ರಾಜ್ಯದಾದ್ಯಂತ ಆತಂಕಕ್ಕೆ ಕಾರಣವಾಗಿದ್ದ ಮೆಟ್ರೋ ಸ್ಟೇಶನ್ನ ಶಂಕಿತ ವ್ಯಕ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪಶ್ಚಿಮವಿಭಾಗದ ಪೊಲೀಸರು ವಶಕ್ಕೆ ಪಡೆದಿದ್ದು, ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಕೆಲ ದಿನಗಳ ಹಿಂದೆ ಬೆಂಗಳೂರಿನ ಮೆಟ್ರೋ ಸ್ಟೇಷನ್ನಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದ ವ್ಯಕ್ತಿಯೊಬ್ಬ ಕಾಣಿಸಿಕೊಂಡಿದ್ದು, ಬೆಂಗಳೂರಿಗರ ಆತಂಕಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪಶ್ಚಿಮವಿಭಾಗ ಪೊಲೀಸರು ಆತನಿಗಾಗಿ ಬಲೆ ಬೀಸಿದ್ದರು. ಇದೀಗ ಅನುಮಾನಾಸ್ಪದ ವ್ಯಕ್ತಿ ಸಾಜಿದ್ ಖಾನ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಡಿಸಿಪಿ ರವಿ ಚೆನ್ನಣ್ಣನವರ್ ವಿಚಾರಣೆ ನಡೆಸಿದ್ದಾರೆ.
ಪೊಲೀಸರ ವಶದಲ್ಲಿರುವ ಸಾಜಿದ್ ಖಾನ್ ರಂಜಾನ್ ಹಿನ್ನೆಲೆಯಲ್ಲಿ ದಾನ(ಝಕಾತ್ ) ಸ್ವೀಕರಿಸಲು ಬಂದಿದ್ದಾಗಿ ಹೇಳಿಕೊಂಡಿದ್ದಾನೆ ಎನ್ನಲಾಗಿದೆ. ಭಿಕ್ಷಾಟನೆಗಾಗಿ ಮಡದಿ ಹಾಗೂ ಮಕ್ಕಳ ಸಮೇತ ಬಂದಿದ್ದು, ಪ್ರತಿವರ್ಷವೂ ರಂಜಾನ್ ವೇಳೆಗೆ ಬೆಂಗಳೂರಿಗೆ ಬಂದು ಭಿಕ್ಷಾಟನೆ ಮಾಡುವುದಾಗಿ ಹೇಳಿಕೊಂಡಿದ್ದಾನೆ ಎನ್ನಲಾಗಿದೆ. ಆದರೆ ಭಿಕ್ಷಾಟನೆಗಾಗಿ ಬಂದಿರುವ ಸಾಜಿದ್ ಲಾಡ್ಜ್ನಲ್ಲಿ ಉಳಿದುಕೊಂಡಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.
ಈ ಬಗ್ಗೆ ವಿವರಣೆ ನೀಡಿರುವ ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ ಆತನನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಮಾಹಿತಿ ಪಡೆಯುತ್ತಿದ್ದೇವೆ. ಆದರೆ ಬೆಂಗಳೂರಿನಲ್ಲಿ ಪೊಲೀಸ್ ಸೇರಿದಂತೆ ಎಲ್ಲ ವ್ಯವಸ್ಥೆಗಳು ಸುಭದ್ರವಾಗಿದ್ದು, ಯಾರು ಆತಂಕಗೊಳ್ಳುವ ಅಗತ್ಯವಿಲ್ಲ ಎಂದರು.
Comments are closed.