ಬೆಂಗಳೂರು: ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಫಲಿತಾಂಶ ಬಂದಿದ್ದು ಸ್ವತಂತ್ರವಾಗಿ ಸರ್ಕಾರ ರಚಿಸುವ ಬಿಜೆಪಿ ಕನಸು ಭಗ್ನವಾಗಿದೆ. ಈ ನಡುವೆ ಗೋವಾ ಹಾಗೂ ಈಶಾನ್ಯ ರಾಜ್ಯಗಳಲ್ಲಿನ ಅತಂತ್ರ ಫಲಿತಾಂಶದಿಂದ ಪಾಠ ಕಲಿತಿರುವ ಕಾಂಗ್ರೆಸ್ ಬಿಜೆಪಿಗೆ ನೇತೃತ್ವದ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರದಂತೆ ಮಾಡಲು ಕ್ಷಿಪ್ರಗತಿಯಲ್ಲಿ ಕಾರ್ಯತಂತ್ರ ರೂಪಿಸುತ್ತಿದೆ.
ಇತ್ತ ಸರ್ಕಾರ ರಚನೆಗೆ ಬಿಜೆಪಿ ಸಹ ಮಾಸ್ಟರ್ ಪ್ಲಾನ್ ರೂಪಿಸುತ್ತಿದ್ದು, ಸರ್ಕಾರ ರಚಿಸಲು ಬಿಜೆಪಿಗೆ ಇರುವ ಮಾರ್ಗಗಳ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಸಭೆಯಲ್ಲಿ ರಾಜ್ಯ ಚುನಾವಣೆಯ ಉಸ್ತುವಾರಿ ವಹಿಸಿದ್ದ ಪ್ರಕಾಶ್ ಜಾವ್ಡೇಕರ್, ಕೇಂದ್ರ ಸಚಿವ ರವಿಶಂಕರ್ ಪ್ರಕಾಶ್, ಜೆಪಿ ನಡ್ಡಾ ಸಭೆಯಲ್ಲಿ ಭಾಗಿಯಾಗಿದ್ದಾರೆ.
ಇನ್ನು ಅತಂತ್ರ ವಿಧಾನಸಭೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ “ಹೈಕಮಾಂಡ್ ಜಿತೆ ಚರ್ಚಿಸಿ, ಸಭೆಯ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇನೆ, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಬಗ್ಗೆ ಮಾತನಾಡುವುದಿಲ್ಲ” ಎಂದಷ್ಟೇ ಹೇಳಿದ್ದಾರೆ.
ಈಗಾಗಲೇ ಜೆಡಿಎಸ್ ಗೆ ಬೇಷರತ್ ಬೆಂಬಲ ನೀಡಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಲು ಕಾಂಗ್ರೆಸ್ ಸಮ್ಮತಿ ಸೂಚಿಸಿರುವುದರ ಹೊರತಾಗಿಯೂ ಯಡಿಯೂರಪ್ಪ ಅವರ ಹೇಳಿಕೆ ಬಿಜೆಪಿ ಮತ್ತೊಮ್ಮೆ ಆಪರೇಷನ್ ಕಮಲಕ್ಕೆ ಕೈ ಹಾಕುತ್ತಾ? ಎಂಬ ಪ್ರಶ್ನೆಯೂ ಮೂಡುವಂತೆ ಮಾಡಿದೆ.
2008 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 110 ಸ್ಥಾನಗಳನ್ನು ಪಡೆದು ಸರ್ಕಾರ ರಚಿಸಲು ಮ್ಯಾಜಿಕ್ ನಂಬರ್ ಗೆ ಕೇವಲ 2 ಸ್ಥಾನಗಳ ಕೊರತೆ ಎದುರಾಗಿತ್ತು. ಆಗಲೂ ಬಿಜೆಪಿ ಆಪರೇಷನ್ ಕಮಲ ಮೂಲಕ ಸರ್ಕಾರ ರಚಿಸಿತ್ತು. ಈಗಲೂ ಬಿಜೆಪಿಗೆ ಸರ್ಕಾರ ರಚಿಸಲು 8 ಶಾಸಕರ ಕೊರತೆ ಇದ್ದು, ಆಪರೇಷನ್ ಕಮಲ ನಡೆಯುವ ಸಾಧ್ಯತೆ ಇದೆಯೇ ಎಂಬ ಪ್ರಶ್ನೆ ಮೂಡುವಂತೆ ಮಾಡಿದೆ.
Comments are closed.