ಬೆಂಗಳೂರು(ಮಾ.09): ರಾಜ್ಯದಲ್ಲಿ ಕೊರೋನಾ ವೈರಸ್ ಭೀತಿ ಶುರುವಾಗಿರುವ ಹಿನ್ನೆಲೆ, ಎಲ್ಲೆಡೆ ಮುನ್ನೆಚ್ಚರಿಕಾ ಕ್ರಮ ವಹಿಸಲಾಗಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ತಗುಲುವ ಭಯದಲ್ಲಿ ಶಿಕ್ಷಣ ಸಚಿವರು ಮುಂಜಾಗ್ರತಾ ಕ್ರಮ ವಹಿಸಿದ್ದಾರೆ.
ಕೊರೋನಾ ಭೀತಿ ಹಿನ್ನೆಲೆ, ಬೆಂಗಳೂರಿನಲ್ಲಿ ಇಂದಿನಿಂದ ಒಂದು ತಿಂಗಳು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಆರೋಗ್ಯ ಇಲಾಖೆಯ ಆಯುಕ್ತರ ಸಲಹೆ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ಬೆಂಗಳೂರು ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ಮಾತ್ರ ಒಂದು ತಿಂಗಳು ರಜೆ ಘೋಷಣೆ ಮಾಡಲಾಗಿದೆ.
ಶಾಲೆಗಳಿಗೆ ರಜೆ ಘೋಷಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಕುರಿತು ಟ್ವೀಟ್ ಸಹ ಮಾಡಿದ್ದಾರೆ.
ಬೆಂಗಳೂರು ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನರ್ಸರಿ, ಎಲ್ಕೆಜಿ ಮತ್ತು ಯುಕೆಜಿ ಮಕ್ಕಳಿಗೂ ರಜೆ ನೀಡಲಾಗಿದೆ. ಮುಂದಿನ ಆದೇಶದವರೆಗೆ ರಜೆ ಮುಂದುವರಿಯಲಿದೆ.
Comments are closed.