ಕರ್ನಾಟಕ

ದತ್ತಪೀಠ ವಿವಾದವನ್ನು ಸಿಎಂ ಕುಮಾರಸ್ವಾಮಿ ಬಗೆಹರಿಸಲಿ: ಪ್ರಮೋದ್ ಮುತಾಲಿಕ್ ಒತ್ತಾಯ

Pinterest LinkedIn Tumblr

ಚಿಕ್ಕಮಗಳೂರು: ಶ್ರೀರಾಮ ಸೇನೆ ಆಯೋಜಿಸಿರುವ ದತ್ತಮಾಲಾ ಅಭಿಯಾನದ ಅಂಗವಾಗಿ ಚಿಕ್ಕಮಗಳೂರಿನ ಬಾಬಾಬುಡನ್ ಗಿರಿಯಲ್ಲಿ ಶೋಭಯಾತ್ರೆ ಆರಂಭವಾಗಿದೆ. ರಾಜ್ಯದ ವಿವಿಧ ಮೂಲಗಳಿಂದ ದತ್ತಪೀಠದ ಭಕ್ತರು ಆಗಮಿಸಿದ್ದು ಭದ್ರತೆಗಾಗಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಹೆಚ್ ಡಿ ದೇವೇಗೌಡ ಮುಖ್ಯಮಂತ್ರಿಯಾಗಿದ್ದಾಗ ಹುಬ್ಬಳ್ಳಿಯ ಈದ್ಗಾ ಮೈದಾನದ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿದ್ದರು. ಅವರ ಪುತ್ರ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ದತ್ತಪೀಠ ವಿವಾದವನ್ನು ಅದೇ ರೀತಿ ಬಗೆಹರಿಸಲು ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

ಶೋಭಾ ಯಾತ್ರೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಸುಮಾರು 2,500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 27 ತಪಾಸಣಾ ಕೇಂದ್ರಗಳನ್ನು ಸೂಕ್ಷ್ಮ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ, ಕಾನೂನು ವಿರುದ್ಧ ಹೋದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಸೂಪರಿಂಟೆಂಡೆಂಟ್ ಪರೀಶ್ ಪಾಂಡೆ ತಿಳಿಸಿದ್ದಾರೆ.30 ವಿಶೇಷ ಮ್ಯಾಜಿಸ್ಟ್ರೇಟ್ ಗಳನ್ನು ಸೂಕ್ಷ್ಮ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂಕೆ ಶ್ರೀರಂಗಯ್ಯ ತಿಳಿಸಿದರು.

ಇಂದಿನ ಶೋಭಾಯಾತ್ರೆ ಎಂ ಜಿ ರಸ್ತೆಯಿಂದ ಹಾದುಹೋಗಿ ಬೋಳರಾಮೇಶ್ವರ ದೇವಸ್ಥಾನದಲ್ಲಿ ಕೊನೆಯಾಗಲಿದೆ. ದತ್ತಪೀಠಕ್ಕೆ ಹೋಗುವ ಮುನ್ನ ಸಾರ್ವಜನಿಕ ಸಭೆ ನಡೆಯಲಿದೆ.

Comments are closed.