. ಸುತ್ತ ನಿಷೇಧಾಜ್ಞೆ ಹೊರಡಿಸಿದ್ದರೂ ಜಿಪಂ ಸದಸ್ಯ ಸಿ.ಅಶೋಕ್ ನೇತೃತ್ವದಲ್ಲಿ ನೂರಾರು ಜೆಡಿಎಸ್ ಕಾರ್ಯಕರ್ತರು ಪಾಂಡವಪುರದಿಂದ ಕೆ.ಆರ್.ಎಸ್. ವರೆಗೆ ಬೈಕ್ ಜಾಥಾ ಹೊರಟಿದ್ದಾರೆ. ಮಂಡ್ಯ ನಗರದಲ್ಲಿ ಪಿ.ಇ.ಎಸ್. ಕಾಲೇಜು ಸೇರಿದಂತೆ ಇನ್ನಿತರ ಕಾಲೇಜುಗಳ ವಿದ್ಯಾರ್ಥಿಗಳು ಜೆ.ಸಿ.ವೃತ್ತದಲ್ಲಿ ಜಮಾಯಿಸಿ ಸುಪ್ರೀಂ ಕೋರ್ಟ್ನ ನಿರ್ದೇಶನ ಹಾಗೂ ತಮಿಳುನಾಡಿನ ಕ್ರಮವನ್ನು ಖಂಡಿಸಿ, ಆಕ್ರೋಶ ವ್ಯಕ್ತಪಡಿಸಿದರು. ನಂತರ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಧರಣಿಯಲ್ಲಿ ಪಾಲ್ಗೊಂಡು ನಾವು ನಿಮ್ಮ ಜೊತೆ ಇದ್ದೇವೆ ಎಂದು ಬೆಂಬಲ ಸೂಚಿಸಿದರು.
Comments are closed.