ಬೆಂಗಳೂರು: ಮಾಜಿ ಸಚಿವ, ಕಾಂಗ್ರೆಸ್ನ ಹಿರಿಯ ನಾಯಕ ಆರ್.ವಿ ದೇಶಪಾಂಡೆ ಅವರು ಎಚ್.ಡಿ ಕುಮಾರಸ್ವಾಮಿ ಅವರ ಸಂಪುಟ ಸೇರಲು ನಿರಾರಿಸಿದ್ದಾರೆ. ಅವರು ಬೇರೊಂದು ಮಹತ್ವದ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ನ ಹಿರಿಯ ನಾಯಕರಾಗಿರುವ ಆರ್. ವಿ. ದೇಶಪಾಂಡೆ ಜನತಾ ಪರಿವಾರದ ಹಿನ್ನೆಲೆಯವರು. ರಾಮಕೃಷ್ಣ ಹೆಗಡೆ ಮತ್ತು ಎಚ್.ಡಿ ದೇವೇಗೌಡ ಅವರ ಸಚಿವ ಸಂಪುಟದಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವ ದೇಶಪಾಂಡೆ ಅವರು ಹಳಿಯಾಳ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದು ಬಂದಿದ್ದಾರೆ. ಸದ್ಯ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದು, ದೇಶಪಾಂಡೆಯವರೂ ಸಂಪುಟ ಸೇರಬಹುದು ಎಂಬ ನಿರೀಕ್ಷೆಯನ್ನು ರಾಜ್ಯದ ಜನತೆ ಹೊಂದಿದ್ದಾರೆ. ಆದರೆ, ಎಚ್ಡಿಕೆ ಅವರ ಸಂಪುಟ ಸೇರಲು ದೇಶಪಾಂಡೆ ನಿರಾರಿಸಿದ್ದಾರೆ ಎಂದು ಗೊತ್ತಾಗಿದೆ.
ರಾಮಕೃಷ್ಣ ಹೆಗಡೆ ಮತ್ತು ಕುಮಾರಸ್ವಾಮಿ ಅವರ ತಂದೆ ಎಚ್.ಡಿ ದೇವೆಗೌಡರ ಸಂಪುಟದಲ್ಲಿ ಕಾರ್ಯನಿರ್ವಹಿಸಿದ್ದೇನೆ. ಹೀಗಾಗಿ ಎಚ್ಡಿಕೆ ಸಂಪುಟದಲ್ಲಿ ಕೆಲಸ ಮಾಡಲು ನನಗೆ ಇಷ್ಟವಿಲ್ಲ ಎಂದು ರಾಹುಲ್ ಗಾಂಧಿ ಅವರ ಬಳಿ ಹೇಳಿಕೊಂಡಿರುವ ದೇಶಪಾಂಡೆ, ಇದಕ್ಕೆ ಪ್ರತಿಯಾಗಿ ಮಹತ್ವದ ಹುದ್ದೆಯನ್ನೇ ಕೇಳಿದ್ದಾರೆ ಎನ್ನಲಾಗಿದೆ.
ಸಚಿವ ಸ್ಥಾನದ ಬದಲಿಗೆ ತಮಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವಂತೆ ದೇಶಪಾಂಡೆ ಅವರು ರಾಹುಲ್ ಬಳಿ ಮನವಿ ಮಾಡಿದ್ದಾರೆ. ಅವರ ಮನವಿ ಕೇಳಿದ ರಾಹುಲ್ ಅವರು ಗೊಂದಲಕ್ಕೊಳಗಾಗಿದ್ದಾರೆ ಎನ್ನಲಾಗಿದೆ. ಏಕೆಂದರೆ, ಉಪಮುಖ್ಯಮಂತ್ರಿಯಾಗಿರುವ ಡಾ.ಜಿ ಪರಮೇಶ್ವರ್ ಅವರಿಂದ ತೆರವಾಗಲಿರುವ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಈಗಾಗಲೇ ಡಿ.ಕೆ.ಶಿವಕುಮಾರ್ ಮತ್ತು ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ಅವರ ನಡುವೆ ಪೈಪೋಟಿ ಏರ್ಪಟ್ಟಿದೆ. ಹೀಗಿರುವಾಗ ದೇಶಪಾಂಡೆ ಅವರು ಪಕ್ಷದ ಅಧ್ಯಕ್ಷ ಹುದ್ದೆ ಕೇಳುತ್ತಿರುವುದರಿಂದ ರಾಹುಲ್ ಗೊಂದಲಕ್ಕೊಳಗಾಗಿದ್ದಾರೆ ಎಂದು ಹೇಳಲಾಗುತ್ತಿದೆ.
Comments are closed.