ಮುಂಬೈ: ಟೀಂ ಇಂಡಿಯಾ ಇನ್ನು ಮುಂದೆ ಪಾಕಿಸ್ತಾನದ ಜೊತೆ ಕ್ರಿಕೆಟ್ ಆಡಲ್ಲ. ಪಾಕಿಸ್ತಾನ ಭಯೋತ್ಪಾದನೆಯನ್ನು ಪ್ರಾಯೋಜಿಸುತ್ತಿದೆ. ಹೀಗಾಗಿ ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಹೇಳಿದ್ದಾರೆ.
ಕಳೆದ ವಾರ ಉರಿಯಲ್ಲಿ ಸೇನಾ ನೆಲೆಯ ಮೇಲೆ ದಾಳಿ ನಡೆಸಿದ್ದ ನಾಲ್ವರು ಉಗ್ರರು 18 ಯೋಧರನ್ನು ಹತ್ಯೆ ಮಾಡಿದ್ದರು. ಆನಂತರ ಭಾರತ ಎಲ್ಲಾ ವಿಧದಲ್ಲೂ ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಎಂದು ಬಿಂಬಿಸಿದೆ.
ಪಾಕಿಸ್ತಾನ ಭಯೋತ್ಪಾದನೆಯನ್ನು ಪ್ರಾಯೋಜಿಸುತ್ತಿದೆ. ಇದನ್ನು ನಾವು ಜಗಜ್ಜಾಹೀರುಗೊಳಿಸಬೇಕಾಗಿದೆ. ಹೀಗಾಗಿ ಪಾಕಿಸ್ತಾನದ ಜೊತೆ ಕ್ರಿಕೆಟ್ ಆಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ.
2009ರಿಂದ ಪಾಕಿಸ್ತಾನದ ಕ್ರಿಕೆಟ್ ಆಟಗಾರರಿಗೆ ಐಪಿಎಲ್ನಲ್ಲಿ ಭಾಗವಹಿಸಲು ಅನುಮತಿಯನ್ನು ಭಾರತ ನೀಡುತ್ತಿಲ್ಲ. ಪಾಕಿಸ್ತಾನ ಆಟಗಾರರು ತೀವ್ರ ಉತ್ಸುಕರಾಗಿದ್ದರೂ ಭಾರತ ಸರ್ಕಾರ ಹಾಗೂ ಬಿಸಿಸಿಐ ಇವರ ಬೇಡಿಕೆ ಮಣಿಯಲಿಲ್ಲ ಎನ್ನುವುದು ವಿಶೇಷ. ಈ ನಡುವೆಯೇ ಉಭಯ ರಾಷ್ಟ್ರಗಳ ನಡುವೆ ಕ್ರಿಕೆಟ್ ಪಂದ್ಯ ನಡೆಯುವ ಬಗ್ಗೆ ಮಾತುಕತೆ ನಡೆದಿದ್ದರೂ, ಎಲ್ಲಿ ಪಂದ್ಯ ಆಡಿಸಬೇಕು ಎಂಬ ಪ್ರಶ್ನೆಗೆ ಸ್ಪಷ್ಟತೆ ಸಿಗದ ಹಿನ್ನೆಲೆಯಲ್ಲಿ ಪಂದ್ಯಾವಳಿಯಿಂದ ಭಾರತ ಹಾಗೂ ಪಾಕಿಸ್ತಾನ ಎರಡೂ ಸರ್ಕಾರಗಳು ಹಿಂದೆ ಸರಿದಿದ್ದವು.
ಕೆಲ ದಿನಗಳ ಹಿಂದಷ್ಟೇ ಭಾರತದ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಅವರು ಪಾಕಿಸ್ತಾನ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಯಾಕೆ ಭಾಗವಹಿಸುತ್ತಿಲ್ಲ ಎಂಬ ಪ್ರಶ್ನೆಗೆ, ನೀವು ನಿಜವಾಗಿಯೂ ಭಾರತೀಯರಾಗಿದ್ದರೆ ಈ ಪ್ರಶ್ನೆ ಕೇಳುತ್ತಿರಲಿಲ್ಲ ಎಂದು ತಿರುಗೇಟು ನೀಡಿದ್ದರು.
Comments are closed.