ಬೆಳಗಾವಿ: ಸಚಿವ ತನ್ವೀರ್ ತಪ್ಪು ಮಾಡಿದ್ದರೆ ಸಮರ್ಥಿಸಿಕೊಳ್ಳುವುದಿಲ್ಲ. ಸತ್ಯ ಮತ್ತು ಅಸತ್ಯ ತಿಳಿದುಕೊಂಡು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಇಲ್ಲಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿಯವರಾಗಲಿ ಮತ್ತೊಬ್ಬರಾಗಲಿ ತಪ್ಪು ಯಾರು ಮಾಡಿದರೂ ತಪ್ಪೇ ಎಂದರು.
ತನ್ವೀರ್ ಸೇಠ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ. ಅವರು ರಾಯಚೂರಿನಲ್ಲಿದ್ದು ನಾಳೆ ಬಂದು ವಿವರಣೆ ನೀಡುವುದಾಗಿ ಹೇಳಿದ್ದಾರೆ. ಮೊಬೈಲ್ ನಲ್ಲಿ ಯಾವುದೇ ಅಶ್ಲೀಲ ದೃಶ್ಯಗಳನ್ನು ನೋಡುತ್ತಿರಲಿಲ್ಲ. ವಾಟ್ಸಾಪ್ ನಲ್ಲಿ ಬಂದಿದ್ದ ಸಂದೇಶಗಳನ್ನು ಸ್ಕ್ರೋಲ್ ಮಾಡುತ್ತಿದ್ದುದಾಗಿ ತಿಳಿಸಿದ್ದಾರೆ ಎಂದರು.
ಯಾವುದೇ ತನಿಖೆಗೂ ಸಿದ್ಧ ಎಂದು ಸಚಿವರು ತಮಗೆ ಹೇಳಿದ್ದಾರೆ ಎಂದು ಸಿಎಂ ತಿಳಿಸಿದರು.
ರಾಜ್ಯದ ಬರಪೀಡಿತ ಜಿಲ್ಲೆಗಳಲ್ಲಿ ಇಂದಿನಿಂದ ಪ್ರವಾಸ ಆರಂಭಿಸಿದ್ದೇನೆ. ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಮತ್ತು ಕೂಲಿ ಕಾರ್ಮಿಕರ ಉದ್ಯೋಗಕ್ಕೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು. ಬರ ಪರಿಹಾರ ಕಾಮಗಾರಿಗಳಿಗೆ ಹೆಚ್ವಿನ ನೆರವು ಕೋರಿ ಕೇಂದ್ರಕ್ಕೆ ಈಗಾಗಲೇ ಮನವಿ ಸಲ್ಲಿಸಲಾಗಿದೆ.
ಬೆಳಗಾವಿ ಮಹಾನಗರ ಪಾಲಿಕೆ ವಿರುದ್ಧ ಕೈಗೊಳ್ಳಬಹುದಾದ ಕ್ರಮ ಕುರಿತು ಕಾನೂನು ಇಲಾಖೆ ಅಭಿಪ್ರಾಯ ಕೇಳಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರವಾಗಿ ಸಿಎಂ ತಿಳಿಸಿದರು.
ಇದಕ್ಕೂ ಮುನ್ನ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಮುಖ್ಯಮಂತ್ರಿ ಗಳನ್ನು ಸಚಿವರಾದ ರಮೇಶ್ ಜಾರಕಿಹೊಳಿ, ಶಾಸಕರಾದ ಸತೀಶ್ ಜಾರಕಿಹೊಳಿ, ಅಶೋಕ್ ಪಟ್ಟಣ, ಫಿರೋಜ್ ಸೇಠ್, ಗಣೇಶ್ ಹುಕ್ಕೇರಿ, ಸಂಸದ ಪ್ರಕಾಶ್ ಹುಕ್ಕೇರಿ, ಜಿಲ್ಲಾಧಿಕಾರಿ, ಎಸ್ಪಿ ಮತ್ತಿತರರು ಬರ ಮಾಡಿಕೊಂಡರು.
Comments are closed.