ಕರ್ನಾಟಕ

ಬಸನಗೌಡ ಪಾಟೀಲ ಯತ್ನಾಳ ಬಿಜೆಪಿ ಸೇರ್ಪಡೆ ವಿರೋಧಿಸಿ ಕಾರ್ಯಕರ್ತರ ಆತ್ಮಹತ್ಯೆ ಯತ್ನ !

Pinterest LinkedIn Tumblr

ವಿಜಯಪುರ: ವಿಜಯಪುರ ಜಿಲ್ಲಾ ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ಬುಧವಾರ ಅಸಮಾಧಾನ ಸ್ಫೋಟಗೊಂಡಿದ್ದು, ಎರಡೂ ಪಕ್ಷಗಳ ಜಿಲ್ಲಾ ಕಚೇರಿಗಳ ಮುಂದೆ ಕಾರ್ಯಕರ್ತರು, ಪದಾಧಿಕಾರಿಗಳು, ಟಿಕೆಟ್‌ ಆಕಾಂಕ್ಷಿಗಳ ಬೆಂಬಲಿಗರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.

ವಿಧಾನ ಪರಿಷತ್‌ನ ಪಕ್ಷೇತರ ಸದಸ್ಯ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದಂತೆ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಬೆಂಬಲಿಗರು, ಮಹಾನಗರ ಪಾಲಿಕೆ ಸದಸ್ಯರು ಬಿಜೆಪಿ ಕಚೇರಿ ಮುಂಭಾಗ ಜಮಾಯಿಸಿ, ಧಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು.

ವಿಜಯಪುರ ನಗರ ಮಂಡಲದ ಯುವ ಮೋರ್ಚಾ ಉಪಾಧ್ಯಕ್ಷ ಬಾಬು ಜಗದಾಳೆ, ಯತ್ನಾಳರನ್ನು ಬಿಜೆಪಿಗೆ ಸೇರಿಸಿಕೊಳ್ಳಬಾರದೆಂದು ಘೋಷಣೆ ಕೂಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು. ಸ್ಥಳದಲ್ಲಿದ್ದ ಕಾರ್ಯಕರ್ತರು ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಿದರು.

ಬಾಗವಾನ ವಿರುದ್ಧ ಆಕ್ರೋಶ: ವಿಜಯಪುರ ನಗರ ಶಾಸಕ ಡಾ.ಮಕ್ಬೂಲ್‌ ಎಸ್‌.ಬಾಗವಾನ ಅವರಿಗೆ ಟಿಕೆಟ್‌ ನೀಡಬಾರದು ಎಂದು ಆಗ್ರಹಿಸಿ, ಟಿಕೆಟ್‌ ಆಕಾಂಕ್ಷಿಗಳ ಬೆಂಬಲಿಗರು ಕಾಂಗ್ರೆಸ್‌ ಕಚೇರಿ ಮುಂಭಾಗ ಪ್ರತಿಭಟಿಸಿದರು.

ರಾಜೀನಾಮೆ: ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಬಿಜೆಪಿ ಸೇರಿದ್ದನ್ನು ವಿರೋಧಿಸಿ, ದೇವರಹಿಪ್ಪರಗಿ ಬಿಜೆಪಿ ಮಂಡಲದ ಅಧ್ಯಕ್ಷ, ಕಾರ್ಯದರ್ಶಿ, ಪದಾಧಿಕಾರಿಗಳು ಸೇರಿ 400ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ.

Comments are closed.