ಬೆಂಗಳೂರು: ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಎಲ್ಲರ ಗಮನ ಬೆಂಗಳೂರು ದಕ್ಷಿಣ ಕ್ಷೇತ್ರದ ಕಡೆ ವಾಲಿದೆ. ಈವರೆಗೆ ಸಮರ್ಥ ಅಭ್ಯರ್ಥಿಗಾಗಿ ಹುಡುಕಾಟ ನಡೆಸುತ್ತಿದ್ದ ಕಾಂಗ್ರೆಸ್ನಿಂದ ಮಹಿಳೆಯೊಬ್ಬರು ಕಣಕ್ಕಿಳಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಬಿಜೆಪಿ ಭದ್ರಕೋಟೆಯಾಗಿರುವ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ನಂದನ್ ನಿಲೇಕಣಿ ಪತ್ನಿ ರೋಹಿಣಿ ನೀಲೇಕಣಿ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರವನ್ನು ಅನಂತಕುಮಾರ್ ಆರು ಬಾರಿ ಪ್ರತಿನಿಧಿಸಿದ್ದರು. ಅವರ ಅಕಾಲಿಕ ನಿಧನದಿಂದಾಗಿ ಕ್ಷೇತ್ರ ತೆರವಾಗಿದ್ದು, ಅವರ ಹೆಂಡತಿ ತೇಜಸ್ವಿನಿ ಅನಂತಕುಮಾರ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಿದೆ ಎಂದು ಹೇಳಲಾಗುತ್ತಿದೆ.
ಇಂದು ತೇಜಸ್ವಿನಿ ಅನಂತಕುಮಾರ್ ಮಾಜಿ ಡಿಸಿಎಂ ಆರ್.ಅಶೋಕ್ ಅವರನ್ನು ಭೇಟಿ ಮಾಡಿದ್ದರು. ರಹಸ್ಯ ಸ್ಥಳದಲ್ಲಿ 1 ಗಂಟೆಗೂ ಹೆಚ್ಚು ಕಾಲ ಇಬ್ಬರು ನಾಯಕರು ಚರ್ಚೆ ನಡೆಸಿದ್ದರು. ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿನಿ ಅನಂತಕುಮಾರ್ ಕಣಕ್ಕಿಳಿಯುವ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿತ್ತು. ಹೈಕಮಾಂಡ್ ನಿರ್ಧಾರಕ್ಕೆ ತೇಜಸ್ವಿನಿ ಅನಂತಕುಮಾರ್ ಸೈ ಎಂದಿದ್ದಾರೆ ಎಂದು ತಿಳಿದುಬಂದಿದೆ.
ಒಂದು ವೇಳೆ ಬಿಜೆಪಿ ತೇಜಸ್ವಿನಿ ಅವರನ್ನು ಕಣಕ್ಕಿಳಿಸಿದರೆ, ಕಾಂಗ್ರೆಸ್ ಕೂಡ ರೋಹಿಣಿ ನೀಲೇಕಣಿ ಅವರನ್ನು ಕಣಕ್ಕಿಳಿಸಲು ಗಂಭೀರ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಸಂಬಂಧ ಈಗಾಗಲೇ ರೋಹಿಣಿ ನೀಲೇಕಣಿ ಅವರನ್ನು ಪಕ್ಷದ ಹಿರಿಯ ನಾಯಕರು ಭೇಟಿ ಮಾಡಿ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಬಾರಿ ಅನಂತಕುಮಾರ್ ವಿರುದ್ಧ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ನಂದನ್ ನೀಲೇಕಣಿ ಸೋಲು ಅನುಭವಿಸಿದ್ದರು. ಈ ಬಾರಿಯೂ ಸಹ ಕಾಂಗ್ರೆಸ್ನಿಂದ ನೀಲೇಕಣಿ ಅವರೇ ನಿಲ್ಲುವಂತೆ ಕಾಂಗ್ರೆಸ್ ಮನವಿ ಮಾಡಿತ್ತು. ಆದರೆ ಕಳೆದ ಬಾರಿ ಸೋಲಿನ ರುಚಿ ಕಂಡ ಕಾರಣ ನೀಲೇಕಣಿ ಕಾಂಗ್ರೆಸ್ನ ಮನವಿಯನ್ನು ನಿರಾಕರಿಸಿದ್ದರು.
ಬಳಿಕ ಕಾಂಗ್ರೆಸ್ನಿಂದ ರಾಮಲಿಂಗಾರೆಡ್ಡಿ ಹಾಗೂ ಪ್ರಿಯಾಕೃಷ್ಣ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ಪ್ರಿಯಾಕೃಷ್ಣ ಗೋವಿಂದರಾಜನಗರದ ಸೋಲಿನ ಬಳಿಕ ಬೆಂಗಳೂರು ದಕ್ಷಿಣದಲ್ಲಿ ಕೆಲಸ ಆರಂಭಿಸಿದ್ದರು. ಬಿಜೆಪಿಯಿಂದ ತೇಜಸ್ವಿನಿ ಅನಂತಕುಮಾರ್ ಸ್ಪರ್ಧಿಸಿದರೆ, ತಾನು ಕಾಂಗ್ರೆಸ್ನಿಂದ ಅಖಾಡಕ್ಕಿಳಿಯುವುದಾಗಿ ರಾಮಲಿಂಗಾರೆಡ್ಡಿ ಈ ಹಿಂದೆ ಹೇಳಿದ್ದರು.
Comments are closed.