ಮೈಸೂರು: ಮೈಸೂರು ನಗರ ಪಾಲಿಕೆ ಆಯುಕ್ತರಾದ ಶಿಲ್ಪಾ ನಾಗ್ ಗುರುವಾರ ರಾಜೀನಾಮೆ ಘೋಷಿಸಿದ್ದಾರೆ. ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವರ್ತನೆಯಿಂದ ಬೇಸತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾಗಿ ಅವರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ಕೆಲಸ ಮಾಡಲು ಅನುಕೂಲಕರ ವಾತಾವರಣವಿಲ್ಲ ಆದ್ದರಿಂದ ರಾಜೀನಾಮೆ ನೀಡುತ್ತಿದ್ದೇನೆ. ರಾಜೀನಾಮೆ ಪತ್ರವನ್ನು ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರಿಗೆ ಕಳುಹಿಸಿದ್ದೇನೆ ಎಂದರು.
ನಗದಲ್ಲಿ ಸೂಕ್ತವಾಗಿ ಕೊರೋನಾ ನಿರ್ವಹಣೆ ಮಾಡಿದ್ರೂ, ಪಾಲಿಕೆ ಕೆಲಸ ಮಾಡುತ್ತಿಲ್ಲ ಎಂದು ಬಿಂಬಿಸಲಾಗಿದೆ. ಡಿಸಿ ರೋಹಿಣಿ ಸಿಂಧೂರಿ ವಿರುದ್ದ ಆರೋಪಿಸಿರುವ ಶಿಲ್ಪನಾಗ್, ಮಾಧ್ಯಮಗಳಲ್ಲಿ ಪಾಲಿಕೆ ಚೆನ್ನಾಗಿ ಕೆಲಸ ಮಾಡುತ್ತಿದೆ ಎಂಬ ವರದಿ ಬಂದ ಹಿನ್ನೆಲೆಯಲ್ಲಿ ನನ್ನನ್ನ ಟಾರ್ಗೆಟ್ ಮಾಡಲಾಗಿದೆ. ನನಗೆ ಕೆಲಸ ಮಾಡುವ ಆಸಕ್ತಿಯೇ ಇಲ್ಲದಂತಾಗಿದೆ. ಜಿಲ್ಲಾಡಳಿತದಿಂದ ನಮಗೆ ಯಾವುದೇ ಸಹಕಾರ ದೊರೆತಿಲ್ಲ. ಸಿಎಸ್ಆರ್ ಫಂಡ್ನಿಂದ ನಾವು ಕೆಲಸ ಮಾಡುತ್ತಿದ್ದೇವೆ. ಎಲ್ಲರಿಗೂ ಒಂದು ಸಹನೆ ಇರುತ್ತೆ, ಸಹನೆ ಒಡೆದಾಗ ಏನು ಮಾಡಬೇಕು. ಒಬ್ಬರು ಐಎಎಸ್ ಅಧಿಕಾರಿಯಾಗಿ ಮತ್ತೊಬ್ಬ ಅಧಿಕಾರಿ ಮೇಲೆ ದಬ್ಬಾಳಿಕೆ ಮಾಡೋದು ಎಷ್ಟು ಸರಿ. ನನ್ನನ್ನ ತುಳಿಯುವ ವ್ಯವಸ್ಥಿತ ಪಿತೂರಿ ನಡೆದಿದೆ. ಯಾವುದೇ ಅಧಿಕಾರಿಗೂ ಈ ರೀತಿಯ ಜಿಲ್ಲಾಧಿಕಾರಿ ಸಿಗದಿರಲಿ ಎಂದು ಪತ್ರ ಬರೆದಿದ್ದಾರೆ.
ಕಾಲಿಗೆ ಬಿದ್ದ ಸೆಕ್ಯುರಿಟಿ ಗಾರ್ಡ್
ಶಿಲ್ಪಾನಾಗ್ ಕಾಲಿಗೆ ಬಿದ್ದು ಹೋಗಬೇಡಿ ಎಂದು ಸೆಕ್ಯುರಿಟಿ ಗಾರ್ಡ್ ಮನವಿ ಮಾಡಿದ್ದಾರೆ. ಶಿಲ್ಪನಾಗ್ ತಮ್ಮ ಹುದ್ದೆಗೆ ರಾಜೀನಾಮೆ ಘೋಷಿಸಿ ಪಾಲಿಕೆಯಿಂದ ಹೊರ ನಡೆಯುತ್ತಿದ್ದಾಗ ಈ ಘಟನೆ ನಡೆಯಿತು. ಆದರೆ
ಕೈಮುಗಿದು ಕಾರು ಏರಿ ಹೊರಟರು ಶಿಲ್ಪಾನಾಗ್.
ಶಿಲ್ಪಾ ನಾಗ್ ಅವರು 2014ರ ಬ್ಯಾಚಿನ್ ಐಎಎಸ್ ಅಧಿಕಾರಿಯಾಗಿದ್ದು, ಫೆಬ್ರವರಿ 2021ರಿಂದ ಮೈಸೂರು ನಗರ ಪಾಲಿಕೆ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಶಿಲ್ಪಾನಾಗ್ ರಾಜೀನಾಮೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್, ಶಿಲ್ಪಾ ನಾಗ್ ಸೇವೆಯಲ್ಲಿ ಮುಂದುವರೆಯುವಂತೆ ಮನವೊಲಿಸಲಾಗುವುದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡುತ್ತೇನೆ.ನಾಳೆ ಮೈಸೂರು ಪ್ರವಾಸ ಕೈಗೊಂಡಿದ್ದು, ಖುದ್ದು ಭೇಟಿಯಾಗಿ ಮಾತನಾಡುವುದಾಗಿ ತಿಳಿಸಿದ್ದಾರೆ.
Comments are closed.