ಕರ್ನಾಟಕ

ರಾಜ್ಯದಲ್ಲಿ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ..?: ಅಶ್ವತ್ಥ ನಾರಾಯಣ

Pinterest LinkedIn Tumblr


ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡುವ ಬಗ್ಗೆ ಸರಕಾರ ಶೀಘ್ರ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಭಾನುವಾರ ಮಾತನಾಡಿದ ಅವರು, ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡುವ ಬಗ್ಗೆ ದಸರಾ ನಂತರ ಸಭೆ ಕರೆಯಲಾಗಿದೆ. ಲಸಿಕೆ ಯಾವಾಗ ಲಭ್ಯವಾಗುತ್ತದೆ, ಕೇಂದ್ರ ಸರಕಾರ ರಾಜ್ಯಕ್ಕೆ ಅದನ್ನು ಯಾವಾಗ ನೀಡುತ್ತದೆ ಎಂಬುದರ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿದರು.

ಕೊರೊನಾ ಲಸಿಕೆ ನೀಡುವ ಬಗ್ಗೆ ಕಳೆದ ವಾರ ಕೇಂದ್ರ ಸರಕಾರ ನಿರ್ದೇಶನ ನೀಡಿದೆ. ಅದರಂತೆ, ಮಾರ್ಚ್‌ನಿಂದಲೂ ಕೊರೊನಾ ವೈರಸ್‌ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು, ನರ್ಸ್‌ಗಳು, ಅರೆವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಸಿಬ್ಬಂದಿಗೆ ಮೊದಲು ಉಚಿತವಾಗಿ ಕೊರೊನಾ ಲಸಿಕೆಯನ್ನು ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ.

ಕೊರೊನಾ ಸೋಂಖಿತರಿಗೆ ಈಗಾಗಲೇ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಅಂತವರಿಗೆ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತದೆ. ಎಲ್ಲರಿಗೂ ಉಚಿತವಾಗಿ ನೀಡುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಿರ್ಧರಿಸುತ್ತಾರೆ ಎಂದು ಡಿಸಿಎಂ ಹೇಳಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಗೆ ಬಿಜೆಪಿ ಘೋಷಿಸಿದ ಪ್ರಣಾಳಿಕೆಯಲ್ಲಿ ಉಚಿತ ಕೊರೊನಾ ಲಸಿಕೆಯ ಬಗ್ಗೆ ಕೇಸರಿ ಪಕ್ಷ ಪ್ರಸ್ತಾಪಿಸಿತ್ತು. ಅಲ್ಲಿಂದ ಅನೇಕ ರಾಜ್ಯಗಳು ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಘೋಷಿಸಿವೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯದಲ್ಲೂ ಲಸಿಕೆಯನ್ನು ಉಚಿತವಾಗಿ ನೀಡುವಂತೆ ಸರಕಾರಕ್ಕೆ ಒತ್ತಾಯಿಸಿದ್ದಾರೆ.

Comments are closed.