ಕರ್ನಾಟಕ

ಕೊಡಗು: ಮಹಾ ಮಳೆಗೆ ಇನ್ನು ಉಕ್ಕಿ ಹರಿಯುತ್ತಿರುವ ನದಿಗಳು, ನುಗ್ಗಿ ಬರುತ್ತಿರುವ ನೀರು…ಮುಂದುವರಿದ ಆತಂಕ

Pinterest LinkedIn Tumblr


ಬೆಂಗಳೂರು: ಮಹಾ ಮಳೆ, ಉಕ್ಕಿ ಹರಿಯುವ ನದಿಗಳು, ನುಗ್ಗಿ ಬರುತ್ತಿರುವ ನೀರು ಮತ್ತು ಕುಸಿಯುತ್ತಿರುವ ಬೆಟ್ಟಗಳ ಅಡಿಯಲ್ಲಿ ಸಿಲುಕಿ ಅಕ್ಷರಶಃ ಯಮಯಾತನೆ ಅನುಭವಿಸುತ್ತಿರುವ ಕೊಡಗು ಜಿಲ್ಲೆಗೆ ಕೊನೆಗೂ ನೆರವಿನ ಹಸ್ತಗಳು ಕೈಚಾಚಿವೆ.

ಆದರೆ, ಪ್ರಕೃತಿ ಮಾತ್ರ ತನ್ನ ಮುನಿಸನ್ನು ಮುಂದುವರಿಸಿದ್ದು ಇನ್ನೂ ಎರಡು ದಿನ ವರುಣಾಕ್ರೋಶದ ತಾಡನ ಎದುರಿಸಬೇಕಾಗಿದೆ.

ಶನಿವಾರ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಕೊಡಗಿನಲ್ಲಿ ವೈಮಾನಿಕ ಸಮೀಕ್ಷೆ, ಅಧಿಕಾರಿಗಳ ಸಭೆ ನಡೆಸಿ 100 ಕೋಟಿ ರೂ. ಪರಿಹಾರ ಘೋಷಿಸಿದರು. ಇತ್ತ ಕೊಡಗಿನ ಸಂಕಟಕ್ಕೆ ರಾಜ್ಯದ ಜನ ಮಿಡಿಯುತ್ತಿದ್ದು, ಪರಿಹಾರ ಸಾಮಗ್ರಿಗಳ ರವಾನೆ ಹೆಚ್ಚುತ್ತಿದೆ.

ಇಂದೂ ಸಿಎಂ ಕೊಡಗಿಗೆ

ಶನಿವಾರ ಮಡಿಕೇರಿಯಲ್ಲಿ ನಿರಾಶ್ರಿತರ ಶಿಬಿರ, ಗುಡ್ಡ ಕುಸಿದ ಪ್ರದೇಶಕ್ಕೆ ಭೇಟಿ ನೀಡಿದ್ದ ಸಿಎಂ ಕುಮಾರಸ್ವಾಮಿ ಭಾನುವಾರವೂ ಕೊಡಗು ಜಿಲ್ಲೆಯಲ್ಲೇ ಸಮೀಕ್ಷೆ ನಡೆಸಲಿದ್ದು, ನಿಗದಿಯಾಗಿದ್ದ ಇತರ ಜಿಲ್ಲೆಗಳ ಪ್ರವಾಸವನ್ನು ರದ್ದುಪಡಿಸಲಾಗಿದೆ. ಶನಿವಾರ ಬಿಜೆಪಿ ನಾಯಕ ಯಡಿಯೂರಪ್ಪ ಅವರೂ ಕೊಡಗಿಗೆ ಭೇಟಿ ನೀಡುವರು.

ಸಂಕಷ್ಟದಲ್ಲಿ ಚಿತ್ರನಟಿ ಕುಟುಂಬ

ಚಿತ್ರ ನಟಿ ದಿಶಾ ಪೂವಯ್ಯ ಅವರ ಕುಟುಂಬಕ್ಕೆ ಸೇರಿದ 40 ಮಂದಿ ಸಿಲುಕಿ ಹಾಕಿಕೊಂಡಿದ್ದು, ರಕ್ಷಣೆಗಾಗಿ ಸಿಎಂಗೆ ಮನವಿ ಸಲ್ಲಿಸಿದ್ದಾರೆ, ಸಿಎಂ ಅವರೂ ನೆರವಿಗೆ ಸೂಚನೆ ನೀಡಿದರು.

ಈ ನಡುವೆ ವಾಯುಪಡೆಯ ವಿಮಾನದಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಪಿರಿಯಾಪಟ್ಟಣ ಹೆಲಿಪ್ಯಾಡ್ ನಲ್ಲಿ ಇಳಿದು ಮಡಿಕೇರಿಗೆ ರಸ್ತೆ ಮಾರ್ಗವಾಗಿ ತೆರಳಿದರು. ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ರಕ್ಷಣಾ ಮತ್ತು ಪರಿಹಾರ ಕಾರ್ಯಕ್ಕೆ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದ್ದು, ಜನರು ಧೈರ್ಯವಾಗಿದ್ದುಕೊಂಡು ಪರಿಸ್ಥಿತಿಯನ್ನು ಎದುರಿಸಬೇಕು, ಎಲ್ಲರನ್ನೂ ರಕ್ಷಣೆ ಮಾಡಲಾಗುತ್ತದೆ ಎಂದಿದ್ದಾರೆ.

ಮನೆ ಕಳೆದುಕೊಂಡ ಸಂತ್ರಸ್ಥರಿಗೆ ಮನೆ ನಿರ್ಮಿಸಲಾಗುತ್ತದೆ. ಜತೆಗೆ ಮಳೆ ಕಡಿಮೆಯಾಗುತ್ತಲೇ ಪರಿಹಾರ ಕಾರ್ಯದ ಜತೆಗೆ ಮೂಲಸೌಕರ್ಯ ಒದಗಿಸಲು ಎಲ್ಲ ಅಗತ್ಯ ಕ್ರಮವನ್ನು ರಾಜ್ಯ ಸರಕಾರ ಕೈಗೊಳ್ಳಲಿದೆ ಎಂದು ಸಿಎಂ ಕುಮಾರಸ್ವಾಮಿ ಕೊಡಗಿನಲ್ಲಿ ಭರವಸೆ ನೀಡಿದ್ದಾರೆ. ಭಾನನುವಾರವೂ ಅವರು ಕೊಡಗಿನಲ್ಲಿದ್ದುಕೊಂಡು ಮಳೆ ಪರಿಸ್ಥಿತಿ ಅವಲೋಕಿಸಲಿದ್ದಾರೆ.

ಮಡಿಕೇರಿಯಲ್ಲಿ ಸಿಎಂ

ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಅವರು ಶನಿವಾರ ಸಂಜೆ ಮೈಸೂರಿನ ಭವನದಲ್ಲಿ ಪ್ರವಾಹ ಪೀಡಿತರ ನೆರವಿಗೆ ಸ್ಥಾಪಿಸಿರುವ ಅವಶ್ಯಕ ಸಾಮಗ್ರಿಗಳ ಸ್ವೀಕಾರ ಕೇಂದ್ರಕ್ಕೆ ಭೇಟಿ ನೀಡಿದ್ದರು.

ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಮತ್ತು ರಕ್ಷಣಾ ಕಾರ್ಯಾಚರಣೆ ಕುರಿತು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಬೆಂಗಳೂರಿನಲ್ಲಿ ಶನಿವಾರ ವಿವಿಧ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸಿದರು.

ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸುವಂತೆ ಸೂಚಿಸಿದ ಅವರು, ಅಗತ್ಯವಿರುವ ಮಾನವ ಸಂಪನ್ಮೂಲ ಮತ್ತು ಇತರ ಇಲಾಖೆಗಳ ನೆರವು ಪಡೆಯುವಂತೆ ಸೂಚಿಸಿದ್ದಾರೆ.

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಡಿಕೇರಿಗೆ ಭೇಟಿನೀಡಿ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ್ದು, ರಕ್ಷಣಾ ಕಾರ್ಯಾಚರಣೆಗೆ ಸ್ಥೈರ್ಯ ತುಂಬಿದ್ದಾರೆ.

ಸಿಎಂ ಮಡಿಕೇರಿಯಲ್ಲಿ

ಸಿಎಂ ಸುದ್ದಿಗೋಷ್ಠಿಯ ಪ್ರಮುಖ ಅಂಶಗಳು:
ರಕ್ಷಣಾ ಕಾರ್ಯದಲ್ಲಿ ಎನ್‍ಡಿಆರ್‍ಎಫ್, ಸಿವಿಲ್ ಡಿಫೆನ್ಸ್, ಅಗ್ನಿಶಾಮಕ ದಳ, ಭೂ ಸೇನೆಯ ಡೋಗ್ರಾ ರೆಜಿಮೆಂಟ್, ಎನ್.ಸಿ.ಸಿ, ವಾಯುಪಡೆಯ ತಂಡ ಸಹಿತ ಒಟ್ಟು 948 ಜನ ಭಾಗಿ.

ಈವರೆಗೆ 3500 ಜನರ ರಕ್ಷಣೆ.

ಶುಕ್ರವಾರ ಸಂಜೆ ದಕ್ಷಿಣ ಕನ್ನಡ, ಕೊಡಗು ಗಡಿಭಾಗದ ಜೋಡುಪಾಲ ಎಂಬಲ್ಲಿ ಗುಡ್ಡ ಕುಸಿತದಿಂದ ಸಿಲುಕಿಕೊಂಡಿದ್ದ 347 ಜನರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ನೇತೃತ್ವದ ತಂಡ ರಕ್ಷಿಸಿದೆ. ಕೊಡಗು ಭಾಗದಲ್ಲೂ ರಕ್ಷಣಾ ಕಾರ್ಯ ಚುರುಕು.

31 ಗಂಜಿ ಕೇಂದ್ರಗಳಲ್ಲಿ 2250 ಜನರು ಆಶ್ರಯ ಪಡೆದಿದ್ದಾರೆ. ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಗಂಜಿ ಕೇಂದ್ರ ತೆರೆಯಲಾಗುತ್ತದೆ.

ರಕ್ಷಣಾ ಕಾರ್ಯದ ನಿಮಿತ್ತ ಕೊಡಗು ಜಿಲ್ಲೆಗೆ ಇತರೆ ಜಿಲ್ಲೆಗಳಿಂದ ಕಂದಾಯ ಇಲಾಖೆ ಅಧಿಕಾರಿಗಳ ನಿಯೋಜನೆ.

ತಡೆರಹಿತ ಗ್ಯಾಸ್, ಪೆಟ್ರೋಲ್ ಮತ್ತು ಡೀಸಲ್ ಪೂರೈಕೆಗೆ ಆದೇಶ.

ಬಿದ್ದುಹೋಗಿರುವ ಮೊಬೈಲ್ ಟವರ್‌ಗಳನ್ನು ಯಥಾಸ್ಥಿತಿಗೆ ತಂದು ಸಂಪರ್ಕ ವ್ಯವಸ್ಥೆ ಕಲ್ಪಿಸಲು ಸೂಚನೆ.

ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲು ಇತರೆ ಜಿಲ್ಲೆಗಳಿಂದ ಹೆಚ್ಚುವರಿ ಸಿಬ್ಬಂದಿ ನಿಯೋಜನೆ.

ಕೊಡಗು ಜಿಲ್ಲೆಗೆ 10 ವೈದ್ಯಕೀಯ ಮತ್ತು ನರ್ಸಿಂಗ್ ಸಿಬ್ಬಂದಿಯನ್ನು ಒದಗಿಸಲು ಸೂಚನೆ ನೀಡಲಾಗಿದೆ. ಶಿಶು ಆಹಾರ ಪೂರೈಕೆಗೂ ವ್ಯವಸ್ಥೆ.

ಜಿಲ್ಲೆಯ ಮುಕೊಡ್ಲು ಗ್ರಾಮದಲ್ಲಿ ಗರ್ಭಿಣಿ ಸಹಿತ ಹಲವರು ಸಿಲುಕಿರುವ ಬಗ್ಗೆ ಮಾಹಿತಿ ಇದ್ದು, ಅವರನ್ನು ರಕ್ಷಿಸಲು ಸೇನಾ ತಂಡ ಕಾರ್ಯಾಚರಣೆ ನಡೆಸಿದೆ.

ರಕ್ಷಣಾ ಕಾರ್ಯಗಳಿಗೆ 50 ಜೆಸಿಬಿಗಳನ್ನು ಬಳಸಿ ತಾತ್ಕಾಲಿಕವಾಗಿ ರಸ್ತೆ ದುರಸ್ತಿ ಮಾಡಿ, ರಕ್ಷಣಾ ಕಾರ್ಯಕ್ಕೆ ಅನುವು.

ಮಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಬಹುತೇಕ ಕಡೆ ಬಿರುಕು ಬಿಟ್ಟಿದ್ದು, ಕುಸಿಯುತ್ತಿರುವುದರಿಂದ ಭೂವಿಜ್ಞಾನಿಗಳು ಹಾಗೂ ತಾಂತ್ರಿಕ ತಜ್ಞರ ನಿಯೋಜನೆ.

ಜಿಲ್ಲೆಯಲ್ಲಿ 800ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ನಾಶವಾಗಿದ್ದು, ಸಂತ್ರಸ್ತರ ದಾಖಲೆಗಳು ನಾಶವಾಗಿದೆ. ತಕ್ಷಣವೇ ಅವುಗಳ ನಕಲು ಪ್ರತಿ ನೀಡಲು ವ್ಯವಸ್ಥೆ.

ಮನೆ ಕಳೆದುಕೊಂಡ ಅರ್ಹ ಫಲಾನುಭವಿಗಳನ್ನು ಗುರುತಿಸಿ ತಕ್ಷಣವೇ 2 ಲಕ್ಷ ರೂ. ವರೆಗೆ ಪರಿಹಾರ ಒದಗಿಸಲು ಸೂಚನೆ.

ಪರಿಹಾರ ಕಾರ್ಯಕ್ಕೆ ಅಗತ್ಯವಿರುವ ವಾಹನಗಳನ್ನು ಬಾಡಿಗೆ ಆಧಾರದ ಮೇಲೆ ಪಡೆಯಲು ಆದೇಶ, ಪೋಲೀಸ್ ಹಾಗೂ ಅರಣ್ಯ ಇಲಾಖೆಯಿಂದಲೂ ವಾಹನ ಪಡೆಯಲು ಸೂಚನೆ.

ಕೊಡಗು ಜಿಲ್ಲೆಯ ಜಿಲ್ಲಾ ಪಂಚಾಯತ್ ಕಚೇರಿ ಕಾರ್ಯನಿರ್ವಹಿಸುತ್ತಿರುವ ಮಡಿಕೇರಿ ಕೋಟೆ ಶಿಥಿಲಾವಸ್ಥೆಯಲ್ಲಿದ್ದು, ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಗಮನಕ್ಕೆ ತರಲು ನಿರ್ಧಾರ. ಸರ್ಕಾರಿ ಕಚೇರಿಯ ದುರಸ್ತಿಗೆ ಲೋಕೋಪಯೋಗಿ ಇಲಾಖೆಗೆ ಸೂಚನೆ.

ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಹಿರಿಯ ಅಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ರಚಿಸಿ ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆಗೆ ಯಾವುದೇ ಆರ್ಥಿಕ ಮುಗ್ಗಟ್ಟು ಎದುರಾಗದಂತೆ ಕ್ರಮ ವಹಿಸಲು ಸೂಚನೆ.

ಪ್ರಕೃತಿ ವಿಕೋಪದೊಂದಿಗೆ ಮಾನವ ನಿರ್ಮಿತ ಲೋಪದೋಷಗಳನ್ನು ಕೂಲಂಕುಷವಾಗಿ ಅಧ್ಯಯನ ನಡೆಸಿ ಮುನ್ನೆಚರಿಕೆ ವಹಿಸಲು ಸೂಚಿಸಲಾಗಿದೆ.

ಪಶ್ಚಿಮಘಟ್ಟ ಭಾಗದಲ್ಲಿ ಭೂ ಪರಿವರ್ತನೆ ಕಾರ್ಯಗಳನ್ನು ಸ್ಥಗಿತಗೊಳಿಸಲು ಮುಖ್ಯಮಂತ್ರಿ ಆದೇಶ.

ಎಟಿಎಂಗಳಲ್ಲಿ ನಗದು ಕೊರತೆಯಾಗಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿರುವುದನ್ನು ಗಮನಿಸಿದ್ದು, ಈ ಕುರಿತು ಬ್ಯಾಂಕರ್‌ಗಳ ಜತೆ ಮಾತನಾಡಿ ಸಮಸ್ಯೆ ಬಗೆಹರಿಸಲು ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳಿಗೆ ಸಿಎಂ ಸೂಚನೆ.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಾಫಿ ಹಾಗೂ ಅಡಿಕೆಗೆ ಕೊಳೆ ರೋಗ ಕಾಣಿಸಿಕೊಂಡಿದೆ. ಕಾಫಿ ನಷ್ಟ ಅಂದಾಜು ಮಾಡಲು ಸಂಬಂಧಿಸಿದಂತೆ ಹೆಚ್ಚುವರಿ ಅಧಿಕಾರಿಗಳ ನಿಯೋಜನೆಗೆ ಕಾಫಿ ಮಂಡಳಿಗೆ ಕೋರಿಕೆ.

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಸಾರ್ವಜನಿಕರು ದೇಣಿಗೆ ನೀಡುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಮನವಿ.

Comments are closed.