ಕರ್ನಾಟಕ

ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮುಂದಿನ ಐದು ದಿನಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ವರದಿ

Pinterest LinkedIn Tumblr

ಬೆಂಗಳೂರು: ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮುಂದಿನ ಐದು ದಿನಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲೂ ಭಾರಿ ಮಳೆ ಮುಂದುವರಿಯುವ ಸೂಚನೆಯನ್ನು ಶುಕ್ರವಾರ ನೀಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ತಗ್ಗು ಪ್ರದೇಶ ಗ್ರಾಮಸ್ಥರು ಎತ್ತರ ಪ್ರದೇಶಗಳಿಗೆ ತೆರಳುವಂತೆ ಸೂಚಿಸಿದೆ. ಆಗಸ್ಟ್ 18 ರಂದು ಅಂದರೆ ಇಂದಿನಿಂದಲೇ ಮಲೆನಾಡಿನ ಜಿಲ್ಲೆಗಳು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವೆಡೆಗಳಲ್ಲಿ ಭಾರಿ ಮಳೆ ಆಗಲಿದೆ. ಅರಬ್ಬೀ ಸಮುದ್ರದಲ್ಲಿ ಪ್ರತಿಕೂಲ ಪರಿಸ್ಥಿತಿ ಇರಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ ಎಂದೂ ಇಲಾಖೆ ಹೇಳಿದೆ.

ಆಗಸ್ಟ್19 ರಂದು ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಭಾರಿ ಮಳೆ ಆಗಲಿದ್ದು, ಆಗಸ್ಚ್ 20 ಮತ್ತು 21 ರಂದು ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆಯಾಗಲಿದೆ.

ಕೊಡಗು ಜಿಲ್ಲೆಯು ಅತಿವೃಷ್ಠಿಗೆ ಒಳಗಾಗಿರುವುದರಿಂದ ತುರ್ತು ಕಾರ್ಯಕ್ಕೆ ನೆರವಾಗಲು ಮೈಸೂರು, ಮಂಡ್ಯ, ರಾಮನಗರ, ದಾವಣಗೆರೆ ಮತ್ತು ಬೆಂಗಳೂರು ನಗರ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಅಧಿಕಾರಿ ಮತ್ತು ನೌಕರರನ್ನು ಒಳಗೊಂಡ ತಲಾ ಒಂದೊಂದು ತಂಡ ಕಳುಹಿಸಿಕೊಡುವಂತೆ ಎಂದು ಕಂದಾಯ ಇಲಾಖೆ ಆದೇಶಿಸಿದೆ.

Comments are closed.