ಕರ್ನಾಟಕ

ಚಂದನ್ ಶೆಟ್ಟಿ, ನಿವೇದಿತಾ ವಿರುದ್ಧ ದೂರು ದಾಖಲು

Pinterest LinkedIn Tumblr


ಮೈಸೂರು: ಯುವ ದಸರಾದಲ್ಲಿ ಚಂದನ್ ಶೆಟ್ಟಿ ಪ್ರೇಮ ನಿವೇದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಗಾಯಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ವಿರುದ್ಧ ಮೂರು ದೂರು ದಾಖಲಾಗಿದ್ದು, ದೂರುಗಳ ಸಂಖ್ಯೆ ಹೆಚ್ಚಾಗುತ್ತಿದೆ.

ಮೈಸೂರಿನ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಮೇಲೆ ದೂರು ದಾಖಲು ಮಾಡಿದ್ದಾರೆ. ಸರ್ಕಾರಿ ವೇದಿಕೆ ದುರ್ಬಳಕೆ, ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ ಕುರಿತು ಚಂದನ್ ಮೇಲೆ ಕೇಸಾದರೆ, ನಿವೇದಿತಾರಿಂದ ಅತಿಕ್ರಮ ಪ್ರವೇಶ, ಸಂಚುರೂಪಿಸಿ ಪ್ರಚಾರ ಪಡೆದ ಆರೋಪಗಳ ಮೇಲೆ ದೂರು ದಾಖಲು ಮಾಡಲಾಗಿದೆ.

ಸರ್ಕಾರಿ ಕಾರ್ಯಕ್ರಮವನ್ನು ತಪ್ಪಾಗಿ ಬಳಸಿಕೊಂಡಿದ್ದಕ್ಕೆ ಚಂದನ್ ಶೆಟ್ಟಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಯೂತ್ ಕಾಂಗ್ರೆಸ್ ಅಧ್ಯಕ್ಷ ಮೋಸಿನ್ ಖಾನ್ ಆಗ್ರಹಿಸಿದ್ದಾರೆ.

ಮೈಸೂರು ಯೂತ್ ಕಾಂಗ್ರೆಸ್, ಕರ್ನಾಟಕ ಪ್ರಜಾಪಾರ್ಟಿ, ಸಾಮಾಜಿಕ ಹೋರಾಟಗಾರ ಗಂಗರಾಜುರಿಂದ ದೂರುಗಳು ದಾಖಲಾಗಿದ್ದು, ಚಂದನ್ ಶೆಟ್ಟಿ, ನಿವೇದಿತಾ ಮೇಲೆ ದೂರುಗಳ ಸಂಖ್ಯೆ ಹೆಚ್ಚಾಗುತ್ತಿದೆ.

ವೇದಿಕೆಯಲ್ಲಿ ನಡೆದಿದ್ದೇನು..?
ನಿನ್ನೆ ಯುವ ದಸರಾ ಕಾರ್ಯಕ್ರಮದಲ್ಲಿ ಚಂದನ್ ನಿವೇದಿತಾ ಪೋಷಕರು ಸೇರಿದಂತೆ ಸಾವಿರಾರು ಮಂದಿ ಭಾಗವಹಿಸಿದ್ದರು. ಕಾರ್ಯಕ್ರಮ ನೀಡಿ ಜನರನ್ನು ಮನರಂಜಿಸುತ್ತಿದ್ದ ಚಂದನ್ ವೇದಿಕೆಯಲ್ಲೇ ನಿವೇದಿತಾಳಿಗೆ ಮಂಡಿಯೂರಿ ಪ್ರಪೋಸ್ ಮಾಡಿದ್ದರು ಅಲ್ಲದೇ ಉಂಗುರ ಕೂಡ ತೊಡಿಸಿದ್ದರು. ಈ ವೇಳೆ ನೆರೆದಿದ್ದ ಮಂದಿ ಶಿಳ್ಳೆ ಹೊಡೆದು ಚಪ್ಪಾಳೆ ತಟ್ಟುವ ಮೂಲಕ ಇಬ್ಬರನ್ನೂ ಅಭಿನಂದಿಸಿದರು.

ಈ ಬೆನ್ನಲ್ಲೇ ಪ್ರಪೋಸ್ ಮಾಡಿರುವ ವಿಚಾರ ಭಾರೀ ವಿವಾದಕ್ಕೀಡಾಯಿತು. ದಸರಾ ಕಾರ್ಯಕ್ರಮದ ವೇದಿಕೆಯಲ್ಲೇ ಇದು ಬೇಡವಾಗಿತ್ತು ಎಂದು ಅನೇಕರು ಖಂಡಿಸಿದರು. ಇನ್ನೂ ಕೆಲವರು ಮೆಚ್ಚುಗೆಯನ್ನೂ ವ್ಯಕ್ತಪಡಿಸಿದ್ದರು. ಈ ಸಂಬಂಧ ಪ್ರತಿಕ್ರಿಯಿಸಿದ ಚಂದನ್, ನಾನು ಮಾಡಿರುವುದು ತಪ್ಪಾಗಿದ್ದರೆ ಕ್ಷಮಿಸಿ ಬಿಡಿ ಅಂದಿದ್ದಾರೆ. ಇತ್ತ ನಾವು ವೇದಿಕೆಯಲ್ಲಿ ಮದುವೆಯಾಗಿಲ್ಲ. ಒಂದು ವೇಳೆ ನಾವು ಅಲ್ಲಿ ಮದುವೆಯಾಗುತ್ತಿದ್ದರೆ ಅದನ್ನು ನಾನು ತಪ್ಪು ಅಂತ ಒಪ್ಪಿಕೊಳ್ಳುತ್ತಿದ್ದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ಈ ಮಧ್ಯೆ ಉಸ್ತುವಾರಿ ಸಚಿವ ವಿ ಸೋಮಣ್ಣ ಪ್ರತಿಕ್ರಿಯಿಸಿ, ಯುವ ದಸರಾ ವೇದಿಕೆಯಲ್ಲಿ ಗಾಯಕ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ನಿಶ್ಚಿತಾರ್ಥ ಮಾಡಿಕೊಂಡಿರುವುದು ಅಕ್ಷಮ್ಯ ಅಪರಾಧ. ನಾಡಿನ ಅಧಿದೇವತೆಯ ನಾಡಹಬ್ಬದ ವೇದಿಕೆಯಲ್ಲಿ ಈ ರೀತಿ ಆಗಬಾರದಿತ್ತು. ತಪ್ಪೆಸಗಿರುವ ಅವರಿಬ್ಬರಿಗೂ ಬರುವ ಆರು ತಿಂಗಳಲ್ಲಿ ದೇವಿಯೇ ಶಿಕ್ಷೆ ನೀಡುತ್ತಾರೆ. ಈ ರೀತಿ ಆಗುತ್ತದೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಇದಕ್ಕೆ ದಸರಾ ಉಪಸಮಿತಿ ಕಾರಣವಲ್ಲ. ಈ ಸಂಬಂಧ ಮೈಸೂರು ಜಿಲ್ಲಾ ಅಧೀಕ್ಷಕ ಹಾಗೂ ಯುವ ದಸರಾ ಉಪಸಮಿತಿಯ ಕಾರ್ಯಾಧ್ಯಕ್ಷರೂ ಆಗಿರುವ ರಿಷ್ಯಂತ್ ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ. ಚಂದನ್ ಶೆಟ್ಟಿ ಮತ್ತು ನಿವೇದಿತಾರಿಗೆ ಕಾರಣ ಕೇಳಿ ಪೊಲೀಸ್ ಇಲಾಖೆಯಿಂದ ನೋಟಿಸ್ ನೀಡಲಾಗುತ್ತದೆ ಎಂದು ಕಿಡಿಕಾರಿದ್ದಾರೆ.

Comments are closed.