
ಬೆಂಗಳೂರು(ಸೆ.04): ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ ಶಿವಕುಮಾರ್ಗೆ ಜ್ವರ ಕಾಣಿಸಿಕೊಂಡಿದೆ. ಹೀಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಕಳೆದ ಎರಡು ವಾರಗಳ ಹಿಂದೆ ಡಿ.ಕೆ. ಶಿವಕುಮಾರ್ ಅವರು ಜ್ವರ ಮತ್ತು ಬೆನ್ನು ನೋವಿನಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಂಡಿದ್ದ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಈ ಬಗ್ಗೆ ಖುದ್ದು ಡಿ.ಕೆ. ಶಿವಕುಮಾರ್ ಖಚಿತಪಡಿಸಿದ್ದರು. ಆಗ ಡಿಕೆಶಿಯವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಕೊರೋನಾ ಕಡಿಮೆಯಾದ ಬಳಿಕ ಡಿಸ್ಚಾರ್ಜ್ ಆಗಿದ್ದರು.
ಇನ್ನು, ಆಸ್ಪತ್ರೆಯಿಂದ ಡಿಸ್ವಾರ್ಜ್ ಆದ ಬಳಿಕ ವೈದ್ಯರ ಸಲಹೆ ಮೇರೆಗೆ ಡಿಕೆಶಿ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ಹಾಗಾಗಿ ಎಲ್ಲಿಯೂ ಹೊರಗೆ ಕಾಣಿಸಿಕೊಂಡಿರಲಿಲ್ಲ. ಆದರೀಗ ಮತ್ತೆ ಡಿಕೆಶಿಗೆ ಆರೋಗ್ಯ ಹದಗೆಟ್ಟಿದೆ. ಕಳೆದ ಎರಡು ದಿನಗಳಿಂದ ಜ್ವರ ಕಾಣಿಸಿಕೊಂಡ ಕಾರಣ ಈಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.
ಡಿ.ಕೆ ಶಿವಕುಮಾರ್ ಅವರಿಗೆ ಕೋವಿಡ್-19 ಪಾಸಿಟಿವ್ ಕಾಣಿಸಿಕೊಂಡಾಗ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಅನೇಕ ಹಿರಿಯ ಕಾಂಗ್ರೆಸ್ಸಿಗರು ದೂರವಾಣಿ ಕರೆ ಮಾಡಿ ಶೀಘ್ರ ಗುಣಮುಖರಾಗಿ ಎಂದು ಹಾರೈಸಿದ್ದರು.
Comments are closed.