ಬೆಳಗಾವಿ: ಕಳೆದ 48 ಗಂಟೆಗಳಲ್ಲಿ ಬೆಳಗಾವಿಯಲ್ಲಿ ಇಬ್ಬರು ಜಿಲ್ಲಾಧಿಕಾರಿ ವರ್ಗಾವಣೆಗೊಂಡು ಮೂರನೇ ಡಿಸಿ ನೇಮಕ ಮಾಡಿ ಆದೇಶ ನೀಡಲಾಗಿದೆ.
ಮೊದಲು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್ ಬಿ ಬೊಮ್ಮನಹಳ್ಳಿ ಬದಲಾಗಿ ಅವರ ಜಾಗಕ್ಕೆ ಉಜ್ವಲ ಕುಮಾರ್ ಘೋಷ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಕೆಲ ಗಂಟೆಗಳ ಹಿಂದೆ ಮತ್ತೊಂದು ಆದೇಶ ಹೊರಡಿಸಿ ಆರ್ ವಿಶಾಲ್ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ ನೇಮಿಸಿದೆ.
ಬಾಗಲಕೋಟೆ ಕೃಷ್ಣಾ ಮೇಲ್ದಂಡೆ ಯೋಜನೆಯ ಭೂ ಸ್ವಾಧೀನ ಮತ್ತು ಪುನರ್ವಸತಿ ಕಮಿಷನರ್ ಆಗಿ ಉಜ್ವಲ್ ಕುಮಾರ್ ಘೋಷ್ ಅವರು ಕಾರ್ಯನಿರ್ವಹಿಸುತ್ತಿದ್ದರು. ಜಿಲ್ಲಾಧಿಕಾರಿಗಳ ಈ ಬದಲಾವಣೆಗೆ ಚುನಾವಣೆಯೇ ಕಾರಣ ಎಂಬ ಮಾತು ಕೇಳಿ ಬಂದಿದೆ.
ಇತ್ತ ಲೋಕಸಭಾ ಚುನಾವಣೆಯಲ್ಲಿ ತೀವ್ರ ಕುತೂಹಲ ಮೂಡಿಸಿರುವ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಗಳನ್ನು ಎರಡು ದಿನಗಳ ಹಿಂದೆಯಷ್ಟೇ ವರ್ಗಾವಣೆ ಮಾಡಲಾಗಿದ್ದು, ಹಾಸನದ ನೂತನ ಡಿಸಿಯಾಗಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅಧಿಕಾರ ಸ್ವೀಕಾರ ಮಾಡಿದ್ದರು. ಈ ಹಿಂದೆ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅಕ್ರಂಪಾಷಾ ಅವರು ಫೆಬ್ರವರಿ 22 ರಂದು ಹಾಸನಕ್ಕೆ ವರ್ಗಗೊಂಡು ಆಗಮಿಸಿದ್ದರು. ಒಂದು ತಿಂಗಳ ಅವಧಿಯಲ್ಲೇ ಪಾಷಾರನ್ನು ಕೂಡ ವರ್ಗಾವಣೆ ಮಾಡಲಾಗಿತ್ತು. ರೋಹಿಣಿ ಅವರ ಸ್ಥಾನಕ್ಕೆ ಪಾಷಾ ಅವರು ಜಿಲ್ಲಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡಿದ್ದರು. ಅಂದೇ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಮಿಷನರ್ ಆಗಿದ್ದ ಎಂ. ಕನಗವಳ್ಳಿ ಅವರನ್ನು ವಿಜಯಪುರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿತ್ತು.
Comments are closed.