
ಬೆಂಗಳೂರು(ಸೆ.07): ಅಕ್ರಮ ಹಣಕ್ಕೆ ಸಂಬಂಧಿಸಿದ ಅವ್ಯವಹಾರ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ರನ್ನು ಬಂಧಿಸಿದೆ. ಕಳೆದ ಮೂರು ದಿನಗಳಿಂದ ಇಡಿ ಅಧಿಕಾರಿಗಳು, ಡಿ.ಕೆ ಶಿವಕುಮಾರ್ರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಸದ್ಯ ಇಡಿ ವಶದಲ್ಲಿರುವ ಕಾಂಗ್ರೆಸ್ನ ಟ್ರಬಲ್ ಶೂಟರ್ ಶೇವಿಂಗ್ ಮಾಡಿಕೊಳ್ಳಲು ಅನುಮತಿ ನೀಡುವಂತೆ ಕೋರಿ ಇ.ಡಿ ವಿಶೇಷ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರನ್ನು ಸೆಪ್ಟೆಂಬರ್ 4ರಂದು ಕೋರ್ಟ್ ಆದೇಶದ ಮೇರೆಗೆ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಕಳೆದ ಮೂರು ದಿನಗಳಿಂದ ತೀವ್ರ ವಿಚಾರಣೆ ನಡೆಸುತ್ತಿರುವ ಇಡಿ ಅಧಿಕಾರಿಗಳು. ಡಿಕೆಶಿಯನ್ನು ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ಇರಿಸಿದ್ದಾರೆ. ಈ ವೇಳೆ ಶುಕ್ರವಾರ ಸಂಜೆ ಶೇವ್ ಮಾಡಿಕೊಳ್ಳಲು ಅವಕಾಶ ನೀಡುವಂತೆ ಡಿಕೆಶಿ ಕೋರಿದ್ದರು. ಆದರೆ, ಇದಕ್ಕೆ ಅಧಿಕಾರಿಗಳು ನಿರಾಕರಿಸಿದ್ದರು. ಹೀಗಾಗಿ ಡಿಕೆಶಿ ಪರ ವಕೀಲರು ಇಡಿ ವಿಶೇಷ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೇ ಶೇವಿಂಗ್ ಕಿಟ್ ಜತೆಗೆ ಪೆನ್ ಮತ್ತು ಪೇಪರ್ ಬಳಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.
ಸದ್ಯ ಡಿಕೆಶಿ ಪರ ವಕೀಲರ ಮನವಿಗೆ ಕೋರ್ಟ್ ಸ್ಪಂದಿಸಿದೆ. ತಾವು ಸಲ್ಲಿಸಿರುವ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಲಿದ್ದೇವೆ. ಶೇವ್ ಮಾಡಿಕೊಳ್ಳಲು ಅನುಮತಿ ನೀಡುವವರೆಗೂ ಕಾಯಿರಿ ಎಂದು ಕೋರ್ಟ್ ತಿಳಿಸಿದೆ.
ತಾಯಿ, ಪತ್ನಿ ಸೇರಿ ಇತರರ ಹೆಸರಲ್ಲಿ ಶಿವಕುಮಾರ್ ಬೇನಾಮಿ ಆಸ್ತಿ ಮಾಡಿರುವುದು ಕಂಡು ಬಂದಿದೆ. ಈ ಬಗ್ಗೆ ಇಡಿ ಅಧಿಕಾರಿಗಳ ವಿಚಾರಣೆ ಮುಂದುವರಿದಿದೆ. ಇಡಿ ತನಿಖೆ ಮುಗಿದ ಬಳಿಕ ಸರ್ಕಾರ ಅಧಿಕೃತವಾಗಿ ಮುಟ್ಟಗೋಲು ಹಾಕಿಕೊಳ್ಳಲಿದೆ. ಈ ಹಿಂದೆ 2017ರ ಆಗಸ್ಟ್ನಲ್ಲಿ ಐಟಿ ಅಧಿಕಾರಿಗಳು ಶಿವಕುಮಾರ್ ಮೇಲೆ ನಡೆಸಿದ ದಾಳಿ ವೇಳೆ ಸುಮಾರು 400 ಕೋಟಿ ರೂ.ಗೂ ಅಧಿಕ ಮೌಲ್ಯದ ಅಘೋಷಿತ ಆಸ್ತಿ ಪತ್ತೆಯಾಗಿತ್ತು. ಆ ಬಗ್ಗೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಿದಾಗ ಹಲವರ ಹೆಸರಲ್ಲಿ ಆಸ್ತಿ ಮಾಡಿರುವುದು ಬೆಳಕಿಗೆ ಬಂದಿತ್ತು ಎನ್ನುತ್ತಿವೆ ಮೂಲಗಳು.
ಬೇನಾಮಿ ಆಸ್ತಿ ನಿಯಂತ್ರಣ ಕಾಯ್ದೆ: ಕೇಂದ್ರ ಸರ್ಕಾರ 2016ರಲ್ಲಿ ಬೇನಾಮಿ ಆಸ್ತಿ ನಿಯಂತ್ರಣ ಕಾಯ್ದೆ ಜಾರಿಗೆ ತಂದಿತ್ತು. ಬೇನಾಮಿ ಆಸ್ತಿ ಹೊಂದಿದ್ದರೆ ಅಂಥವರಿಗೆ ಬೇನಾಮಿ ಆಸ್ತಿ ನಿಯಂತ್ರಣ ಕಾಯ್ದೆ ಪ್ರಕಾರ ಭಾರಿ ಪ್ರಮಾಣದ ದಂಡ ಹಾಗೂ ಶಿಕ್ಷೆ ವಿಧಿಸಲಾಗುತ್ತದೆ. ಈ ಕಾಯ್ದೆ ಪ್ರಕಾರ 1 ಕೋಟಿ ರೂ. ಮೌಲ್ಯದ ಬೇನಾಮಿ ಆಸ್ತಿ ಹೊಂದಿರುವುದು ಪತ್ತೆಯಾದರೆ 7 ವರ್ಷ ಜೈಲು ಶಿಕ್ಷೆ ಮತ್ತು 25 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಅಲ್ಲದೆ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಅಧಿಕಾರವಿದೆ. ಬೇನಾಮಿ ಆಸ್ತಿ ಬಗ್ಗೆ ತಪ್ಪು ಮಾಹಿತಿ ಕೊಟ್ಟಿರುವುದು ಕಂಡು ಬಂದರೆ ಪ್ರಸ್ತುತ ಆ ಆಸ್ತಿಗೆ ಇರುವ ಬೆಲೆಯ ಶೇ.10 ದಂಡ ವಿಧಿಸಿ 5 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ.
Comments are closed.