ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ಕಳೆದ ವರ್ಷ ಸೆ. 5ರಂದು ಗೌರಿ ಲಂಕೇಶ್ ಅವರನ್ನು ಮನೆಯ ಮುಂದೆಯೇ ಹತ್ಯೆ ಮಾಡಲಾಗಿತ್ತು. ಆ ಪ್ರಕರಣದ ಕುರಿತು ಸುದೀರ್ಘ 14 ತಿಂಗಳು ತನಿಖೆ ನಡೆಸಿದ ಎಸ್ಐಟಿ ಅಧಿಕಾರಿಗಳು 1ನೇ ಸೆಷನ್ಸ್ ನ್ಯಾಯಾಲಯಕ್ಕೆ ಬರೋಬ್ಬರಿ 9,830 ಪುಟಗಳ ಬೃಹತ್ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ.
ಎಸ್ಐಟಿ ಮುಖ್ಯ ತನಿಖಾಧಿಕಾರಿ ಅನುಚೇತ್ ನೇತೃತ್ವದಲ್ಲಿ ಚಾರ್ಜ್ಶೀಟ್ ಸಲ್ಲಿಕೆ ಮಾಡಲಾಗಿದೆ. ಡಿವೈಎಸ್ಪಿ ರಂಗಪ್ಪ ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಿ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಆದರೆ, ಗೌರಿ ಲಂಕೇಶ್ ಹತ್ಯೆಗೆ ಬಳಸಿದ್ದ ಪಿಸ್ತೂಲ್ ಎಲ್ಲಿದೆ ಎಂದು ಪತ್ತೆಹಚ್ಚಲು ಎಸ್ಐಟಿ ವ್ಯಾಪಕ ಕಾರ್ಯಾಚರಣೆ ನಡೆಸಿದ್ದರೂ ವಿಫಲವಾಗಿದೆ. ಇನ್ನೋರ್ವ ಆರೋಪಿ ಮುರಳಿ ಕೂಡ ಇನ್ನೂ ನಾಪತ್ತೆಯಾಗಿದ್ದಾನೆ.
ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಆರೋಪಿಗಳನ್ನು ಬಂಧಿಸಲಾಗಿದೆ. ಹೊಟ್ಟೆ ಮಂಜ ಮತ್ತು ಪರಶುರಾಮ ವಾಗ್ಮೋರೆ ಅವರನ್ನು ಪ್ರಮುಖ ಆರೋಪಿಗಳಾಗಿ ಚಾರ್ಜ್ಶೀಟ್ನಲ್ಲಿ ಹೆಸರಿಸಿರುವ ಸಾಧ್ಯತೆಯಿದೆ. ಗೌರಿ ಹತ್ಯೆ ಪ್ರಕರಣದಲ್ಲಿ ಸುಮಾರು 450ಕ್ಕೂ ಅಧಿಕ ಸಾಕ್ಷಿಗಳ ಹೇಳಿಕೆಗಳನ್ನು ಚಾರ್ಜ್ಶೀಟ್ನಲ್ಲಿ ದಾಖಲು ಮಾಡಲಾಗಿದೆ.
Comments are closed.