ಶೃಂಗೇರಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಶಾರದಾಂಬೆಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಸಂಪ್ರದಾಯಿಕ ಧಿರಿಸಾದ ಪಂಚೆ ಮತ್ತು ಶಲ್ಯೆ ಉಟ್ಟು ದೇಗುಲ ಭೇಟಿ ಮಾಡಿರುವುದು ವಿಶೇಷವಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಯಿಂದ ಹೆಲಿಕ್ಯಾಪ್ಟರ್ನಲ್ಲಿ ಶೃಂಗೇರಿಗೆ ಆಗಮಿಸಿದ ರಾಹುಲ್ ಗಾಂಧಿ ಶಾರದಾಂಬೆ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಅವರೊಂದಿಗೆ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಸೇರಿದಂತೆ ಪ್ರಮುಖ ನಾಯಕರು ಹಾಜರಿದ್ದರು.
ಶೃಂಗೇರಿ ಮಠದ ಶ್ರೀ ಜಗದ್ಗುರು ಭಾರತೀ ತೀರ್ಥ ಮಹಾಸ್ವಾಮೀಜಿಗಳ ಆಶೀರ್ವಾದ ಪಡೆದು ಕೆಲ ಕಾಲ ಆಧ್ಯಾತ್ಮ ವಿಚಾರದ ಕುರಿತು ಚರ್ಚೆ ನಡೆಸಿದರು. ಶೃಂಗೇರಿಯ ವೇದ ಪಾಠ ಶಾಲೆಗೆ ತೆರಳಿ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು. ವೇದ, ಮಂತ್ರಗಳನ್ನು ಕೆಲ ಹೊತ್ತು ಆಲಿಸಿದರು.
ರಾಹುಲ್ ಗಾಂಧಿ ಭೇಟಿ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಪಟ್ಟಣದಲ್ಲಿ ಮಂಗಳವಾರದಿಂದಲೇ ಭಾರಿ ಸಂಖ್ಯೆಯ ಪೊಲೀಸ್ ಸಿಬ್ಬಂದಿ ನಿಯೋಜನೆಯಾಗಿತ್ತು. ನಕ್ಸಲ್ ಪೀಡಿತ ಪ್ರದೇಶ ವಾಗಿರುವುದರಿಂದ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿತ್ತು.
-ಉದಯವಾಣಿ
Comments are closed.