ಕರ್ನಾಟಕ

ಮೈತ್ರಿ ಮಾಡಿಕೊಳ್ಳುವ ಅಗತ್ಯವೇ ಇಲ್ಲ: ಎಚ್‌.ಡಿ.ಕುಮಾರಸ್ವಾಮಿ

Pinterest LinkedIn Tumblr


ಧಾರವಾಡ: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಸ್ವಂತ ಬಲದಿಂದ ಅ
ಧಿಕಾರದ ಚುಕ್ಕಾಣಿ ಹಿಡಿಯಲಿದೆ
ಎಂದು ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ಕವಿ ಡಾ. ಚೆನ್ನವೀರ ಕಣವಿ ಅವರ ಮನೆಗೆ ಭೇಟಿ ನೀಡಿದ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ನೆನಪಿನಲ್ಲಿ ನೀಡುವ ಸಾಹಿತ್ಯ ಬಂಗಾರ ಪ್ರಶಸ್ತಿ ಪ್ರದಾನ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದರು.
“ಈಗಾಗಲೇ ಜೆಡಿಎಸ್ ಮೊದಲ ಹಂತದಲ್ಲಿ 151 ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕೆಲವರಿಗೆ ಅಸಮಾಧಾನವಾಗಿರುವುದು ಸಹಜ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲವನ್ನೂ ಸರಿಪಡಿಸಲಾಗುವುದು” ಎಂದರು.
ಈ ಬಾರಿ ಮೈತ್ರಿಯಾಗುವ ಸಾಧ್ಯತೆ ಇದೆಯೇ ಎಂದು ಕೇಳಿದ ಪ್ರಶ್ನೆಗೆ “ನಾವು ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಯಾರಿಗೂ ಕಾಯುವ ಅವಶ್ಯಕತೆಯೂ ನಮಗಿಲ್ಲ. ಅದಕ್ಕಾಗಿಯೇ ನಾವು ನಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದೇವೆ. ಕೆಲ ಸಣ್ಣ ಪುಟ್ಟ ಬದಲಾವಣೆ ಮಾಡಿ ಇನ್ನುಳಿದ ಕ್ಷೇತ್ರಗಳಿಗೂ ಆದಷ್ಟು ಬೇಗ ಪಟ್ಟಿ ಬಿಡುಗಡೆಗೊಳಿಸಲಾಗುವುದು” ಎಂದು ಕುಮಾರಸ್ವಾಮಿ ಹೇಳಿದರು.

ಪ್ರಜ್ವಲ್ ರೇವಣ್ಣಗೆ ಟಿಕೆಟ್ ನೀಡುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಕುಟುಂಬದಿಂದ ಕೇವಲ ಇಬ್ಬರಿಗೆ ಮಾತ್ರ ಟಿಕೆಟ್ ನೀಡಲಾಗುವುದು ಎಂದು ಪುನುರುಚ್ಛರಿಸಿದರು.

ಶಾಸಕರಾದ ಮಧು ಬಂಗಾರಪ್ಪ, ಎನ್.ಹೆಚ್. ಕೋನರಡ್ಡಿ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸೇರಿದಂತೆ ಜೆಡಿಎಸ್ ಪಕ್ಷದ ಮುಖಂಡರು ಈ ಸಂದರ್ಭದಲ್ಲಿದ್ದರು.

Comments are closed.