ಕರ್ನಾಟಕ

ಸಿದ್ದಗಂಗಾ ಶ್ರೀಗಳು ನಡೆದು ಬಂದ ಹಾದಿ

Pinterest LinkedIn Tumblr


ಬೆಂಗಳೂರು: ಕರ್ನಾಟಕ ರತ್ನ ಡಾ| ಶ್ರೀ.ಶಿವಕುಮಾರ ಸ್ವಾಮಿಗಳು ಈಗ ತಮ್ಮ 111ನೇ ವಯಸ್ಸಿನಲ್ಲಿ ಮೃತಪಟ್ಟಿದ್ದಾರೆ. ಅನ್ನ ಅಕ್ಷರ,ಜ್ಞಾನ ಹೀಗೆ ತ್ರಿವಿಧ ದಾಸೋಹಗಳ ಮೂಲಕ ಕನ್ನಡ ನಾಡಿನ ಸೇವೆ ಗೈದ ಸಂತರಾಗಿದ್ದ ಅವರಿಲ್ಲದ ನಾಡು ಈಗ ಅನಾಥವಾಗಿದೆ.ಈ ಸಂದರ್ಭದಲ್ಲಿ ಅವರು ನಡೆದು ಬಂದ ಹಾದಿಯನ್ನು ನಾವು ಸ್ಮರಿಸಬೇಕಾಗಿದೆ.

ತುಮಕೂರಿನಲ್ಲಿರುವ ಸಿದ್ದಗಂಗಾ ಮಠಾಧಿಪತಿಗಳಾಗಿ ಹಲವು ದಶಕಗಳ ಕಾಲದಿಂದಲೂ ಅವರು ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.12 ನೇ ಶತಮಾನದ ಶರಣ ಬಸವಣ್ಣನವರ ಕಾಯಕವೇ ಕೈಲಾಸ್ ಎನ್ನುವ ಆದರ್ಶದೊಂದಿಗೆ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸಿದ್ದಗಂಗಾ ಸ್ವಾಮೀಜಿಗಳು ಯಾವ ಸರ್ವ ಧರ್ಮ ಸಮನ್ವಯ ಪರಂಪರೆಯನ್ನು ಕಾಯ್ದುಕೊಂಡು ಬಂದಿದ್ದಾರೆ.

ಮಾಗಡಿ ತಾಲೂಕಿನ ವೀರಾಪುರದ ಶ್ರೀಯುತ ಹೊನ್ನೇಗೌಡ ಮತ್ತು ತಾಯಿ ಗಂಗಮ್ಮನವರಿಗೆ ಎಪ್ರಿಲ್ 1, 1908 ರಲ್ಲಿ 13ನೇ ಮಗು ಶಿವಣ್ಣನವರಾಗಿ ಜನಿಸಿದರು. ಹೊನ್ನೆಗೌಡ ದಂಪತಿಗಳಿಗೆ ಎಂಟು ಜನ ಗಂಡು ಮಕ್ಕಳು ಹಾಗೂ ಐದು ಹೆಣ್ಣು ಮಕ್ಕಳು, ಎಲ್ಲರಿಗಿಂತಲೂ ಕಿರಿಯರಾದ ಶಿವಣ್ಣನವರೆಂದರೆ ತಂದೆ ತಾಯಿಗಳಿಗೆ ಅಪಾರ ಪ್ರೀತಿ. ವೀರಾಪುರದಲ್ಲಿಯೇ ಇದ್ದ ಕೂಲಿಮಠ ದಲ್ಲಿ ಮರಳಿನ ಮೇಲೆ ಅಕ್ಷರ ತಿದ್ದುವ ಮೂಲಕ ಶಿವಣ್ಣನ ಶೈಕ್ಷಣಿಕ ಜೀವನ ಆರಂಭವಾಯಿತು. ತುಮಕೂರು ಬಳಿ ಇರುವ ನಾಗವಲ್ಲಿ ಯಲ್ಲಿ ಮಾಧ್ಯಮಿಕ ಶಿಕ್ಷಣ ಮುಗಿಸಿದ ಶಿವಣ್ಣ 1922 ರಿಂದ ತುಮಕೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಕಲಿತು 1926 ರಲ್ಲಿ ಮೆಟ್ರಿಕ್ಯುಲೇಷನ್ ಗಳಿಸಿದರು. 1927 ರಲ್ಲಿ ಆಗಿನ ಸಿದ್ದಗಂಗಾ ಮಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಉದ್ದಾನ ಶಿವಯೋಗಿಗಳವರೊಡನಾಟ ಆಯಿತು. ಇದೇ ವರ್ಷ ಎಂಟ್ರೆನ್ಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಬೆಂಗಳೂರಿನ ಸೆಂಟ್ರಲ್ ಕಾಲೇಜಿಗೆ ಸೇರಿದರು. ಬೆಂಗಳೂರಿನಲ್ಲಿ ‘ರಾವ್ ಬಹದ್ದೂರ್ ಧರ್ಮಪ್ರವರ್ತ ಶ್ರೀ ಗುಬ್ಬಿ ತೋಟದಪ್ಪ ಧರ್ಮ ಛತ್ರ’ ದಲ್ಲಿ ಉಳಿದುಕೊಂಡು, ಸೆಂಟ್ರಲ್ ಕಾಲೇಜ್ ನಲ್ಲಿ ಉನ್ನತ ಶಿಕ್ಷಣ ಪಡೆದರು.

ಮುಂದೆ ಮಾರ್ಚ್ 3,1930 ರಲ್ಲಿ ಇವರು ಶ್ರೀಮಠದ ಜವಾಬ್ದಾರಿಯನ್ನು ಹೊತ್ತು ಅಂದಿನಿಂದ ನಿರಂತರವಾಗಿ ಮಠ, ಯಾವುದೋ ಒಂದು ಧರ್ಮಕ್ಕೆ ಸ್ಥೀಮಿತವಾಗದೆ ಎಲ್ಲ ಧರ್ಮಗಳ ಮತ್ತು ಸಮಾಜದ ಏಳಿಗೆಗಾಗಿ ಶ್ರಮಿಸಿದರು.

ಪ್ರಶಸ್ತಿ ಮತ್ತು ಸನ್ಮಾನಗಳು

*ಸ್ವಾಮೀಜಿಯವರ ಜಾತ್ಯಾತೀತ, ಧರ್ಮಾತೀತ ಶಿಕ್ಷಣ ಸೇವೆಯನ್ನು ಪರಿಗಣಿಸಿಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಶಿವಕುಮಾರ್ ಸ್ವಾಮೀಜಿಗಳಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

*ಪೂಜ್ಯ ಸ್ವಾಮೀಜಿಯವರ 100ನೇ ವರ್ಷದ ಹುಟ್ಟುಹಬ್ಬ ಮತ್ತು ಕರ್ನಾಟಕ ಸುವರ್ಣ ಮಹೋತ್ಸವ ಸಮಯದಲ್ಲಿ ಶ್ರೀಗಳ ಜೀವಮಾನ ಸಮಾಜ ಸೇವೆಯನ್ನು ಪರಿಗಣಿಸಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲಾಯಿತು.

*2015ರಲ್ಲಿ ಭಾರತ ಸರ್ಕಾರ ‘ಪದ್ಮಭೂಷಣ’ ಪ್ರಶಸ್ತಿಯನ್ನು ನೀಡಿ ಗೌರವಿಸಿತು.

Comments are closed.