ಹಾಸನ: ರಸ್ತೆ ಮಧ್ಯದಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ಯುವಕ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡಿರುವ ಘಟನೆ ಹಾಸನ ಚನ್ನರಾಯಪಟ್ಟದಲ್ಲಿ ನಡೆದಿದೆ.
ಹಲ್ಲೆಗೊಳಗಾದ ಯುವಕನನ್ನು ನಗರದ ಎಂ.ಜಿ ರಸ್ತೆಯ ನಿವಾಸಿ ಅಭಿ (26) ಎಂದು ಗುರುತಿಸಲಾಗಿದೆ. ಈ ಘಟನೆ ನಗರದ ನೇತಾಜಿ ರಸ್ತೆಯಲ್ಲಿರುವ ಅರುಣ್ ಐಸ್ ಕ್ರೀಮ್ ಅಂಗಡಿಯ ಮುಂಭಾಗ ನಡೆದಿದ್ದು, ದುಷ್ಕರ್ಮಿಗಳು ಅಭಿಯನ್ನು ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ.
ಇಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ತನ್ನ ಡಿಯೋ ಬೈಕಿನಲ್ಲಿ ಬರುತ್ತಿದ್ದ ಅಭಿಯನ್ನು ಮೂವರು ಯುವಕರು ನಡು ರಸ್ತೆಯಲ್ಲೇ ಅಡ್ಡಗಟ್ಟಿ ಚಾಕುವಿನಿಂದ ಇರಿದು ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ಅಭಿ ಕೂಡ ನಗರದಲ್ಲಿ ರೌಡಿ ಶೀಟರ್ ಆಗಿದ್ದು, ಕಳೆದ ಕೆಲ ತಿಂಗಳ ಹಿಂದೆ ನಾಗಸಮುದ್ರದ ವ್ಯಕ್ತಿಯನ್ನು ಕೊಲೆ ಮಾಡಿ ಜೈಲಿಗೆ ಹೋಗಿದ್ದ. ನಂತರ ಜಾಮೀನು ಪಡೆದು ಹೊರಗೆ ಬಂದಿದ್ದ.
ಹಲ್ಲೆಗೊಳಗಾಗಿ ತೀವ್ರ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಅಭಿಯನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಇರಿತಕ್ಕೊಳಗಾದ ಅಭಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ. ಈ ಸಂಬಂಧ ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Comments are closed.