ದಾವಣಗೆರೆ: ಮಾರ್ಚ್ 5 ರಂದು ರಾಜ್ಯ ಬಜೆಟ್ ಮಂಡನೆ ಮಾಡುತ್ತೇನೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ವಿಭಾಗದ ಸಮಾಜ ಹಾಗೂ ಇಲಾಖೆಗಳೊಂದಿಗೂ ಈಗಾಗಲೇ ಬಜೆಟ್ ಕುರಿತು ಮಾತುಕತೆ ನಡೆಸಲಾಗಿದ್ದು, ಅಂತಿಮ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಮುಂಬರುವ ಮಾರ್ಚ್ 5 ರಂದು ರಾಜ್ಯ ಬಜೆಟ್ ಮಂಡನೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಬಿಜೆಪಿ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದ್ದು, ಕೆಲಸಕ್ಕೆ ಬಾರದ ಸರ್ಕಾರವಾಗಿದೆ ಎಂಬ ಟೀಕೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸಾರ್ಜಜನಿಕರಿಂದ ಚಪ್ಪಾಳೆಗಿಟ್ಟಿಸಿಕೊಳ್ಳಲು ಹಾಗೂ ಪ್ರಚಾರಕ್ಕಾಗಿ ಕಾಂಗ್ರೆಸ್ ನಾಯಕ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆಂದು ಕಿಡಿಕಾರಿದ್ದಾರೆ.
ಇದೇ ವೇಳೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು, ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಅವರು ಭ್ರಮೆಯಲ್ಲಿದ್ದಾರೆಂದು ತಿಳಿಸಿದ್ದಾರೆ.
ಸರ್ಕಾರ ಹೊಸದಾಗಿ ಪೊಲೀಸ್ ಇಲಾಖೆ ಶಕ್ತಿ ಹೆಚ್ಚಿಸಲು ಮತ್ತಷ್ಟು ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುತ್ತಿದೆ. ಇದಷ್ಟೇ ಅಲ್ಲದೆ, ಹೊಸ ಹೊಸ ತಂತ್ರಜ್ಞಾನಗಳನ್ನು ಅಳವಡಿಕೆ ಮಾಡಿಕೊಳ್ಳಲಾಗುತ್ತಿದೆ. ರಾಘವೇಂದ್ರ ಔರಾದ್ಕರ್ ಸಮಿತಿಯ ಶಿಫಾರಸ್ಸುಗಳನ್ನು ಜಾರಿಗೆ ತರಲಾಗುತ್ತದೆ. ರಾಜ್ಯ ಪೊಲೀಸ್ ಪಡೆಗಳಿಗಾಗಿ ಹೊಸ ಮಾದರಿಯಲ್ಲಿ ಕ್ಯಾಂಟೀನ್ ಗಳನ್ನು ಸ್ಥಾಪನೆ ಮಾಡಲಾಗುತ್ತದೆ ಎಂದಿದ್ದಾರೆ.
Comments are closed.