ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಕಣಕ್ಕಿಳಿಯುವ ಸುಮಲತಾ ಆಸೆಗೆ ಈಗ ಸ್ವತಃ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ತಣ್ಣೀರೆರಚಿದ್ದಾರೆ.
ಮಂಡ್ಯ ಜೆಡಿಎಸ್ ಸಂಸದರಿರುವ ಕ್ಷೇತ್ರವಾದ್ದರಿಂದ ಸುಮಲತಾ ಅವರಿಗೆ ಟಿಕೆಟ್ ಕೊಡುವ ಮಾತೇ ಬರುವುದಿಲ್ಲ ಎಂದಿದ್ದಾರೆ. ಈ ಹಿಂದೆ ಸುಮಲತಾ, ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಚುನಾವಣೆ ಎದುರಿಸುವ ಕುರಿತು ಚರ್ಚಿಸಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ನಿಂದ ಸುಮಲತಾಗೆ ಟಿಕೆಟ್ ನೀಡುವ ಸಾಧ್ಯತೆಯ ಬಗ್ಗೆ ಚರ್ಚೆಯಾಗಿತ್ತು. ಆದರೀಗ ಸಿದ್ದರಾಮಯ್ಯ ಹೇಳಿಕೆಯಿಂದ ಸುಮಲತಾ ರಾಜಕೀಯ ಪ್ರವೇಶ ಇಬ್ಬಗೆಯಲ್ಲಿ ಸಿಲುಕಿದಂತಾಗಿದೆ.
ಮಂಡ್ಯ ಕ್ಷೇತ್ರದಿಂದ ಯಾರಿಗೆ ಟಿಕೆಟ್ ನೀಡಬೇಕು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಭಾರೀ ಚರ್ಚೆ ನಡೆಯುತ್ತಿದೆ. ದೇವೇಗೌಡರ ಕುಟುಂಬದ ಕುಡಿ ನಿಖಿಲ್ ಕುಮಾರಸ್ವಾಮಿ ಅವರನ್ನು ಈ ಕ್ಷೇತ್ರದಿಂದ ಕಣಕ್ಕಿಳಿಸಲು ಜೆಡಿಎಸ್ ಸಿದ್ಧತೆ ನಡೆಸಿದೆ. ಆದರೆ, ಈ ಕ್ಷೇತ್ರವನ್ನು ತನಗೆ ಬಿಟ್ಟುಕೊಡಿ ಎಂದು ಸುಮಲತಾ ಪಟ್ಟು ಹಿಡಿದ್ದಾರೆ. ಆದರೆ, ಈಗ ಸಿದ್ದರಾಮಯ್ಯ ನೀಡಿರುವ ಹೇಳಿಕೆಯಿಂದ ಅವರಿಗೆ ಟಿಕೆಟ್ ಸಿಗುವುದು ಅನುಮಾನ ಎನ್ನಲಾಗುತ್ತಿದೆ. ಸೋಮವಾರ ಕಾಂಗ್ರೆಸ್ – ಜೆಡಿಎಸ್ ಸಮನ್ವಯ ಸಮಿತಿ ಸಭೆ ನಡೆಸಲಾಗಿತ್ತು. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಸಮನ್ವಯ ಸಮಿತಿಯ ಎಲ್ಲಾ ಸದಸ್ಯರು ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮುಖ್ಯವಾಗಿ ಚರ್ಚೆಯಾದ ವಿಚಾರ ಲೋಕಸಭಾ ಟಿಕೆಟ್ ಹಂಚಿಕೆ. ಜೆಡಿಎಸ್ 12 ಸ್ಥಾನಗಳಿಗೆ ಪಟ್ಟು ಹಿಡಿದಿದ್ದರೆ, ಕಾಂಗ್ರೆಸ್ 9 ಸ್ಥಾನ ನೀಡಲು ಒಪ್ಪಿತ್ತು.
ಈಗ ಅದರ ಮುಂದುವರೆದ ಭಾಗವಾಗಿ ಕಾಂಗ್ರೆಸ್ನಿಂದ ಸುಮಲತಾ ಅಂಬರೀಶ್ಗೆ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮೂಲಗಳ ಪ್ರಕಾರ ಸುಮಲತಾರಿಗೆ ಕಾಂಗ್ರೆಸ್ನಿಂದ ಟಿಕೆಟ್ ಸಿಕ್ಕರೆ ಅದು ಸಿದ್ದರಾಮಯ್ಯ ಅವರಿಂದ ಮಾತ್ರ ಸಾಧ್ಯ ಎನ್ನಲಾಗಿತ್ತು. ಆದರೀಗ ಸಿದ್ದರಾಮಯ್ಯ ಕೂಡ ಸುಮಲತಾ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, “ಮಂಡ್ಯದಲ್ಲಿ ಜೆಡಿಎಸ್ ಸಂಸದರಿದ್ದಾರೆ. ಮೈತ್ರಿ ಒಪ್ಪಂದದ ಪ್ರಕಾರ ಅಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲು ಸಾಧ್ಯವಿಲ್ಲ. ಹಾಗಾಗಿ ಈ ಕ್ಷೇತ್ರ ಜೆಡಿಎಸ್ಗೆ ಸೇರಬೇಕು. ಈ ಕ್ಷೇತ್ರ ಕಾಂಗ್ರೆಸ್ ವ್ಯಾಪ್ತಿಗೆ ಬರುವುದೇ ಇಲ್ಲ ಎಂದಾದಮೇಲೆ ಸುಮಲತಾಗೆ ಟಿಕೆಟ್ ನೀಡುವ ಪ್ರಶ್ನೆಯೇ ಬರುವುದಿಲ್ಲವಲ್ಲ,” ಎಂದಿದ್ದಾರೆ.
ಒಂದೊಮ್ಮೆ ಕಾಂಗ್ರೆಸ್ನಿಂದ ಟಿಕೆಟ್ ಸಿಗದೇ ಇದ್ದರೆ ಸುಮಲತಾ ಪಕ್ಷೇತರರಾಗಿ ಸ್ಪರ್ಧಿಸುತ್ತಾರೆ ಎನ್ನುವ ಮಾತಿದೆ. ಈ ಬಗ್ಗೆಯೂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. “ಪಕ್ಷೇತರರಾಗಿ ಸ್ಪರ್ಧಿಸುವುದು ಸಂಪೂರ್ಣವಾಗಿ ಸುಮಲತಾ ಅವರಿಗೆ ಬಿಟ್ಟ ನಿರ್ಧಾರ. ಈ ಬಗ್ಗೆ ನಾನು ಏನನನ್ನೂ ಹೇಳಲು ಸಾಧ್ಯವಿಲ್ಲ,” ಎಂದರು.
Comments are closed.