ಕರ್ನಾಟಕ

ಆಕ್ಸಿಜನ್-ರೆಮ್​ಡಿಸಿವಿರ್​ ಅಕ್ರಮ ಮಾರಾಟ ಮಾಡುವವರ ವಿರುದ್ದ ಕಠಿಣ ಕ್ರಮ: ಯಡಿಯೂರಪ್ಪ ಎಚ್ಚರಿಕೆ

Pinterest LinkedIn Tumblr

ಬೆಂಗಳೂರು: ಆಕ್ಸಿಜನ್ ಕೊರತೆಯಿಂದಾಗಿ ನಿನ್ನೆ ಚಾಮರಾಜನಗರದ ಸರ್ಕಾರಿ ಆಸ್ಪತ್ರೆಯಲ್ಲಿ 24 ಜನ ಕೊರೋನಾ ರೋಗಿಗಳು ಮೃತಪಟ್ಟಿದ್ದರು. ಇಂದು ಕಲಬುರ್ಗಿಯ ಅಫಜಲಪುರ ತಾಲೂಕು ಆಸ್ಪತ್ರೆಯಲ್ಲಿ 4 ಜನ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಇಂದು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಅಲ್ಲದೆ, ಸಭೆಯಲ್ಲಿ “ಆಕ್ಸಿಜನ್ ಕೊರತೆ ಮತ್ತು ರೆಮ್​ಡಿಸಿವಿರ್​ ಅಕ್ರಮ ಮಾರಾಟ ಬಗ್ಗೆ ನನಗೆ ಮಾಹಿತಿ ಇದೆ. ಈ ಬಗ್ಗೆ ವಿಸ್ಕೃತ ತನಿಖೆ ನಡೆಸಲಾಗುವುದು. ಅಲ್ಲದೆ, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದಾರೆ.

ಈಗಾಗಲೇ ಹಲವೆಡೆ ವೈದ್ಯರು ರೆಮ್​ಡಿಸಿವಿರ್​ ಔಷಧವನ್ನು ಅಧಿಕ ಬೆಲೆಗೆ ಮಾರಾಟ ಮಾಡಿ ಪೊಲೀಸರ ಅತಿಥಿಯಾದ ಬಗ್ಗೆ ಸಾಕಷ್ಟು ವರದಿಗಳಾಗಿವೆ. ಹೀಗಾಗಿ ಈ ವಿಚಾರವನ್ನು ಸರ್ಕಾರ ಸಹ ಗಂಭೀರವಾಗಿ ಪರಿಗಣಿಸಿದೆ.

ರಾಜ್ಯದಲ್ಲಿ ರೆಮಿಡಿಸಿವರ್ ಕೊರತೆ ಮತ್ತು ಕಾಲಸಂತೆಯಲ್ಲಿ ಮಾರಾಟ ಮಾಡಲಾಗುತ್ತಿರುವುದರಿಂದಲೂ ಕೋವಿಡ್ ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆ ಹಿರಿಯ ಅಧಿಕಾರಿಗಳ ಹಾಗೂ ಉತ್ಪಾದಕರ ತುರ್ತುಸಭೆ ಕರೆದಿದ್ದ ಸಿಎಂ ಯಡಿಯೂರಪ್ಪ, “ಆಕ್ಸಿಜನ್ ಮತ್ತು ರೆಮ್‌ಡಿಸಿವಿಯರ್ ಗಳನ್ನು ಬ್ಲಾಕ್ ಮಾರುಕಟ್ಟೆಯಲ್ಲಿ ಮಾರಾಟ ಮಾಡಲಾಗುತ್ತಿದೆ. ಈಗ ಬಗ್ಗೆ ನಮಗೆ ಮಾಹಿತಿ ಇದೆ. ಹಿರಿಯ ಅಧಿಕಾರಿಗಳು ಏನು ಮಾಡ್ತಿದ್ದೀರಿ?” ಎಂದು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಕಿಡಿಕಾರಿದ್ದಾರೆ.

ಅಲ್ಲದೆ, ಅಧಿಕಾರಿಗಳಿಗೆ ಎಚ್ಚರಿಕೆ ನೀಡಿರುವ ಅವರು, “ಆಕ್ಸಿಜನ್ ಕೊರತೆ, ರೆಮ್ ಡಿಸಿವಿಯರ್ ಅಕ್ರಮ ಮಾರಾಟದ ಬಗ್ಗೆ ತನಿಖೆಗೆ ಆದೇಶ ಮಾಡುತ್ತೇನೆ. ಇದರಲ್ಲಿ ತಪ್ಪಿತಸ್ಥ ಅಧಿಕಾರಿಗಳನ್ನು ಬಿಡುವುದಿಲ್ಲ. ಮುಂದೆ ನೀವು ಸಂಕಷ್ಟ ಅನುಭವಿಸಬೇಕಾಗುತ್ತದೆ” ಎಂದು ಅಧಿಕಾರಿಗಳ ಮೇಲೆ ಮುಖ್ಯಮಂತ್ರಿ ಯಡಿಯೂರಪ್ಪ ಕಿಡಿಕಾರಿದ್ದಾರೆ ಎಂದು ತಿಳಿದುಬಂದಿದೆ.

“ರಾಜ್ಯದಲ್ಲಿ ಇಂದು ಕೊರೊನಾ ಸೋಂಕು ವ್ಯಾಪಕವಾಗಿದೆ. ಇದು ಅತ್ಯಂತ ಕ್ಲಿಷ್ಟಕರವಾದ ಸಂದರ್ಭ. ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನಮ್ಮ ಜೊತೆಗೆ ನಿಂತಿದೆ. ಆದ್ರೆ, ಕೆಲ ಅಧಿಕಾರಿಗಳು ರೆಮಿಡಿಸಿವಿರ್ ಡೋಸ್‌ಗಳನ್ನು ಅನ್ಯ ರಾಜ್ಯಗಳಿಗೆ ಕಳುಹಿಸುತ್ತಿದ್ದಾರೆ ಎಂಬ ಮಾಹಿತಿ ನಮಗೆ ಬಂದಿದೆ. ನಾನು ಇದರ ಬಗ್ಗೆ ತನಿಖೆ ಮಾಡಿಸುತ್ತೇನೆ. ಇದರಲ್ಲಿ ಯಾರನ್ನು ಕಾಪಾಡುವ ಮಾತಿಲ್ಲ. ನಾನು‌ ಇಂದು ಸಭೆ ಕರೆದಿರುವುದೇ ರೆಮಿಡಿಸಿವಿರ್ ಬಗ್ಗೆ ಅರಿಯಲು.

ನನಗೂ ಮಾಹಿತಿ ಇದೆ. ನಾನು ಇದನ್ನು ತನಿಖೆಗೆ ವಹಿಸಿದರೇ, ಸತ್ಯ ಹೊರ ಬರುತ್ತದೆ. ಯಾವುದೇ ಅಧಿಕಾರಿಗಳು ಇದರಲ್ಲಿ ಭಾಗಿಯಾದ್ರೆ ಪರಿಣಾಮ ಭೀಕರವಾಗಿರಲಿದೆ. ಇದನ್ನೇ ಎಚ್ಚರಿಕೆ ಎಂದು ಭಾವಿಸಿ. ಮುಂದೆ ಜನರ ಸೇವೆ ಬದ್ಧರಾಗಿರಿ. ಇಲ್ಲವಾದ್ರೆ, ತನಿಖೆ ಮಾಡಿಸಿ ಎಲ್ಲವನ್ನೂ ಬಯಲಿಗೇಳೆಯುತ್ತೇನೆ‌. ಯಾವುದೇ ಅಧಿಕಾರಿಗಳನ್ನು ಕಾಪಾಡುವುದಿಲ್ಲ. ಹೀಗಾಗಿ ಎಚ್ಚರಿಕೆಯಿಂದ ಕೆಲಸ ಮಾಡಿ” ಎಂದು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದ್ದಾರೆ.

ದೇಶದಲ್ಲಿ ಕೈಮೀರಿದ ಕೊರೋನಾ
ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ. ಕೊರೋನಾ ಸೋಂಕು ಹರಡುವಿಕೆ ಶರವೇಗವನ್ನು ಪಡೆದುಕೊಂಡಿದೆ.‌ ಹಲವು ನಿರ್ಬಂಧಗಳ ನಡುವೆಯೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಕೊರೋನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ‌.‌ ಏಪ್ರಿಲ್ 4ರಿಂದ ದಿನ ಒಂದರಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನರು, ಏಪ್ರಿಲ್ 14ರಿಂದ ದಿನ ಒಂದರಲ್ಲಿ ಎರಡು ಲಕ್ಷಕ್ಕೂ ‌ಹೆಚ್ಚು‌ ಜನರು ಹಾಗೂ ಏಪ್ರಿಲ್ 17ರಿಂದ ದಿನ‌ ಒಂದರಲ್ಲಿ ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕು ಪೀಡಿತರಾಗುತ್ತಿದ್ದರು. ಈಗ ಮೂರೂವರೆ ಲಕ್ಷಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಗೋಚರಿಸಲು ಆರಂಭಿಸಿವೆ. ಅಲ್ಲದೆ ದೇಶದ ಕೊರೊನಾ ಪೀಡಿತರ ಸಂಖ್ಯೆ ಎರಡು ಕೋಟಿ ದಾಟಿದೆ.ಇದನ್ನೂ ಓದಿ: Coronavirus India Updates: ದೇಶದಲ್ಲಿ 2 ಕೋಟಿ ದಾಟಿದ ಕೊರೋನಾ ಪೀಡಿತರ ಸಂಖ್ಯೆ!

ಸೋಮವಾರ 3,57,229 ಹೊಸ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ ಗುಣ ಆಗಿರುವವರು 3,20,289 ಜನ ಮಾತ್ರ. ಇದರಿಂದ ದೇಶದಲ್ಲಿ ಈವರೆಗೆ ಕೊರೋನಾ ಸೋಂಕು ಪೀಡಿತರಾದವರ ಸಂಖ್ಯೆ ಎರಡು ಕೋಟಿ ದಾಟಿದ್ದು 2,02,82,833ಕ್ಕೆ ಏರಿಕೆ ಆಗಿದೆ.‌ ಇದಲ್ಲದೆ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ‌ ಹೆಚ್ಚಾಗಿದ್ದು ದೇಶದಲ್ಲಿ ಇದೀಗ ದಿನ ಒಂದರಲ್ಲಿ ಮೂರು ಸಾವಿರಕ್ಕೂ ಹೆಚ್ಚು ಜನ‌ ಸಾವನ್ನಪ್ಪುತ್ತಿದ್ದಾರೆ. ಸೋಮವಾರ 3,449 ಜನರು ಬಲಿ ಆಗಿದ್ದು ಈವರೆಗೆ ಮಹಾಮಾರಿ ಕೊರೋನಾಗೆ ಬಲಿ ಆದವರ ಸಂಖ್ಯೆ 2,22,408ಕ್ಕೆ ಏರಿಕೆ ಆಗಿದೆ.

ದೇಶದಲ್ಲಿ ಮೊತ್ತ ಮೊದಲ ಬಾರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು 2020ರ ಜನವರಿ 30ರಂದು; ಕೇರಳದಲ್ಲಿ. ಅದಾದ ಬಳಿಕ ಅದು ಲಕ್ಷದ ಗಡಿ ಬಳಿ ಬರಲು ಹೆಚ್ಚು ಕಡಿಮೆ ಎಂಟು ತಿಂಗಳು ಹಿಡಿದವು. ಆಗಲೂ ದಿನ ಒಂದರಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಒಂದು ಲಕ್ಷ ದಾಟಿರಲಿಲ್ಲ. 2020ರ ಸೆಪ್ಟೆಂಬರ್ 17ರಂದು 98,795 ಕೇಸ್ ಕಂಡುಬಂದಿದ್ದೇ ಈವರೆಗಿನ ದಾಖಲೆ ಆಗಿತ್ತು.

Comments are closed.