ಕರ್ನಾಟಕ

ಮೊಬೈಲ್ ಸ್ವಿಚ್ ಆಫ್ ಮಾಡಿದರೆ ಶಿಕ್ಷಕರಿಗೆ ಶಿಕ್ಷೆ: ರಾಯಚೂರು ಶಿಕ್ಷಣ ಇಲಾಖೆ ಸಿಬ್ಬಂದಿಗೆ ಖಡಕ್ ಆದೇಶ

Pinterest LinkedIn Tumblr


ರಾಯಚೂರು: ಜಿಲ್ಲೆಯ ಶಿಕ್ಷಣ ಇಲಾಖೆ ಸಿಬ್ಬಂದಿ ಯಾರೂ ತಮ್ಮ ಮೊಬೈಲ್‍ಗಳನ್ನು ಸ್ವಿಚ್ ಆಫ್ ಮಾಡುವ ಹಾಗಿಲ್ಲ. ಒಂದು ವೇಳೆ ಸ್ವಿಚ್ ಆಫ್ ಮಾಡಿದ್ರೆ ಶಿಕ್ಷೆ ಖಚಿತ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಖಡಕ್ ಆದೇಶ ಹೊರಡಿಸಿದ್ದಾರೆ.

ಲೋಕಸಭಾ ಚುನಾವಣೆ ಅಧಿಸೂಚನೆ ಪ್ರಕಟವಾಗಿದ್ದೆ ತಡ ರಾಯಚೂರಿನಲ್ಲಿ ಅಧಿಕಾರಿಗಳು ಹೈ ಅಲರ್ಟ್ ಆಗಿದ್ದಾರೆ. ಶಿಕ್ಷಣ ಇಲಾಖೆ ಚುನಾವಣೆಯನ್ನ ಯಶಸ್ವಿಯಾಗಿ ನಿಭಾಯಿಸಬೇಕು ಅಂತ ಕಟ್ಟು ನಿಟ್ಟಿನ ಆದೇಶಗಳನ್ನ ಹೊರಡಿಸಿದೆ.

ಯಾವುದೇ ಕಾರಣಕ್ಕೂ ಶಿಕ್ಷಣ ಇಲಾಖೆ ಸಿಬ್ಬಂದಿ ಮೊಬೈಲ್ ಸ್ವಿಚ್ ಆಫ್ ಆಗಬಾರದು. ಅನುಮತಿಯಿಲ್ಲದೆ ಯಾವುದೇ ಸಿಬ್ಬಂದಿ ಕೇಂದ್ರಸ್ಥಾನ ಬಿಟ್ಟು ತೆರಳಬಾರದು ಎಂದು ಜಿಲ್ಲೆಯ ಎಲ್ಲಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೆಶಕ ಬಿ.ಕೆ.ನಂದನೂರು ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದಾರೆ. ಚುನಾವಣಾ ತುರ್ತು ಸಂದರ್ಭದಲ್ಲಿ ಎಲ್ಲರೂ ಲಭ್ಯವಿರಬೇಕು ಇಲ್ಲದಿದ್ದರೆ ಶಿಸ್ತುಕ್ರಮ ಜರುಗಿಸಲಾಗುವುದು ಅಂತ ಎಚ್ಚರಿಸಿದ್ದಾರೆ.

ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಜನವರಿ 16ರವರೆಗೆ ಮತದಾರರ ಸಂಖ್ಯೆ 18,93,576 ಇದ್ದು ಒಟ್ಟು 1843 ಮತಗಟ್ಟೆ ತೆರೆಯಲಾಗಿದೆ. ಚುನಾವಣಾ ಕಾರ್ಯಕ್ಕೆ ಒಟ್ಟು 8,798 ಸಿಬ್ಬಂದಿ ನೇಮಿಸಲಾಗಿದೆ. ಜಿಲ್ಲೆಯಲ್ಲಿ 31 ಚೆಕ್ ಪೋಸ್ಟ್, 7 ಅಂತರರಾಜ್ಯ ಚೆಕ್ ಪೋಸ್ಟ್ ತೆರೆಯಲಾಗಿದೆ ಅಂತ ಜಿಲ್ಲಾಧಿಕಾರಿ ಬಿ.ಶರತ್ ಹೇಳಿದ್ದಾರೆ.

ಇಷ್ಟು ದಿನ ರಾಜಕೀಯ ವಲಯದಲ್ಲಿದ್ದ ಚುನಾವಣಾ ಬಿಸಿ ಈಗ ಅಧಿಕಾರಿಗಳಲ್ಲೂ ಜೋರಾಗಿದೆ. ಮತದಾನ ಜಾಗೃತಿ ಮೂಡಿಸಲು ಜಿಲ್ಲಾಡಳಿತ ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದೆ. ಚುನಾವಣೆ ಯಶಸ್ವಿಯಾಗಿ ನಡೆಸಲು ಸಿಬ್ಬಂದಿಗೆ ನಿರಂತರ ತರಬೇತಿಯನ್ನೂ ನೀಡಲಾಗುತ್ತಿದೆ.

Comments are closed.