ಬೆಂಗಳೂರು(ಸೆ.20): ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 2007ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ಹಲಗೆ ವಡೇರಹಳ್ಳಿಯ 2 ಎಕರೆ 34 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದೇನೆ ಎಂದು ಆರೋಪ ಮಾಡಲಾಗುತ್ತಿದೆ. ಈ ಸಂಬಂಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅರ್ಜಿ ಸಲ್ಲಿದ್ದಾರೆ.
ಇತ್ತೀಚೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಲಯವೂ ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಚ್ ಡಿ ಕುಮಾರಸ್ವಾಮಿ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಕುಮಾರಸ್ವಾಮಿ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅಕ್ರಮವಾಗಿ ನಡೆದಿದೆ ಎನ್ನಲಾದ ಡಿನೋಟಿಫಿಕೇಷನ್ ಸಂಬಂಧ ಅಕ್ಟೋಬರ್ 4ರಂದು ವಿಚಾರಣೆಗೆ ಹಾಜರಾಗುವಂಗತೆ ನ್ಯಾಯಾಲಯ ಗುರುವಾರ ಸಮನ್ಸ್ ಜಾರಿಗೊಳಿಸಿತ್ತು.
ಏನಿದು ಪ್ರಕರಣ?: 2007ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಹಲಗೆ ವಡೇರಹಳ್ಳಿಯ 2 ಎಕರೆ 34 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ 2012ರಲ್ಲಿ ಅಧಿಕೃತವಾದ ದೂರು ದಾಖಲಾಗಿತ್ತು. ಬನಶಂಕರಿ ಐದನೇ ಹಂತದಲ್ಲಿರುವ ಹಲಗೆ ವಡೇರಹಳ್ಳಿಯಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಚಾಮರಾಜನಗರದ ಸಂತೇಮರಹಳ್ಳಿಯ ಮಹದೇವಸ್ವಾಮಿ ಎಂಬುವವರು ದೂರು ಸಲ್ಲಿಸಿದ್ದರು.
ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು 2019ರ ಆರಂಭದಲ್ಲಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಆ ಮೂಲಕ ಕುಮಾರಸ್ವಾಮಿ ಅವರಿಗೆ ರಿಲೀಫ್ ಸಿಕ್ಕಿತ್ತು. ಆದರೆ ದೂರುದಾರ ಮಹದೇವಸ್ವಾಮಿ ಬಿ ರಿಪೋರ್ಟ್ ಪ್ರಶ್ನಿಸಿ ಮತ್ತೆ ನ್ಯಾಯಾಲಯದ ಮೆಟ್ಟಿಲೇರಿದ್ದರು. 2012ರಲ್ಲಿ ಪ್ರಕರಣ ದಾಖಲಾಗಿದ್ದರೂ ಕ್ರಮ ಕೈಗೊಳ್ಳದೇ, ಈಗ ಇದ್ದಕ್ಕಿದ್ದಂತೆ ಬಿ ರಿಪೋರ್ಟ್ ಸಲ್ಲಿಸಿರುವ ಬಗ್ಗೆ ನ್ಯಾಯಾಧೀಶರು ಸಿಟ್ಟಾಗಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣದ ಮರು ತನಿಖೆಗೆ ಆದೇಶಿಸಿದ್ದರು. ಇದೀಗ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್ ಜಾರಿಗೊಳಿಸಿದೆ.
Comments are closed.