ಕರ್ನಾಟಕ

ಶಾಲೆಗಳನ್ನು ಆರಂಭಿಸುವ ಧಾವಂತ ಸರ್ಕಾರಕ್ಕಿಲ್ಲ; ಸಚಿವ ಸುರೇಶ್ ಕುಮಾರ್

Pinterest LinkedIn Tumblr


ಬೆಂಗಳೂರು: ಶಾಲೆಗಳನ್ನು ತೆರೆಯುವ ಧಾವಂತ ನಮ್ಮ ಸರ್ಕಾರಕ್ಕಾಗಲಿ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಮಾಧ್ಯಮಗಳಲ್ಲಿ ಶಾಲೆಗಳ ಆರಂಭಕ್ಕೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿದ್ದು, ಈ ಕುರಿತು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಸಚಿವ ಸುರೇಶ್ ಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಶಾಲೆಗಳನ್ನು ತೆರೆಯುವ ಧಾವಂತ ನಮ್ಮ ಸರ್ಕಾರಕ್ಕಾಗಲಿ ಅಥವಾ ಶಿಕ್ಷಣ ಇಲಾಖೆಗಾಗಲಿ ಖಂಡಿತ ಇಲ್ಲ.‌ ನಮಗೆ ನಮ್ಮ‌ ಮಕ್ಕಳ ಆರೋಗ್ಯ, ಸುರಕ್ಷತೆ ಅತ್ಯಂತ ಮುಖ್ಯ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಮಕ್ಕಳನ್ನು ಬಲಿಕೊಟ್ಟು ಯಾರೂ ಯಾವ ಕಾರ್ಯವನ್ನೂ ಪ್ರತಿಷ್ಟೆಗಾಗಿ ಮಾಡಬಾರದು. ಮಾಡುವುದಿಲ್ಲ. ಶಾಲೆಗಳ ಬಗ್ಗೆ ರಾಜ್ಯದ ಎಲ್ಲಾ ಶಾಸಕರುಗಳ ಅಭಿಪ್ರಾಯವನ್ನು ಸುಮಾರು 9 ದಿವಸಗಳ ಹಿಂದೆ ನಾನು ಕೇಳಿದ್ದೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರಿಂದ ಹಿಡಿದು, ಅನೇಕ ಸಚಿವರು, ಶಾಸಕರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಆರೋಗ್ಯ ಸಚಿವ ಶ್ರೀರಾಮುಲು ಅವರು ಸಹ ಈ ಕುರಿತು ಚರ್ಚೆ ನಡೆಸಿ ನನಗೆ ತಮ್ಮ ಅಭಿಪ್ರಾಯ ನೀಡುವುದಾಗಿ ತಿಳಿಸಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ನನಗೆ ಪತ್ರದ ಮೂಲಕ ಅಭಿಪ್ರಾಯ ತಿಳಿಸಿದ್ದಾರೆ.‌ ಆದರೆ, ಅಭಿಪ್ರಾಯಗಳನ್ನು ಕೇಳಿದ ಮಾತ್ರಕ್ಕೆ ಸರ್ಕಾರ ಶಾಲೆಗಳನ್ನು ಆರಂಭ ಮಾಡುವ ನಿರ್ಧಾರವನ್ನು ಈಗಾಗಲೇ ಕೈಗೊಂಡು ಬಿಟ್ಟಿದೆ ಎಂಬರ್ಥದಲ್ಲಿ ವಿಪುಲವಾಗಿ ಚರ್ಚೆ ನಡೆಯುತ್ತಿರುವುದು ದುರದೃಷ್ಟಕರ ಎಂದು ಬೇಸರವ್ಯಕ್ತಪಡಿಸಿದ್ದಾರೆ.

ನಾನು ಈ ರಾಜ್ಯದ ಶಿಕ್ಷಣ ಸಚಿವ ಮಾತ್ರನಲ್ಲ. ಸುಮಾರು ಒಂದು ಕೋಟಿ ಮಕ್ಕಳ ಪೋಷಕ ಎಂಬುದರ ಅರಿವು ನನಗಿದೆ. ಮತ್ತೆ ಮತ್ತೆ ಇದು ಮರುಕಳಿಸುತ್ತಲೇ ಇದೆ. ನಾನು ಬಾರಿ ಬಾರಿ ಸ್ಪಷ್ಟೀಕರಣ ಕೊಡುತ್ತಲೇ ಇದ್ದೇನೆ. ಈಗಾಗಲೇ , ಮುಖ್ಯಮಂತ್ರಿಗಳು ಸಹ ಈ ಕುರಿತು ಸರ್ಕಾರದ ನಿಲುವನ್ನು ಬಹಳ ಸ್ಪಷ್ಟವಾಗಿ ತಿಳಿಸಿದ್ದಾರೆ. ನಾನು ಮತ್ತೊಮ್ಮೆ, ಮಗದೊಮ್ಮೆ ಸ್ಪಷ್ಟಗೊಳಿಸುತ್ತಿದ್ದೇನೆ.

ಶಾಲೆ ಪ್ರಾರಂಭ ಮಾಡುವ ಯಾವುದೇ ತರಾತುರಿ ನಮ್ಮ ಮುಂದೆ ಇಲ್ಲ. ಶಿಕ್ಷಣ ಇಲಾಖೆಯ ಮುಂದಿನ ತೀರ್ಮಾನವನ್ನು ಮಕ್ಕಳ ಹಿತವನ್ನು ಆದ್ಯತೆಯಲ್ಲಿಟ್ಟುಕೊಂಡು ಎಲ್ಲರೊಡನೆ ಸಮಾಲೋಚನೆಯ ನಂತರ ಕೈಗೊಳ್ಳಲಾಗುವುದು. ಯಾವುದೇ ಪೋಷಕರ ಮನಸ್ಸಿನಲ್ಲಿ ಈ ಕುರಿತು ಕಿಂಚಿತ್ ಸಹ ಗೊಂದಲ ಬೇಡ ಎಂದು ಮನವಿ ಮಾಡಿದ್ದಾರೆ.

Comments are closed.