ಕರ್ನಾಟಕ

ಸುಮಲತಾಗೆ ಕಾಂಗ್ರೆಸ್​ನಿಂದ ಟಿಕೆಟ್​ ಇಲ್ಲ ಎಂದ ನಾನು ಅವರನ್ನೇಕೆ ಬೆಂಬಲಿಸಲಿ; ಸಿದ್ದರಾಮಯ್ಯ

Pinterest LinkedIn Tumblr


ನವದೆಹಲಿ: ಮಂಡ್ಯದಿಂದ ಸುಮಲತಾ ಅವರನ್ನು ಕಣಕ್ಕೆ ಇಳಿಸುವುದಕ್ಕೆ ಜೆಡಿಎಸ್​ ವಿರೋಧ ವ್ಯಕ್ತಪಡಿಸಿದ್ದು, ತಮ್ಮ ಪಕ್ಷದಿಂದ ನಿಖಿಲ್ ಕುಮಾರಸ್ವಾಮಿ ಅವರನ್ನು ಕಣಕ್ಕೆ ಇಳಿಸುವುದಾಗಿ ಘೋಷಿಸಿರುವುದು ಗೊತ್ತೇ ಇದೆ. ಆದರೆ, ಸುಮಲತಾಗೆ ಸಿದ್ದರಾಮಯ್ಯ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ ಎಂಬ ಮಾತುಗಳು ಇತ್ತೀಚೆಗೆ ಕೇಳಿಬಂದಿತ್ತು.

ಈ ಬಗ್ಗೆ ಇಂದು ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, ಸುಮಲತಾಗೆ ಕಾಂಗ್ರೆಸ್​ನಿಂದ ಟಿಕೆಟ್​ ನೀಡುವುದಿಲ್ಲ ಎಂದು ಹೇಳಿದ್ದೇ ನಾನು. ಅಲ್ಲಿನ ಸ್ಪರ್ಧೆಯ ಬಗ್ಗೆ ಈ ಮೊದಲೇ ನಿರ್ಧಾರವಾಗಿತ್ತು. ಹಾಗಿದ್ದಮೇಲೆ ನಾನ್ಯಾಕೆ ಸುಮಲತಾಗೆ ಪರೋಕ್ಷ ಬೆಂಬಲ ನೀಡುತ್ತೇನೆ? ಹಾಗೇನಾದರೂ ಇದ್ದಿದ್ದರೆ ನೇರವಾಗೇ ಹೇಳುತ್ತಿದ್ದೆ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ತಯಾರಿ ನಡೆಸುತ್ತಿದ್ದು, ಇಂದು ದೆಹಲಿಯಲ್ಲಿ ಕಾಂಗ್ರೆಸ್​ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಸ್ಕ್ರೀನಿಂಗ್​ ಸಮಿತಿ ಸಭೆ ನಡೆಯಲಿದೆ. ಇಂದು ಪಕ್ಷದ ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಿ ಸಿಇಸಿ(ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಉನ್ನತ ಸಮಿತಿ)ಗೆ ಕಳುಹಿಸಲಾಗುವುದು. ಈ ಸಭೆಯಲ್ಲಿ ರಾಜ್ಯದಲ್ಲಿ ಜೆಡಿಎಸ್​- ಕಾಂಗ್ರೆಸ್​ ಸೀಟು ಹಂಚಿಕೆಯ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗುವುದು. ಸಭೆಯಲ್ಲಿ ಸಿದ್ದರಾಮಯ್ಯ, ಡಿಸಿಎಂ ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ನಾಯಕರಾದ ಈಶ್ವರ ಖಂಡ್ರೆ, ಮಲ್ಲಿಕಾರ್ಜುನ ಖರ್ಗೆ, ಕೆ.ಸಿ. ವೇಣುಗೋಪಾಲ್ ಭಾಗಿಯಾಗಲಿದ್ದಾರೆ. ಕಾಂಗ್ರೆಸ್​ ಹಾಲಿ ಸಂಸದರಿಗೆ ಟಿಕೆಟ್​ ನೀಡಲಿದೆಯಾ ಎಂಬ ಬಗ್ಗೆಯೂ ಇಂದು ನಿರ್ಧಾರವಾಗಲಿದೆ. ಈ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಸಿದ್ದರಾಮಯ್ಯ ಮಾಧ್ಯಮಗಳಿಗೆ ಸ್ಪಷ್ಟೀಕರಣ ನೀಡಿದ್ದಾರೆ.

ಜೆಡಿಎಸ್​ನ ಕುಟುಂಬ ರಾಜಕಾರಣ ಮೈತ್ರಿ ಸರ್ಕಾರದ ಮೇಲೆ ದುಷ್ಪರಿಣಾಮ ಬೀರುವುದಿಲ್ಲ. ಮಂಡ್ಯದಲ್ಲಿ ನಿಖಿಲ್, ಹಾಸನದಲ್ಲಿ ಪ್ರಜ್ವಲ್ ಸ್ಪರ್ಧಿಸಲಿರುವ ನಿರ್ಧಾರ ಜೆಡಿಎಸ್​ಗೆ ಬಿಟ್ಟಿದ್ದು. ಜೆಡಿಎಸ್​ ಅಭ್ಯರ್ಥಿಗಳ ಆಯ್ಕೆ ಬಗ್ಗೆ ನಾವು ಹೇಳೋಕಾಗೊಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Comments are closed.