ಬೆಂಗಳೂರು: ಕನ್ನಡದಲ್ಲಿ ಈಗಂತೂ ಹೊಸಬರ ಚಿತ್ರಗಳು ಗಮನಸೆಳೆಯುತ್ತಿವೆ. ಜೊತೆಗೆ ಒಂದಷ್ಟು ನಿರೀಕ್ಷೆಯನ್ನೂ ಹುಟ್ಟಿಸುತ್ತಿವೆ. ಈ ಸಾಲಿನಲ್ಲಿ ನಟ ಆರ್ಯವರ್ಧನ್ ನಾಯಕರಾಗಿ ನಟಿಸಿರುವ ‘ಖನನ’ ಚಿತ್ರ ಈಗ ಬಿಡಗಡೆಯ ಹೊಸ್ತಿಲಲ್ಲಿ ನಿಂತಿದ್ದು ಸಿನಿ ಪ್ರೇಕ್ಷಕರಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ.
‘ಖನನ’ ಚಿತ್ರದಲ್ಲಿ ಕರಿಷ್ಮಾ ಬಾರುಹ್ ನಾಯಕಿಯಾಗಿ ನಟಿಸಿದ್ದಾರೆ. ಚಿತ್ರದ ಪ್ರಮುಖ ಪಾತ್ರ ಹಾಗೂ ವಿಲನ್ ಶೇಡ್ನಲ್ಲಿ ನಟ ಯುವ ಕಿಶೋರ್ ಕಾಣಿಸಿಕೊಂಡಿದ್ದಾರೆ. ಮೇ ತಿಂಗಳಲ್ಲಿ ಚಿತ್ರ ಬಿಡುಗಡೆ ಮಾಡಲು ತಯಾರಿ ನಡೆಸಿದ್ದಾರೆ.
ಶೀರ್ಷಿಕೆಯ ಬಗ್ಗೆಯೇ ಪ್ರೇಕ್ಷಕರು ಆಕರ್ಷಿತರಾಗಿ ತಲೆ ಕೆಡಿಸಿಕೊಳ್ಳುವಂತೆ ಮಾಡುವಂಥಾ ಟ್ರೆಂಡ್ ಇತ್ತೀಚೆಗೆ ಶುರುವಾಗಿದೆ. ಹುಡುಕಿದರೆ ಬಹಳಷ್ಟು ಅರ್ಥವತ್ತಾದ ವಿಚಾರಗಳನ್ನು ಹೊಮ್ಮಿಸುವಂಥಾ ಶೀರ್ಷಿಕೆಗಳೂ ಹಲವಾರಿವೆ. ಖನನ ಕೂಡಾ ಅದೇ ಥರದ ಸಮ್ಮೋಹಕ ಶೀರ್ಷಿಕೆ ಹೊಂದಿರುವ ಚಿತ್ರ.
ಖನನ ಎಂಬುದು ಸಂಸ್ಕೃತ ಪದ. ಇದರ ಅರ್ಥಕ್ಕೆ ತಕ್ಕುದಾದ ಕಥೆಯನ್ನೂ ಈ ಚಿತ್ರ ಹೊಂದಿದೆ. ಸಸ್ಪೆನ್ಸ್ ಥ್ರಿಲ್ಲರ್ ಜಾನರಿನ ಖನನ ಪಕ್ಕಾ ಕಮರ್ಶಿಯಲ್ ಮಾದರಿಯಲ್ಲಿಯೇ ತಯಾರಾಗಿದೆ. ನಿರ್ದೇಶಕ ರಾಧಾ ಹೇಳಿ ಕೇಳಿ ತೆಲುಗು ಚಿತ್ರರಂಗದಲ್ಲಿ ಪಳಗಿಕೊಂಡಿರುವವರು. ಭಾರೀ ಬಜೆಟ್ಟಿನ ಸೂಪರ್ ಹಿಟ್ ಚಿತ್ರಗಳಿಗೂ ಕೆಲಸ ಮಾಡಿರುವವರು. ಆದ್ದರಿಂದಲೇ ಕನ್ನಡಕ್ಕೆ ತುಂಬಾ ಅಪರೂಪವಾಗಿರೋ ಖನನ ಕಥೆಯನ್ನವರು ಕಮರ್ಶಿಯಲ್ ರೂಪದಲ್ಲಿಯೇ ಕಟ್ಟಿ ಕೊಟ್ಟಿದ್ದಾರಂತೆ.
ಇಲ್ಲಿಯ ಕಥೆ ಬರೀ ಕಲ್ಪನೆಯ ಮೂಸೆಯಲ್ಲಿ ಅರಳಿಕೊಂಡಿರೋದಲ್ಲ. ಬದುಕಿಗೆ ಹತ್ತಿರವಾದ, ಗೊಂದಲದ ಸಿಕ್ಕು ಬಿಡಿಸುತ್ತಲೇ ಥರ ಥರದ ಸಾಕ್ಷಾತ್ಕಾರ ಮಾಡಿಸುವಂಥಾ ತಿರುಳನ್ನು ಹೊಂದಿದೆಯಂತೆ. ಎಲ್ಲ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗುವಂಥಾ ಈ ಕಥೆ ಥೇಟರಿನಿಂದ ಹೊರಬಂದ ನಂತರವೂ ಪ್ರೇಕ್ಷಕರನ್ನು ಬಿಟ್ಟೂ ಬಿಡದಂತೆ ಕಾಡುವಂತಿದೆಯಂತೆ.
ಖನನ ಚಿತ್ರದಲ್ಲಿ ಅಂಥಾದ್ದೇನಿದೆ ಅನ್ನೋದು ಮುಂದಿನ ತಿಂಗಳು ಖಂಡಿತಾ ಜಾಹೀರಾಗಲಿದೆ. ಯಾಕೆಂದರೆ ಮೇ ತಿಂಗಳಲ್ಲಿ ಈ ಚಿತ್ರ ಕನ್ನಡ, ತೆಲುಗು ಹಾಗು ತಮಿಳು ಸೇರಿದಂತೆ ಮೂರು ಭಾಷೆಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ.
ಈ ಸಿನಿಮಾದ ಮತ್ತೊಂದು ವಿಶೇಷ ಅಂದರೆ, ಅಸ್ಸಾಂ ಮೂಲದ ಹುಡುಗಿ ಕರಿಷ್ಮಾ ಬರುಹಾ ಈ ಚಿತ್ರದ ಮೂಲಕ ಸಾಂಡಲ್ವುಡ್ ಪ್ರವೇಶ ಮಾಡಿದ್ದಾರೆ. ಅದೊಂದು ನಾಯಕಿಯ ಪಾತ್ರವಾಗಿದ್ದರೂ, ನೆಗೆಟಿವ್ ಶೇಡ್ ಇರುವಂಥ ಹಿನ್ನೆಲೆ ಪಾತ್ರಕ್ಕಿದೆ. ಅವಿನಾಶ್ ದಕ್ಷ ಪೋಲಿಸ್ ಅಧಿಕಾರಿಯಾಗಿ ಕಾಣಿಸಿಕೊಂಡರೆ, ಓಂ ಪ್ರಕಾಶ್ ರಾವ್ ಡಾಕ್ಟರ್ ಗೆಟಪ್ನಲ್ಲಿ ರಂಜಿಸಲಿದ್ದಾರಂತೆ. ಚಿತ್ರದಲ್ಲಿ ಯೋಗೇಶ್, ಮಹೇಶ್ ಸಿದ್ದು, ವಿನಯ ಪ್ರಸಾದ್ ಇತರರು ನಟಿಸಿದ್ದಾರೆ.
ಈ ಚಿತ್ರಕ್ಕೆ ಬಿ.ಶ್ರೀನಿವಾಸ್ರಾವ್ ನಿರ್ಮಾಪಕರು. ಚಿತ್ರಕ್ಕೆ ಕುನ್ನಿ ಗುಡಿಪಾಟಿ ಸಂಗೀತ ನೀಡಿದ್ದು, ಚಿತ್ರಕ್ಕೆ ರಮೇಶ್ ತಿರುಪತಿ ಛಾಯಾಗ್ರಹಣವಿದೆ.
ACME ಮೂವೀಸ್ ಇಂಟರ್ ನ್ಯಾಷನಲ್ ಸಂಸ್ಥೆಯ ಬ್ಯಾನರಿನಡಿಯಲ್ಲಿ ಮಂಗಳೂರು ಮೂಲದ ದುಬೈಯ ಖ್ಯಾತ ಉದ್ಯಮಿ ಹಾಗೂ ಹೆಸರಾಂತ ಹಿನ್ನೆಲೆ ಗಾಯಕ ಹರೀಶ್ ಶೇರಿಗಾರ್ ಹಾಗು ಅವರ ಧರ್ಮ ಪತ್ನಿ ಶರ್ಮಿಳಾ ಶೇರಿಗಾರ್ ನಿರ್ಮಾಣದಲ್ಲಿ, ಕೋಡ್ಲು ರಾಮಕೃಷ್ಣ ನಿರ್ದೇಶನದಲ್ಲಿ ಮೂಡಿಬಂದ ‘ಮಾರ್ಚ್ 22’ ಚಿತ್ರದಲ್ಲಿ ನಟ ಆರ್ಯವರ್ಧನ್ ನಾಯಕನಾಗಿ ನಟಿಸಿದ್ದರು.