
ಬೆಂಗಳೂರು: ಕಾವೇರಿ ಬಿಕ್ಕಟ್ಟಿನ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳಲು ಶುಕ್ರವಾರ ಬೆಳಗ್ಗೆ ಕರೆದಿರುವ ವಿಶೇಷ ಅಧಿವೇಶನದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಬೆಳಗ್ಗೆ ರಾಜಭವನಕ್ಕೆ ಆಗಮಿಸಿ, ರಾಜ್ಯಪಾಲರ ಜೊತೆ ಚರ್ಚೆ ನಡೆಸಿದರು, ಅಲ್ಲದೇ ರಾಜ್ಯಪಾಲ ವಜೂಭಾಯ್ ವಾಲಾ ಅವರು ವಿಶೇಷ ಅಧಿವೇಶನ ನಡೆಸಲು ಅನುಮತಿ ನೀಡಿದ್ದಾರೆ.
ಇಂದು ಬೆಳಗ್ಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿ ಸಿಎಂ, ಕಾವೇರಿ ಬಿಕ್ಕಟ್ಟಿನ ಬಗ್ಗೆ ಚರ್ಚಿಸಿ, ಮುಂದಿನ ನಿರ್ಧಾರ ತೆಗೆದುಕೊಳ್ಳಲು ಶುಕ್ರವಾರ ವಿಶೇಷ ಅಧಿವೇಶನ ಕರೆಯುವಂತೆ ಮನವಿ ಮಾಡಿದ್ದಾರೆ.
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸೇರಿದಂತೆ ನಿನ್ನೆ ನಡೆದ ಸರ್ವ ಪಕ್ಷ ಸಭೆಯಲ್ಲಿ ಭಾಗವಹಿಸಿದ್ದ ಹಲವು ನಾಯಕರು ತಮಿಳುನಾಡಿಗೆ ನೀರು ಬಿಡದಂತೆ ಮತ್ತು ಈ ಸಂಬಂಧ ಚರ್ಚಿಸಲು ವಿಶೇಷ ಅಧಿವೇಶನ ಕರೆಯುವಂತೆ ಸರ್ಕಾರಕ್ಕೆ ಸಲಹೆ ನೀಡಿರುವುದಾಗಿ ಸಿಎಂ ರಾಜ್ಯಪಾಲರಿಗೆ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನಿತ್ಯ 6 ಸಾವಿರ ಕ್ಯೂಸೆಕ್ ನಂತೆ ಒಟ್ಟು ಏಳು ದಿನ ತಮಿಳುನಾಡಿಗೆ ನೀರುಹರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ಆದರೆ ಈ ಆದೇಶ ಪಾಲಿಸಲು ಸಾಧ್ಯವಾಗದ ಸ್ಥಿತಿಯಲ್ಲಿದ್ದ ರಾಜ್ಯ ಸರ್ಕಾರ ಮುಂದೆ ಕೈಗೊಳ್ಳಬೇಕಾದ ನಿರ್ಧಾರಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಹಾಗೂ ಸರ್ವಪಕ್ಷ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮವಾಗಿ ನೀರು ಬಿಡದಿರಲು ನಿರ್ಧರಿಸಿದೆ.
Comments are closed.