
ಬೆಂಗಳೂರು: ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸಿರುವ ಕ್ರಮಕ್ಕೆ ನಾಡಿನ ಜನ ಆಕ್ರೋಶಗೊಂಡಿದ್ದು, ಇದರಿಂದ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಪ್ರಾಧಿಕಾರವನ್ನು ರಾಜ್ಯದಲ್ಲಿರುವ ಮರಾಠ ಜನಾಂಗದ ಅಭಿವೃದ್ಧಿಗಾಗಿ ರಚಿಸಲಾಗಿದ್ದು, ಇದಕ್ಕೂ ಮರಾಠಿ ಭಾಷೆಗೂ ಯಾವುದೇ ಸಂಬಂಧ ಇಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಮರಾಠ ಜನಾಂಗದವರು ತಲಾತಲಾಂತರಗಳಿಂದ ಕರ್ನಾಟಕದಲ್ಲಿಯೇ ವಾಸವಾಗಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ ಅವರ ಸರ್ವತೋಮುಖ ಅಭಿವೃದ್ಧಿಯಾಗಬೇಕು ಎನ್ನುವ ಆಶಯದಿಂದ ಈ ಪ್ರಾಧಿಕಾರವನ್ನು ಸ್ಥಾಪಿಸಲು ಕ್ರಮವಹಿಸಲಾಗುತ್ತಿದೆ ಎಂದು ಸಿಎಂ ಟ್ವೀಟ್ ಮಾಡಿದ್ದಾರೆ.
ಶನಿವಾರ ಮರಾಠ ಅಭಿವೃದ್ದಿ ಪ್ರಾಧಿಕಾರ ರಚಿಸಿ, 50 ಕೋಟಿ ರೂ. ಮೀಸಲಿರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿತ್ತು. ಯಡಿಯೂರಪ್ಪ ನೇತೃತ್ವದ ಸರಕಾರದ ಈ ಕ್ರಮಕ್ಕೆ ರಾಜ್ಯಾದ್ಯಂತ ಕನ್ನಡ ಪರ ಸಂಘಟನೆಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದವು. ಸರ್ಕಾರದ ನಡೆಯನ್ನು ಓಲೈಕೆಯ ರಾಜಕಾರಣ ಎಂದು ವ್ಯಾಖ್ಯಾನಿಸಿದ್ದ ಕನ್ನಡ ಪರ ಸಂಘಟನೆಗಳು ತನ್ನ ನಿರ್ಧಾರದಿಂದ ಸರಕಾರ ಹಿಂದಕ್ಕೆ ಸರಿಯದಿದ್ದರೆ ಡಿಸೆಂಬರ್ 5ರಂದು ಕರ್ನಾಟಕ ಬಂದ್ ಮಾಡಲು ನಿರ್ಧರಿಸಿವೆ.
ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ಸರಕಾರದ ಈ ನಿರ್ಧಾರ ಮಹತ್ವ ಪಡೆದಿತ್ತು. ಅದರ ಬೆನ್ನಲ್ಲೇ ಮಂಗಳವಾರ ವೀರಶೈವ-ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿ ಸರಕಾರ ಆದೇಶ ಹೊರಡಿಸಿತ್ತು.
Comments are closed.