ಮೈಸೂರು: ಒಂದು ತಿಂಗಳಲ್ಲಿ ಕೊರೊನಾಗೆ ಲಸಿಕೆ ಬರಬಹುದು. ಹೀಗಾಗಿ, ಜಿಲ್ಲಾಮಟ್ಟದಲ್ಲಿ ಲಸಿಕೆ ಹಂಚಲು ಎಲ್ಲಾ ರೀತಿಯಲ್ಲೂ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಎರಡು ದಿನಗಳ ಪ್ರವಾಸಕ್ಕೆ ಆಗಮಿಸಿರುವ ಅವರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೊರೊನಾಗೆ ಲಸಿಕೆ ಹಂಚಲು ಸಿದ್ಧತೆ ಮಾಡಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿಯವರು ತಿಳಿಸಿದ್ದಾರೆ. ಮಂಗಳವಾರ ಹಲವು ರಾಜ್ಯಗಳ ಸಿಎಂ ಸಭೆ ಕರೆದಿದ್ದರು. ಇದರಲ್ಲಿ ಕೊರೊನಾ ಲಸಿಕೆ ವಿಚಾರವಾಗಿಯೇ ತಿಳಿಸಿದ್ದಾರೆ ಎಂದರು.
ಸಭೆಯಲ್ಲಿ ಪ್ರಧಾನಿ ಕೊರೊನಾ ಲಸಿಕೆ ನಾಲ್ಕು ವಾರದೊಳಗೆ ಬರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಕೊರೊನಾ ಲಸಿಕೆಯ ಹಂಚಿಕೆ ವಿಚಾರವಾಗಿ ಬೇಕಾದ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ. ನಾವು ಸಹ ಜಿಲ್ಲಾಮಟ್ಟದಲ್ಲಿ ಲಸಿಕೆ ಹಂಚಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಅಲ್ಲದೇ ಬೇಕಾದ ತಯಾರಿ ನಡೆದಿದೆ ಎಂದು ತಿಳಿಸಿದರು.
ನಗರದ ನಜರ್ಬಾದ್ನ ಕುಪ್ಪಣ್ಣ ಉದ್ಯಾನ ಮತ್ತು ಮಕ್ಕಳ ಉದ್ಯಾನದ ನಡುವೆ ನಿರ್ಮಾಣವಾಗಿರುವ ಮೈಸೂರಿನ ನಗರ ಪೊಲೀಸ್ ಆಯುಕ್ತರ ನೂತನ ಕಚೇರಿ ಹಾಗೂ ಪೊಲೀಸ್ ವಸತಿ ಗೃಹಗಳನ್ನು ಮಂಗಳವಾರ ಸಂಜೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ಎಸ್.ಎ.ರಾಮದಾಸ್, ಮೇಯರ್ ತಸ್ನಿಂ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪರಿಮಳ ಶ್ಯಾಂ, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ತನ್ವೀರ್ ಸೇಠ್, ಎಚ್.ವಿಶ್ವನಾಥ್, ಆರ್. ಧರ್ಮಸೇನ, ಕೆ.ಟಿ.ಶ್ರೀಕಂಠೇಗೌಡ, ಎಲ್.ನಾಗೇಂದ್ರ, ಕೆ.ಮಹದೇವ, ಹರ್ಷವರ್ಧನ್, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ತಾಪಂ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ.ರಿಷ್ಯಂತ್, ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ ಮತ್ತಿತರರು ಇದ್ದರು.
Comments are closed.