
ನವದೆಹಲಿ: 2002ರ ಹಿಟ್ ಆಂಡ್ ರನ್ ಪ್ರಕರಣದಲ್ಲಿ ಹೈಕೋರ್ಟ್ ನಿಂದ ಕ್ಲೀನ್ ಚಿಟ್ ಪಡೆದಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ.
ಸಲ್ಮಾನ್ ಖಾನ್ ಖುಲಾಸೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಮಹಾರಾಷ್ಟ್ರ ಸರ್ಕಾರ ಸಿದ್ಧತೆ ನಡೆಸಿದೆ ಎಂದು ವರದಿಗಳು ತಿಳಿಸಿವೆ.
2002ರ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಕೆಳ ನ್ಯಾಯಾಲಯ ನೀಡಿರುವ ತೀರ್ಪು ತಪ್ಪಿನಿಂದ ಕೂಡಿದ್ದು, ಖಾನ್ ವಿರುದ್ಧದ ಆರೋಪ ಸಾಬೀತುಪಡಿಸಲು ಬಲವಾದ ಸಾಕ್ಷ್ಯಗಳಿಲ್ಲ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದ ಬಾಂಬೆ ಹೈಕೋರ್ಟ್ ನಟ ಸಲ್ಮಾನ್ ಖಾನ್ ಅವರನ್ನು ಎಲ್ಲಾ ಆರೋಪಗಳಿಂದ ಖುಲಾಸೆಗೊಳಸಿ ಇತ್ತೀಚೆಗಷ್ಟೇ ತೀರ್ಪು ನೀಡಿತ್ತು.
ಬಾಂದ್ರಾದಲ್ಲಿರುವ ಬೇಕರಿ ಹೊರಗಿನ ಫುಟ್ ಪಾತ್ ಮೇಲೆ ಮಲಗಿದ್ದವರ ಮೇಲೆ 2002ರ ಸೆಪ್ಟೆಂಬರ್ 28ರಂದು ಸಲ್ಮಾನ್ ಖಾನ್ ಟೋಯೊಟಾ ಲ್ಯಾಂಡ್ ಕ್ರೂಸೆರ್ ಕಾರು ಹರಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್ ಖಾನ್ ಅವರನ್ನು ದೋಷಿ ಎಂದು ತೀರ್ಪು ನೀಡಿ, ಐದು ವರ್ಷ ಜೈಲುಶಿಕ್ಷೆ ವಿಧಿಸಿತ್ತು. ಅದೇ ದಿನ ಹೈಕೋರ್ಟ್ ಖಾನ್ ಗೆ ಜಾಮೀನು ನೀಡಿತ್ತು. ಬಳಿಕ ಕೆಳ ಕೋರ್ಟ್ ನ ತೀರ್ಪನ್ನು ಪ್ರಶ್ನಿಸಿ ಖಾನ್ ಹೈಕೋರ್ಟ್ ಮೆಟ್ಟಿಲೇರಿದ್ದರು.