ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆ ವಿಚಾರದಲ್ಲಿ ನಿಲುವು ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ರಾಜ್ಯ ಸರ್ಕಾರದ ವರ್ಗಾವಣೆ ಆದೇಶ ಎತ್ತಿಹಿಡಿದಿದ್ದ ಸಿಎಟಿ ಆದೇಶ ರದ್ದುಕೋರಿ ರೋಹಿಣಿ ಸಿಂಧೂರಿ ಸಲ್ಲಿಸಿರುವ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಜಿ.ರಮೇಶ್ ಹಾಗೂ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ವಿಭಾಗೀಯ ಪೀಠ, ಅರ್ಜಿದಾರ ಅಧಿಕಾರಿಯ ವರ್ಗಾವಣೆ ವಿಚಾರದಲ್ಲಿ ಹೊಸ ಸರ್ಕಾರದ ನಿಲುವೇನು ಎಂದು ಪ್ರಶ್ನಿಸಿತು. ಸರ್ಕಾರದ ನಿಲುವು ತಿಳಿಸಲು ಸರ್ಕಾರಿ ವಕೀಲರು ಕಾಲಾವಕಾಶ ಕೋರಿದ್ದರಿಂದ ನ್ಯಾಯಪೀಠ ವಿಚಾರಣೆಯನ್ನು ಜೂ. 25ಕ್ಕೆ ಮುಂದೂಡಿತು.
ಇದಕ್ಕೂ ಮುನ್ನ ಅರ್ಜಿದಾರ ಅಧಿಕಾರಿ ಯಾವ ಇಲಾಖೆಯಲ್ಲಿ ಯಾವ ಇಲಾಖೆಯಲ್ಲಿ ಬೇಕಾದರೂ ಕರ್ತವ್ಯ ನಿರ್ವಹಿಸಬಹುದಲ್ಲವೇ? ಕರ್ತವ್ಯ ಒಂದೇ ಅಲ್ಲವೇ ಎಂದು ರೋಹಿಣಿ ಸಿಂಧೂರಿ ಪರ ವಕೀಲರನ್ನು ನ್ಯಾಯಪೀಠ ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ವಕೀಲರು, ವರ್ಗಾವಣೆ ನಿಯಮಗಳನ್ನು ಉಲ್ಲಂ ಸಿ ನಿಯಮಬಾಹಿರಾಗಿ ವರ್ಗಾವಣೆ ಮಾಡಲಾಗಿದೆ. ಹೀಗಾಗಿ ಅರ್ಜಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಸರ್ಕಾರ ರಾಜ್ಯ ಕೈಗಾರಿಕಾ ನಿಗಮ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ನಿರ್ದೇಶಕಿ ಸ್ಥಾನಕ್ಕೆ ವರ್ಗಾವಣೆಗೊಳಿಸಿ ಜ.22ರಂದು ಆದೇಶಿಸಿತ್ತು. ಈ ಆದೇಶಕ್ಕೆ ಕೇಂದ್ರ ಚುನಾವಣಾ ಆಯೋಗ ತಡೆ ನೀಡಿತ್ತು. ಇದಾದ ಬಳಿಕ ಮಾರ್ಚ್ 7ರಂದು ರೋಹಿಣಿ ಸಿಂಧೂರಿ ಅವರನ್ನು ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರ ಹುದ್ದೆಗೆ ವರ್ಗಾಯಿಸಲಾಗಿತ್ತು. ಈ ಆದೇಶ ಪ್ರಶ್ನಿಸಿದ್ದ ರೋಹಿಣಿ ಸಿಂಧೂರಿ ಅರ್ಜಿಯನ್ನು ಸಿಎಟಿ ವಜಾಗೊಳಿಸಿದೆ.
Comments are closed.