ಚೆನ್ನೈ: ಕಾವೇರಿ ವಿವಾದದ ಬಗ್ಗೆ ಸುಪ್ರೀಂಕೋರ್ಟ್ ನ ವಿಭಾಗೀಯ ಪೀಠದ ತೀರ್ಪಿನ ಬಗ್ಗೆ ಸೂಪರ್ ಸ್ಟಾರ್ ರಜನೀಕಾಂತ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ತಮಿಳುನಾಡಿಗೆ ಬಿಡುವ ನೀರಿನ ಪ್ರಮಾಣವನ್ನು ಕಡಿಮೆ ಮಾಡಿ ಆದೇಶ ಹೊರಡಿಸಿರುವುದು ನಿರಾಸೆ ತಂದಿದೆ, ತಮಿಳುನಾಡು ಸರ್ಕಾರ, ತೀರ್ಪಿನ ವಿರುದ್ಧ ಪರಿಶೀಲನಾ ಅರ್ಜಿ ಸಲ್ಲಿಸಬೇಕೆಂದು ಟ್ವೀಟ್ ಮಾಡಿದ್ದಾರೆ.
ತಮಿಳುನಾಡಿಗೆ ನೀರಿನ ಹಂಚಿಕೆ ಪ್ರಮಾಣವನ್ನು ಕಡಿತಗೊಳಿಸಿ ನೀಡಿರುವ ಸುಪ್ರೀಂ ತೀರ್ಪು, ತಮಿಳುನಾಡಿನ ರೈತರ ಜೀವನದ ಮೇಲೆ ಪರಿಣಮ ಬೀರುತ್ತದೆ ಎಂದು ಹೇಳಿರುವ ರಜನಿ, ತಾವು ಶೀಘ್ರವೇ ರಾಜಕೀಯ ಪ್ರವೇಶಿಸಲಿದ್ದು, ಅಲ್ಲಿಯವರೆಗೂ ರಾಜ್ಯ ಸರ್ಕಾರ ಕ್ರಮ ಕೈಗೊಂಡು ಪರಿಶೀಲನಾ ಅರ್ಜಿ ಸಲ್ಲಿಸಬೇಕೆಂದು ಟ್ವಿಟ್ ನಲ್ಲಿ ಬರೆದಿದ್ದಾರೆ.
ಕರ್ನಾಟಕಕ್ಕೆ ಒಟ್ಟು 284.75 ಟಿಎಂಸಿ ನೀರು ಬಳಸಿಕೊಳ್ಳಬಹುದು ಹಾಗೂ ಬೆಂಗಳೂರಿಗೆ ಕುಡಿಯುವ ನೀರಿಗಾಗಿ 4.75 ಟಿಎಂಸಿ ನೀರು ಬಳಸಿಕೊಳ್ಳಬಹುದಾಗಿದೆ. ತಮಿಳುನಾಡಿಗೆ ಪ್ರತಿ ವರ್ಷ ಹರಿಸುತ್ತಿದ್ದ ನೀರಿನ ಪ್ರಮಾಣದಲ್ಲಿ ಇಳಿಕೆ ಮಾಡಿದ್ದು, ತಮಿಳುನಾಡಿಗೆ 177.25 ಟಿಎಂಸಿ ನೀರು ನಿಗದಿ ಪಡಿಸಿದೆ. ಈ ಮೂಲಕ ಕರ್ನಾಟಕ 14.75 ಟಿಎಂಸಿ ನೀರು ಹೆಚ್ಚುವರಿಯಾಗಿ ಬಳಸಿಕೊಳ್ಳಬಹುದಾಗಿದೆ.
Comments are closed.