ಕರ್ನಾಟಕ

ವಿಶ್ವನಾಥ್ ಅವರೇ ಜೆಡಿಎಸ್ ಅಧ್ಯಕ್ಷರು: ಜಿಟಿ ದೇವೇಗೌಡ

Pinterest LinkedIn Tumblr


ಮೈಸೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಶಾಸಕ ಅಡಗೂರು ಎಚ್. ವಿಶ್ವನಾಥ್ ಅವರೇ ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾಗಿ ಮುಂದುವರಿಯಬೇಕೆಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಪುನರುಚ್ಛರಿಸಿದ್ದಾರೆ.

‘ವಿಶ್ವನಾಥ್ ಅವರೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಬೇಕು ಎಂಬುದು ನಮ್ಮ ಅಭಿಲಾಷೆ. ಜೆಡಿಎಸ್ ವರಿಷ್ಠರಾದ ಎಚ್.ಡಿ. ದೇವೇಗೌಡರು ಹಾಗೂ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ವಿಶ್ವನಾಥ್ ಅವರೇ ಅಧ್ಯಕ್ಷ ಸ್ಥಾನದಲ್ಲಿ ಮುಂದುವರೆಯುವಂತೆ ಹೇಳಿದ್ದಾರೆ. ವಿಶ್ವನಾಥ್ ಅವರೂ ವರಿಷ್ಠರು ಹೇಳಿದಂತೆ ಕೇಳುತ್ತೇನೆ ಎಂದಿದ್ದಾರೆ. ಈ ಮೂಲಕ ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರಿಯಲಿದ್ದಾರೆ,’ ಎಂದು ದೇವೇಗೌಡ ಬುಧವಾರ ಇಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಾ ವಿಶ್ವಾಸ ವ್ಯಕ್ತಪಡಿಸಿದರು.

‘ಮೈಸೂರಲ್ಲಿ ಮೈತ್ರಿ ಅಭ್ಯರ್ಥಿ ಸೋಲಿಗೆ ಎಚ್. ವಿಶ್ವನಾಥ್ ಕಾರಣ ಎಂಬ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಈ ರೀತಿಯ ಚರ್ಚೆಗೆ ಇದು ಸಮಯವಲ್ಲ. ಈ ಬಗ್ಗೆ ಯಾರೂ ಮಾತನಾಡದಂತೆ ಸೂಚನೆ ಇದೆ. ಲೋಕಸಭೆ ಚುನಾವಣೆಯಲ್ಲಿ ಜನರು ನಮಗೆ ಶಿಕ್ಷೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ನಮ್ಮ ತಪ್ಪುಗಳನ್ನು ತಿದ್ದುಕೊಂಡು ಉತ್ತಮ ಕೆಲಸಗಳನ್ನು ಮಾಡುತ್ತೇವೆ’’ ಎಂದರು.

‘ಒಂದು ಕಾಲದಲ್ಲಿ ಇಡೀ ದೇಶದಲ್ಲಿ ಕಾಂಗ್ರೆಸ್ ಅವನತಿಯಲ್ಲಿತ್ತು. ಆಗ ಕಾಂಗ್ರೆಸ್ ಹಾಗೂ ಇಂದಿರಾ ಗಾಂಧಿ ಅವರಿಗೆ ರಾಜಕೀಯ ಪುನರ್ಜನ್ಮ ನೀಡಿದ್ದು ಕರ್ನಾಟಕ. ಅದೇ ಪರಿಸ್ಥಿತಿ ಮತ್ತೆ ಕಾಂಗ್ರೆಸ್‌ಗೆ ಬಂದಿದೆ. ದೇಶದಲ್ಲಿ ಕಾಂಗ್ರೆಸ್ ಉಳಿಯ ಬೇಕಾದರೆ ಕರ್ನಾಟಕದಿಂದ ಮಾತ್ರ ಸಾಧ್ಯ. ರಾಷ್ಟ್ರಮಟ್ಟದಲ್ಲಿ ಮುಂಬರುವ ದಿನಗಳಲ್ಲಿ ಜಾತ್ಯತೀತ ಪಕ್ಷಗಳು ಒಟ್ಟಾಗುವ ಸನ್ನಿವೇಶ ಸೃಷ್ಟಿಯಾಗುತ್ತದೆ,’ ಎಂದು ಹೇಳಿದರು.

ಸಿದ್ದರಾಮಯ್ಯ ಗುಣಗಾನ ಮಾಡಿದ ಜಿಟಿಡಿ:
ಮೈಸೂರು: ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅಂದಿನ ಸಿಎಂ ಸಿದ್ದರಾಮಯ್ಯ ಅವರನ್ನು ಸೋಲಿಸಿದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಸಿದ್ದರಾಮಯ್ಯ ಅವರ ಗುಣಗಾನ ಮಾಡಿದ್ದಾರೆ.

ಬುಧವಾರ ಇಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಜಿ.ಟಿ.ದೇವೇಗೌಡ ಅವರು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ 5 ವರ್ಷಗಳ ಕಾಲ ಉತ್ತಮ ಆಡಳಿತ ನೀಡಿದ್ದಾರೆ. ಉತ್ತಮ ನಾಯಕರಾಗಿದ್ದಾರೆ. ಈಗಲೂ ಅವರು ಜನ ನಾಯಕರು ಎಂದರು.

ಸಿದ್ದರಾಮಯ್ಯ ಅವರು ನನ್ನನ್ನು ಟಾರ್ಗೆಟ್ ಮಾಡಿಲ್ಲ. ನಾನೂ ಅವರನ್ನು ಟಾರ್ಗೆಟ್ ಮಾಡಲ್ಲ ಎಂದರು ಜಿ.ಟಿ.ದೇವೇಗೌಡ.

Comments are closed.